ಮಂಗಳೂರು:- ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆನ್ನಲ್ಲೇ ಮಂಗಳೂರಿನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ ಆಗಿದ್ದು, ಮೂವರಿಗೆ ಚಾಕು ಇರಿಯಲಾಗಿದೆ. ಮಂಗಳೂರಿನ ಸುತ್ತಮುತ್ತ ಕಣ್ಣೂರು, ಕೊಂಚಾಡಿ ಮತ್ತು ಉಳ್ಳಾಲದಲ್ಲಿ ಚಾಕು ಇರಿತ ಪ್ರಕರಣಗಳು ವರದಿಯಾಗಿವೆ.
ಉಳ್ಳಾಲದ ಫೈಝಲ್, ಕೊಂಚಾಡಿಯ ಮೊಹ್ಮದ್ ಲುಕ್ಮಾನ್, ಕಣ್ಣೂರಿನ ಇರ್ಶಾದ್ಗೆ ಎಂಬುವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಮೂವರಿಗೂ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮಂಗಳೂರು ವ್ಯಾಪ್ತಿಯಲ್ಲಿ ತಡರಾತ್ರಿ ಮತ್ತು ಮುಂಜಾನೆ ಈ ಪ್ರಕರಣಗಳು ನಡೆದಿವೆ.
ಸುಹಾಸ್ ಶೆಟ್ಟಿ ಹತ್ಯೆ:-
ಉಡುಪಿ ತಾಲೂಕಿನ ಆತ್ರಾಡಿಯಲ್ಲಿ ಗುರುವಾರ ರಾತ್ರಿ ಓರ್ವ ಮುಸ್ಲಿಂ ಯುವಕನನ್ನು ಕೊಲೆ ಮಾಡಲು ಯತ್ನಿಸಲಾಗಿದೆ. ಚಾಲಕ ಅಬೂಬಕ್ಕರ್ ಆಟೋ ಅಡ್ಡಗಟ್ಟಿದ ದುಷ್ಕರ್ಮಿಗಳು ತಲ್ವಾರ್ ಮತ್ತು ಬಾಟಲ್ನಿಂದ ಹಲ್ಲೆ ಮಾಡಲು ಮುಂದಾಗಿದ್ದಾರೆ. ಅಬೂಬಕ್ಕರ್ ತಪ್ಪಿಸಿಕೊಂಡು ಹೋಗಿ ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ಹಿರಿಯಡಕ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳಾದ ಸುಶಾಂತ್, ಸಂದೇಶ್ ಪೂಜಾರಿ ಬಂಧಿತರು.
ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ, ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಕೊಲೆ ಯತ್ನ ಎಂದು ಆರೋಪಿಗಳು ಹೇಳಿದ್ದಾರೆ. ಈ ಸಂಬಂಧ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.