ವಿಜಯಸಾಕ್ಷಿ ಸುದ್ದಿ, ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ಶೈಕ್ಷಣಿಕ ಸುಧಾರಣೆಗಾಗಿ ಜಿಲ್ಲಾಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆ ಮಿಷನ್ ವಿದ್ಯಾಕಾಶಿ ಯೋಜನೆ ಮೂಲಕ ವಿನೂತನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಶಿಕ್ಷಕರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ, ಪ್ರಾಥಮಿಕ ಶಾಲೆ ಹಂತದಲ್ಲಿಯೇ ಮಕ್ಕಳನ್ನು ಸುಧಾರಿಸಲು ಪ್ರಯತ್ನಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಹೇಳಿದರು.
ಅವರು ಶುಕ್ರವಾರ ನಗರದ ಸರಕಾರಿ ಮಹಿಳಾ ತರಬೇತಿ ಕೇಂದ್ರ (ಟಿಸಿಡಬ್ಲು) ಆವರಣದಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಪ್ರಸಕ್ತ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಿಂದಿನ ಶಿಕ್ಷಣ ಪದ್ಧತಿಗೂ ಪ್ರಸ್ತುತ ಶಿಕ್ಷಣ ಪದ್ಧತಿಗೂ ಹೆಚ್ಚು ವ್ಯತ್ಯಾಸವಿದೆ. ಪ್ರಾಥಮಿಕ ಶಾಲಾ ಹಂತದಲ್ಲಿ ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ಕೋಡುವುದು ಅವಶ್ಯವಿದೆ. ಸರಕಾರಿ ಶಾಲೆಗಳಲ್ಲಿ ನಾವು ಇನ್ನೂ ಉತ್ತಮವಾದ ಫಲಿತಾಂಶವನ್ನು ಕೊಟ್ಟರೆ ಶಾಲೆಯಲ್ಲಿನ ಮಕ್ಕಳ ಸಂಖ್ಯೆ ಹೆಚ್ಚಾಗುತ್ತದೆ. ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾಗಿದೆ. ಶಿಕ್ಷಕರು ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಿದರೆ ಅವರ ಮುಂದಿನ ಭವಿಷ್ಯ ಉತ್ತಮವಾಗುತ್ತದೆ ಎಂದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿರುವ ಶಿಕ್ಷಕರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದರು.
ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿ ಎಸ್.ಎಂ. ಹುಡೇದಮನಿ ಸ್ವಾಗತಿಸಿದರು. ಧಾರವಾಡ ಶಹರದ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ ಹಾಗೂ ಸಹ ಸಮನ್ವಯಾಧಿಕಾರಿ ರೇಣುಕಾ ಅಮಲಜೇರಿ ವೇದಿಕೆಯಲ್ಲಿ ಇದ್ದರು. ಎಸ್ಡಿಎಂಸಿ ಅಧ್ಯಕ್ಷೆ ಸೀಮಾ ಹುಗ್ಗಿ, ಧಾರವಾಡ ಟಿಸಿಡಬ್ಲು ಪ್ರಭಾರಿ ಪ್ರಾಚಾರ್ಯೆ ದಿಪ್ತಿ ಅಪಯ್ಯ, ಎಸ್ಡಿಎಮ್ಸಿ ಅಧ್ಯಕ್ಷ ಖ್ವಾಜಾಮಿಯಾ ದಫೇದಾರ ಹಾಗೂ ಮುಖ್ಯೋಪಾಧ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮುಖ್ಯ ಅತಿಥಿಗಳಾಗಿದ್ದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ಮಾತನಾಡಿ, ಶಿಕ್ಷಕರು ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಸಬೇಕಾದರೆ ಅವರಿಗೆ ಭಾಷಾ ಬಳಕೆ, ವ್ಯಾಕರಣವನ್ನು ಅರ್ಥವಾಗುವಂತೆ ಕಲಿಸಬೇಕು. ಇಂದು ಗುಣಮಟ್ಟದ ಶಿಕ್ಷಣ ಅವಶ್ಯವಿದೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗದ ಹಾಗೆ ನೋಡಿಕೊಳ್ಳುವ ಜವಾಬ್ದಾರಿಯೂ ಶಿಕ್ಷಕರಿಗೆ ಇರುತ್ತದೆ. ಶಿಕ್ಷಕರಾದವರು ಮಕ್ಕಳಲ್ಲಿ ತಾರತಮ್ಯ ಕಾಣದೆ, ಎಲ್ಲರೂ ಒಂದೇ ಎಂದು ತಿಳಿದು ಪ್ರೀತಿ ವಿಶ್ವಾಸದಿಂದ ಬೆಳೆಸಬೇಕು ಎಂದರು.