ಬೆಂಗಳೂರು:- ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಮಂಗಳವಾರ ನಡೆದ ಭಯೋತ್ಪಾದ ದಾಳಿ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ಕರ್ನಾಟಕದ ಅನೇಕ ಪ್ರವಾಸಿಗರ ಸ್ಥಿತಿ ಅತಂತ್ರವಾಗಿದೆ.
ಇನ್ನೂ ಉಗ್ರರ ಭೀಕರ ದಾಳಿಯಲ್ಲಿ ಮೂವರು ಕನ್ನಡಿಗರು ಮೃತಪಟ್ಟಿದ್ದಾರೆ. ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಉಗ್ರರ ದಾಳಿ ಬಗ್ಗೆ ತಿಳಿಯುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಮಂಗಳವಾರ ರಾತ್ರಿ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದರು. ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದರು. ಇದರ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಚೇತನ್ ನೇತೃತ್ವದ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ಕಳಿಸಿಕೊಡಲಾಗಿದೆ. ದೆಹಲಿ ಕರ್ನಾಟಕ ಭವನದ ಆಯುಕ್ತರನ್ನೂ ಅರ್ಲಟ್ ಮಾಡಲಾಗಿದೆ. ಜೊತೆಗೆ ಇಡೀ ಕಾರ್ಯಾಚರಣೆಯ ಜವಾಬ್ದಾರಿಯನ್ನು ಸಿಎಂ ಸಿದ್ದರಾಮಯ್ಯ, ಕಾರ್ಮಿಕ ಸಚಿವ ಸಂತೋಷ್ ಲಾಡ್ಗೆ ವಹಿಸಿದ್ದಾರೆ.
ಸಿಎಂ ಸೂಚನೆ ಬೆನ್ನಲ್ಲೇ ಸಚಿವ ಸಂತೋಷ್ ಲಾಡ್ ಹುಬ್ಬಳ್ಳಿಯಿಂದ ದೆಹಲಿಗೆ ತೆರಳಿ ಅಲ್ಲಿಂದ ಕಾಶ್ಮೀರಕ್ಕೆ ವಿಶೇಷ ವಿಮಾನದಲ್ಲಿ ತೆರಳಿದ್ದಾರೆ. ಕಾಶ್ಮೀರದ ಸ್ಥಳೀಯ ಆಡಳಿತ, ಭದ್ರತಾ ಪಡೆಗಳು ಮತ್ತು ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿ ಇರಲಿದ್ದು, ಕನ್ನಡಿಗರಿಗೆ ಅಗತ್ಯವಿರುವ ವೈದ್ಯಕೀಯ ಸೌಲಭ್ಯ, ಸುರಕ್ಷಿತ ಸ್ಥಳಾಂತರ ಮತ್ತು ಇತರ ಸಹಾಯವನ್ನು ಒದಗಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.



