ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಕರು ರಾಷ್ಟ್ರ ನಿರ್ಮಾತೃಗಳಾಗಿದ್ದು, ಸಮರ್ಥ ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಉಪನ್ಯಾಸಕಿ ಪ್ರಿಯಾಂಕಾ ನಡುವಿನಮನಿ ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತೋಂಟದ ಸಿದ್ಧಲಿಂಗಶ್ರೀಗಳ ಕನ್ನಡ ಭವನದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಗುರುತಿಸಿ, ಅವರಿಗೆ ಸೂಕ್ತ ಅವಕಾಶ ಕಲ್ಪಿಸಿ ಉತ್ತಮ ನಾಗರಿಕರನ್ನಾಗಿ ರೂಪಿಸುವ ಹೊಣೆ ಶಿಕ್ಷಕರ ಮೇಲಿದೆ. ಗುರುಕುಲ ಪದ್ಧತಿಯಿಂದ ಎಐ ಶಿಕ್ಷಣದವರೆಗೆ ವ್ಯವಸ್ಥೆ ಬದಲಾಗಿದ್ದರೂ ಶಿಕ್ಷಕರ ಮಹತ್ವ ಕಡಿಮೆಯಾಗಿಲ್ಲ. ಯಾವುದೇ ತಂತ್ರಜ್ಞಾನ ಶಿಕ್ಷಕರಿಗೆ ಪರ್ಯಾಯವಾಗಲಾರದು, ಅವು ಪೂರಕವಾಗಿ ಕಾರ್ಯನಿರ್ವಹಿಸಬಹುದೇ ಹೊರತು ವಿದ್ಯಾರ್ಥಿಗಳಲ್ಲಿ ಭಾವನೆಗಳನ್ನು ತುಂಬಲು ಸಾಧ್ಯವಿಲ್ಲ ಎಂದರು.
ಆರ್ಡಿಪಿಆರ್ ವಿಶ್ವವಿದ್ಯಾಲಯದ ಕುಲಸಚಿವ ಡಾ. ಅಮರೇಶ ಯತಗಲ್ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ವಿಕಾಸಕ್ಕೆ ಶಿಕ್ಷಕರ ಸೇವೆ ಸ್ಮರಣೀಯವಾಗಿದೆ ಎಂದರು.
ಉಪನ್ಯಾಸಕರ ಸಂಘದ ಅಧ್ಯಕ್ಷ ಎಸ್.ಎಸ್. ಸೋಮಣ್ಣವರ ಮಾತನಾಡಿ, ಶಿಕ್ಷಕರಿಗೆ ಬೋಧನೆಯೇತರ ಕೆಲಸಗಳ ಹೊರೆ ಹೆಚ್ಚಿದ್ದು, ಇದು ಗುಣಮಟ್ಟದ ಶಿಕ್ಷಣಕ್ಕೆ ಅಡಚಣೆಯಾಗಿದೆ. ಕೆಳಹಂತದಿಂದಲೇ ವಿದ್ಯಾರ್ಥಿಗಳ ಸಾಮರ್ಥ್ಯ ಬೆಳೆಸುವ ಯೋಜನೆ ರೂಪಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ, ಶಾಲೆಗಳು ಸಂವಿಧಾನದ ಆಶಯಗಳನ್ನು ಈಡೇರಿಸುವ ಪವಿತ್ರ ತಾಣಗಳಾಗಿವೆ. ವ್ಯಕ್ತಿ ಮತ್ತು ಸಮಾಜದ ಉನ್ನತಿಗೆ ಶಿಕ್ಷಕರ ಸೇವೆ ಮಹತ್ವದ್ದಾಗಿದೆ ಎಂದರು.
ಈ ಸಂದರ್ಭದಲ್ಲಿ ಡಾ. ಅಮರೇಶ ಯತಗಲ್ ಹಾಗೂ ಎಸ್.ಎಸ್. ಸೋಮಣ್ಣವರ ಅವರನ್ನು ಸನ್ಮಾನಿಸಲಾಯಿತು. ರಾಹುಲ ಗಿಡ್ನಂದಿ ನಿರೂಪಿಸಿದರು. ಕಿಶೋರಬಾಬು ನಾಗರಕಟ್ಟಿ ಸ್ವಾಗತಿಸಿದರು. ಸತೀಶ ಚನ್ನಪ್ಪಗೌಡರ ವಂದಿಸಿದರು. ಹಲವು ಗಣ್ಯರು ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.



