HomeGadag Newsವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಗುರುತಿಸಿ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಕರು ಶ್ರಮಿಸಲಿ: ಶ್ರೀ ಮುಕ್ತಿಮುನಿ ಶಿವಾಚಾರ್ಯರು

ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಗುರುತಿಸಿ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಕರು ಶ್ರಮಿಸಲಿ: ಶ್ರೀ ಮುಕ್ತಿಮುನಿ ಶಿವಾಚಾರ್ಯರು

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ, ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸಿ, ಅವರ ಭವಿಷ್ಯ ರೂಪಿಸುವುದರ ಜತೆಗೆ ದೇಶದ ಸತ್ಪ್ರಜೆಗಳನ್ನು ನಿರ್ಮಿಸುವ ಮಹತ್ತರ ಜವಾಬ್ದಾರಿ ಹೊಂದಿರುವ ರಾಷ್ಟ್ರ ನಿರ್ಮಾತೃಗಳು ಎಂದು ಮುಕ್ತಿಮಂದಿರ ಧರ್ಮಕ್ಷೇತ್ರದ ಶ್ರೀ ವಿಮಲ ರೇಣುಕ ವೀರ ಮುಕ್ತಿಮುನಿ ಶಿವಾಚಾರ್ಯರು ಹೇಳಿದರು.

ಪಟ್ಟಣದ ಶ್ರೀ ವೀರ ಗಂಗಾಧರ ಕಲ್ಯಾಣ ಮಂಟಪದಲ್ಲಿ ಜಿಪಂ, ತಾಲೂಕಾಡಳಿತ ಹಾಗೂ ಶಿರಹಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 138ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಲಕ್ಷ್ಮೇಶ್ವರ-ಶಿರಹಟ್ಟಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಹಿಂದೆ ಶಾಲೆಗಳನ್ನು ‘ಸಾಲಿಗುಡಿ’ ಎಂದು ಗೌರವಿಸಲಾಗುತ್ತಿತ್ತು. ಆ ಪರಂಪರೆಯ ಮಹತ್ವವನ್ನು ಅರಿತು ಶಿಕ್ಷಕರು ಕಾರ್ಯನಿರ್ವಹಿಸಬೇಕು. ಸಮಾಜದಲ್ಲಿನ ಮೌಢ್ಯ, ಅಂಧಕಾರ ಹಾಗೂ ಮೂಢನಂಬಿಕೆಗಳನ್ನು ಹೋಗಲಾಡಿಸಿ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಶಿಕ್ಷಕರು ಶ್ರಮಿಸಬೇಕು. ಮಕ್ಕಳು ಹಾಗೂ ಸಮಾಜ ನೀಡುವ ಗೌರವವೇ ಶಿಕ್ಷಕರಿಗೆ ದೊರೆಯುವ ಶ್ರೇಷ್ಠ ಪ್ರಶಸ್ತಿ ಎಂದರು.

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಕ, ತತ್ವಜ್ಞಾನಿ ಹಾಗೂ ರಾಜಕಾರಣಿಯಾಗಿ ದೇಶಕ್ಕೆ ಮಾದರಿಯಾಗಿದ್ದರು. ನಮ್ಮ ನೆಲದಲ್ಲಿ ನಡೆದಾಡಿದ ದೇವರೆಂದೇ ಗೌರವಿಸಲ್ಪಟ್ಟ ಲಿಂ. ವೀರ ಗಂಗಾಧರ ಜಗದ್ಗುರುಗಳು ಡಾ. ರಾಧಾಕೃಷ್ಣನ್ ಅವರನ್ನು ರಾಷ್ಟ್ರಪತಿ ಭವನದಲ್ಲಿಈ ಗೌರವಿಸಿದ್ದು ನಮ್ಮ ನೆಲದ ಹೆಮ್ಮೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಶಿಕ್ಷಕರ ಕೊರತೆ ಹಾಗೂ ಸೀಮಿತ ಸೌಲಭ್ಯಗಳ ನಡುವೆಯೂ ಶಿರಹಟ್ಟಿ ಮತಕ್ಷೇತ್ರದಲ್ಲಿ ಶಿಕ್ಷಕರ ಪ್ರಾಮಾಣಿಕ ಸೇವೆಯಿಂದ ಉತ್ತಮ ಶೈಕ್ಷಣಿಕ ಸಾಧನೆ ಮಾಡಿರುವುದು ಶ್ಲಾಘನೀಯ ಎಂದರು.

