ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಸರ್ಕಾರದ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರಕುವಲ್ಲಿ ವಿಳಂಬವಾಗಬಾರದು. ಈ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕೆಂದು ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ತಿಳಿಸಿದರು.
ಶಿರಹಟ್ಟಿಯಲ್ಲಿ ಬುಧವಾರ ಜರುಗಿದ ಶಿರಹಟ್ಟಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಕಾಳಸಂತೆಯಲ್ಲಿ ಅಕ್ಕಿ ಅಕ್ರಮವಾಗಿ ಮಾರಾಟವಾಗುತ್ತಿರುವ ಕುರಿತು ದೂರು ಬರುತ್ತಿರುವ ಹಿನ್ನೆಲೆಯಲ್ಲಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗದಂತೆ ನೋಡಿಕೊಳ್ಳಬೇಕು. ಎಲ್ಲ ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ಅಕ್ಕಿ ಜೋಳ ವಿತರಣೆಯಾಗಬೇಕು. ಯಾವ ಬಡ ಕುಟುಂಬವೂ ಗೃಹಲಕ್ಷ್ಮೀ ಯೋಜನೆಯಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಮೀಕ್ಷೆ ನಡೆಸಬೇಕು ಎಂದರು.
ಬಸ್ ನಿಲ್ದಾಣದ ಆವರಣ, ಅಲ್ಲಿನ ಶೌಚಾಲಯ ಸ್ವಚ್ಛವಾಗಿರುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಯುವನಿಧಿ, ಗೃಹಜ್ಯೋತಿ ಯೋಜನೆಗಳು ಅರ್ಹರೆಲ್ಲರಿಗೂ ತಲುಪುವಂತೆ ಅಧಿಕಾರಿಗಳು ಶ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.
ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಸದಸ್ಯ ಅಶೋಕ ಮಂದಾಲಿ ಮಾತನಾಡಿ, ಸರ್ಕಾರದ ಮಹಾತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ದುರ್ಬಲರನ್ನು ಆರ್ಥಿಕ ಸಬಲರನ್ನಾಗಿ ಮಾಡುತ್ತಿವೆ. ಅರ್ಹರು ಯೋಜನೆಗಳಿಂದ ವಂಚಿತರಾಗದಂತೆ ಅಧಿಕಾರಿ ವಲಯ ಕ್ರಮ ವಹಿಸಬೇಕು ಎಂದರು.
ಸಭೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಶಿವನಗೌಡ ಪಾಟೀಲ, ಮಲ್ಲಪ್ಪ ಹುಯಿಲಗೊಳ, ಬುಡೇಸಾಬ ಮಕಾಂದರ್, ದೇವಪ್ಪ ಲಮಾಣಿ, ವಿಶಾಲಾ ಹೊನ್ನಣ್ಣವರ, ಸುರೇಶ್ ಕೆಂಚರಡ್ಡಿರ, ಶಕುಂತಲಾ ವಿಭೂತಿಮಠ, ಹೊನ್ನೇಶ್ ಪೋಟಿ, ಮಹಾವೀರ್ ಮಂಟಗನ, ಅಂದನಗೌಡ ಪಾಟೀಲ್, ಸೋಮನಗೌಡ ಮರಿಗೌಡರ ಸೇರಿದಂತೆ ಸಂಬಂಧಿತ ಇಲಾಖೆಯ ಮುಖ್ಯಸ್ಥರು ಭಾಗವಹಿಸಿದ್ದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಿರಹಟ್ಟಿ ತಾಲೂಕ ಗ್ಯಾರಂಟಿ ಸಮಿತಿ ಅಧ್ಯಕ್ಷ ವೀರಯ್ಯ ಮಠಪತಿ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಗಳು ಅವುಗಳ ಸಮರ್ಪಕ ಅನುಷ್ಠಾನದ ಕುರಿತು ಪರಾಮರ್ಶೆ ನಡೆಸಬೇಕು. ಅರ್ಹರಿಗೆ ನಿಗದಿತ ಯೋಜನೆಗಳ ಸೌಲಭ್ಯ ನಿಗದಿತ ಅವಧಿಯೊಳಗೆ ಲಭ್ಯವಾಗುವಂತೆ ಕ್ರಮ ವಹಿಸಬೇಕೆಂದು ಸೂಚಿಸಿದರು.