ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ತಾಲೂಕಿನ ಕೋಗನೂರ ಗ್ರಾಮದಲ್ಲಿ ಮೂಲಸೌಕರ್ಯ ಹಾಗೂ ಗಾಂವಠಾಣಾ ವಿಸ್ತರಣೆ ಸಲುವಾಗಿ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದ ಗ್ರಾಮಸ್ಥರಿಗೆ ಮಂಗಳವಾರ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಗ್ರಾಮಕ್ಕೆ ತೆರಳಿ ಗ್ರಾಮಸ್ಥರಿಗೆ ಬೇಡಿಕೆ ಈಡೇರಿಸುವ ಭರವಸೆಯನ್ನು ನೀಡಿ ಮತದಾರರ ಪ್ರತಿಜ್ಞಾವಿಧಿ ಬೋಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕುರಿತು ಮಾತನಾಡಿದ ತಹಸೀಲ್ದಾರ ಅನಿಲ ಬಡಿಗೇರ, ಕೋಗನೂರ ಗ್ರಾಮಸ್ಥರು ಗ್ರಾಮದ ಮೂಲಸೌಕರ್ಯಕ್ಕೆ ಹಾಗೂ ಗಾಂವಠಾಣಾ ಜಾಗೆಯ ವಿಸ್ತರಣೆ ಸಲುವಾಗಿ ಚುನಾವಣಾ ಬಹಿಷ್ಕಾರ ಹಾಕುವುದಾಗಿ ಮನವಿಯನ್ನು ಸಲ್ಲಿಸಿದ್ದರು. ಇವರ ಅರ್ಜಿಯನ್ನು ಪರಿಶೀಲನೆ ನಡೆಸಿದಾಗ, ಗ್ರಾಮದಲ್ಲಿಯ ಗಾಂವಠಾಣಾ ಜಾಗೆಯು 1960ರಲ್ಲಿಯೇ ಭೂಸ್ವಾಧೀನ ಆಗಿದ್ದು ಕಂಡು ಬರುತ್ತಿದೆ. ಹೆಚ್ಚಿನ ಪರಿಶೀಲನೆ ನಡೆಸಿ, ಗ್ರಾಮಸ್ಥರ ಬೇಡಿಕೆಯನ್ನು ಈಡೇರಿಸಲು ಕ್ರಮ ವಹಿಸುವ ಬಗ್ಗೆ ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಡಲಾಯಿತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದೊಂದು ಮತವೂ ಸಹ ಅತ್ಯಮೂಲ್ಯವಾಗಿದ್ದರಿಂದ ಯಾವುದೇ ಕಾರಣಕ್ಕೂ ಚುನಾವಣಾ ಮತದಾನದ ಬಹಿಷ್ಕಾರ ಮಾಡದಂತೆ ಮನವೊಲಿಸಿ ಮತದಾನದ ಮಹತ್ವವನ್ನು ಸಾರುವ ಮತದಾರರ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಈ ಬಗ್ಗೆ ಗ್ರಾಮಸ್ಥರು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಶಿರಹಟ್ಟಿ-65 ಸಹಾಯಕ ಚುನಾವಣಾಧಿಕಾರಿ ಅಮಿತ್ ಬಿದರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.