ಶಿಕ್ಷಕರು ಕರ್ತವ್ಯಪ್ರಜ್ಞೆ, ನಿರಂತರ ಅಧ್ಯಯನಶೀಲತೆ ಹಾಗೂ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪರಿಣಾಮಕಾರಿ ಬೋಧನೆಗೆ ಮುಂದಾಗಬೇಕು. ಮಕ್ಕಳ ಭವಿಷ್ಯದ ಜತೆಗೆ ದೇಶದ ಭವಿಷ್ಯ ರೂಪಿಸುವ ಶಕ್ತಿ ಶಿಕ್ಷಕರಲ್ಲಿದೆ. ಕ್ಷೇತ್ರದ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

ಪ್ರತಿವರ್ಷ ಶಿಕ್ಷಕರ ದಿನಾಚರಣೆಯಂದೇ ನಿವೃತ್ತ ಶಿಕ್ಷಕರಿಗೆ ಸನ್ಮಾನದ ಜತೆಗೆ ಪಿಂಚಣಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಒಪಿಎಸ್ ಜಾರಿ ಸೇರಿದಂತೆ ಶಿಕ್ಷಕರ ವಿವಿಧ ಸಮಸ್ಯೆಗಳ ಪರಿಹಾರ ಹಾಗೂ ನ್ಯಾಯಯುತ ಬೇಡಿಕೆಗಳಿಗೆ ಧ್ವನಿಯಾಗಿ ನಿಲ್ಲುವುದಾಗಿ ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಶಿಕ್ಷಕರು ತಮ್ಮ ವೃತ್ತಿಪರ ಪ್ರಾಮಾಣಿಕತೆಯ ಆತ್ಮಾವಲೋಕನ ಮಾಡಿಕೊಂಡು ನಿರಂತರ ಅಧ್ಯಯನಶೀಲ, ಅನುಕರಣೀಯ ಹಾಗೂ ಕೌಶಲ್ಯವಂತರಾಗಬೇಕು. ದೇಶದ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಸೇವೆ ಸಲ್ಲಿಸುವ ಶಿಕ್ಷಕರಿಗೆ ಸರ್ಕಾರದ ಕೆಲ ನೀತಿಗಳು ಮಾರಕವಾಗಿ ಪರಿಣಮಿಸುತ್ತಿವೆ ಎಂದರು.

ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ ಮಾತನಾಡಿ, ಖಾಸಗಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚುತ್ತಿದ್ದರೆ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ಸರ್ಕಾರಿ ಶಾಲೆಗಳತ್ತ ಹೆಚ್ಚಿನ ಗಮನ ಹರಿಸಬೇಕು ಎಂದರು.

ಬಿಇಒ ಶಿವರಾಜ ಶಿಮಿಕೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ಅಗಡಿ ಫೌಂಡೇಶನ್ ವತಿಯಿಂದ ಲಕ್ಷ್ಮೇಶ್ವರದ ಸರ್ಕಾರಿ ಶಾಲೆ ನಂ.1ರ ಮೂಲಸೌಕರ್ಯ ಅಭಿವೃದ್ಧಿಗೆ ₹50 ಲಕ್ಷ ದೇಣಿಗೆ ನೀಡಿರುವುದನ್ನು ಸ್ಮರಿಸಿದರು. ಹರಿಹರದ ಹಿರಿಯ ಸಾಹಿತಿ ಪ್ರೊ. ಎಚ್.ಎ. ಭಿಕ್ಷಾವರ್ತಿಮಠ ಉಪನ್ಯಾಸ ನೀಡಿದರು.

ಮಾಜಿ ಶಾಸಕ ರಾಮಣ್ಣ ಲಮಾಣಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ವೀರಯ್ಯ ಮಠಪತಿ ಹಾಗೂ ನಾಗರಾಜ ಮಡಿವಾಳರ ಮಾತನಾಡಿದರು.

