ನಂದಿಗ್ರಾಮ: ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಜಗನ್ನಾಥ ರಥಯಾತ್ರೆ ವೇಳೆ ಭೀಕರ ಅಪಘಾತ ಸಂಭವಿಸಿದೆ.
ರಥದ ಮೇಲ್ಭಾಗವು 11,000 ವೋಲ್ಟ್ ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ, ರಥದ ಹಗ್ಗ ಎಳೆಯುತ್ತಿದ್ದ 15ಕ್ಕೂ ಹೆಚ್ಚು ಭಕ್ತರು ವಿದ್ಯುತ್ ಆಘಾತಕ್ಕೊಳಗಾಗಿದ್ದಾರೆ.
ನಂದಿಗ್ರಾಮದ ತೆಖಲಿ ರಥಯಾತ್ರೆ ಉತ್ಸವ ಸಮಿತಿ ಆಯೋಜಿಸಿದ್ದ ಮೆರವಣಿಗೆಯಲ್ಲಿ ಈ ಘಟನೆ ನಡೆದಿದೆ. ಭಕ್ತರು ರಥವನ್ನು ಎಳೆಯುತ್ತಿದ್ದ ವೇಳೆ ರಸ್ತೆಯ ಮೇಲಿದ್ದ ವಿದ್ಯುತ್ ತಂತಿಗೆ ರಥದ ಮೇಲ್ಭಾಗ ತಗುಲಿದ್ದು, ಏಕಾಏಕಿ ವಿದ್ಯುತ್ ಪ್ರವಹಿಸಿದೆ.
ಘಟನೆಯಿಂದ ಹಲವು ಭಕ್ತರು ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ 10ಕ್ಕೂ ಹೆಚ್ಚು ಮಂದಿಯನ್ನು ನಂದಿಗ್ರಾಮ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಪರಿಶೀಲನೆ ಆರಂಭಿಸಿದ್ದಾರೆ.