ಸಮಾರಂಭದಲ್ಲಿ ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ತಾಲೂಕಿನ 50ಕ್ಕೂ ಹೆಚ್ಚು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿಧನರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವೇದಿಕಾ ಭರತನಾಟ್ಯ ಶಾಲೆಯ ವಿದ್ಯಾರ್ಥಿಗಳು ಭರತನಾಟ್ಯ ಪ್ರದರ್ಶಿಸಿದರು.

ಒಡೆಯರ ಮಲ್ಲಾಪುರ ಎಂಡಿಆರ್‌ಎಸ್ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ, ಮಲ್ಲು ಕಳಸಾಪುರ ರೈತಗೀತೆ ಹಾಡಿದರು.

ಶಿಕ್ಷಣ ಸಂಯೋಜಕ ಆರ್.ಬಿ. ಜೋಶಿ, ನೌಕರರ ಸಂಘದ ಅಧ್ಯಕ್ಷ ಗುರುರಾಜ ಹವಳದ, ಹೆಚ್.ಎಸ್. ರಾಮನಗೌಡ್ರ, ಎಸ್.ಕೆ. ಹವಾಲ್ದಾರ, ಮಂಜುನಾಥ ಕೊಕ್ಕರಗುಂದಿ, ನಾಗರಾಜ ಲಕ್ಕುಂಡಿ, ಬಿ.ಎಂ. ಕುಂಬಾರ, ಉಮೇಶ ನೇಕಾರ, ಶ್ರೀಕಾಂತ ನಂದೆಣ್ಣವರ, ಹೆಚ್.ಎಂ. ಸೊಪ್ಪಿನ, ಎಸ್.ಎಫ್. ಮಠದ, ಪರಪ್ಪ ಕರಿಗಾರ, ಜಿ.ಎನ್. ಕೋಡಬಾಳ, ಮೋಹನ ಮಾಂಡ್ರೆ, ಸುನಂದಾ ಹಿರೇಮಠ, ಮುತ್ತಣ್ಣ ಹುಬ್ಬಳ್ಳಿ, ಗೀತಾ ಹಳ್ಳಯಾಳ, ಎಸ್.ಎಫ್. ತಳವಾರ, ನವೀನ ಅಂಗಡಿ, ವಾಸು ದೀಪಾಲಿ, ಶ್ರೀನಿವಾಸ ಮತ್ತೂರ, ಎಲ್.ಎಸ್. ಅರಳಹಳ್ಳಿ ಸೇರಿದಂತೆ ಎರಡೂ ತಾಲೂಕಿನ ಶಿಕ್ಷಕರು, ವಿವಿಧ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿಕ್ಷಕರ ಸಂಘದ ಎಂ.ಎನ್. ಭರಮಗೌಡ್ರ ಸ್ವಾಗತಿಸಿದರು. ಶಿಕ್ಷಕರಾದ ಎಚ್.ಡಿ. ನಿಂಗರಡ್ಡಿ, ರತ್ನಾ ಕುಂಬಾರ, ಎನ್.ಎನ್. ಶಿಗ್ಲಿ ಹಾಗೂ ಶ್ರೀಪಾಲ್ ಘೋಂಗಡಿ ನಿರೂಪಿಸಿದರು. ಶರಣಬಸವಗೌಡ ಪಾಟೀಲ ವಂದಿಸಿದರು.

ಶಿಕ್ಷಕರು ಕೇವಲ ಪಾಠ ಹೇಳುವವರಲ್ಲ, ವಿದ್ಯಾರ್ಥಿಗಳಲ್ಲಿರುವ ಸುಪ್ತ ಶಕ್ತಿಯನ್ನು ಗುರುತಿಸಿ, ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವ ಮೂಲಕ ರಾಷ್ಟ್ರದ ಭವಿಷ್ಯ ಕಟ್ಟುವ ಮಹಾನ್ ಶಿಲ್ಪಿಗಳು.

— ಶ್ರೀ ವಿಮಲ ರೇಣುಕ ವೀರ ಮುಕ್ತಿಮುನಿ ಶಿವಾಚಾರ್ಯರು

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img