ಬೆಂಗಳೂರು: ಪಂಚ ಗ್ಯಾರಂಟಿಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಇದೀಗ ಆರ್ಥಿಕ ಒತ್ತಡಕ್ಕೆ ಸಿಲುಕಿರುವುದಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟವರ ಬ್ಯಾಂಕ್ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಅಂಶ ಬಹಿರಂಗವಾಗಿದ್ದು, ಒಟ್ಟು 2.30 ಲಕ್ಷ ಮೃತ ಫಲಾನುಭವಿಗಳ ಖಾತೆಗಳಿಗೆ ಸುಮಾರು 79 ಕೋಟಿ ರೂ. ಪಾವತಿಯಾಗಿರುವುದು ಬೆಳಕಿಗೆ ಬಂದಿದೆ. ಈ ಮೊತ್ತವನ್ನು ವಾಪಸ್ ಪಡೆಯಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕ್ರಮ ಕೈಗೊಂಡಿದ್ದು, ಈಗಾಗಲೇ 2.30 ಕೋಟಿ ರೂ. ಮರುಪಡೆಯಲಾಗಿದೆ. ಈ ಬೆಳವಣಿಗೆಯ ನಡುವೆ ಗ್ಯಾರಂಟಿ ಯೋಜನೆಗಳ ಅನುಷ್ಠಾನವೇ ಸರ್ಕಾರಕ್ಕೆ ಭಾರವಾಗುತ್ತಿದೆ ಎಂಬ ಮಾತುಗಳು ಆಡಳಿತ ವಲಯದಿಂದಲೇ ಕೇಳಿಬರುತ್ತಿವೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಕೊರತೆ ಉಂಟಾಗಿದೆ ಎಂದು ಸ್ವಪಕ್ಷದ ಶಾಸಕರು ಹಾಗೂ ಜನಪ್ರತಿನಿಧಿಗಳೇ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲೇ ಇತ್ತೀಚೆಗೆ ಸುಪ್ರೀಂ ಕೋರ್ಟ್ ಕೂಡ ಉಚಿತ ಹಾಗೂ ಗ್ಯಾರಂಟಿ ಯೋಜನೆಗಳು ದೇಶದ ಆರ್ಥಿಕತೆಗೆ ಮಾರಕವಾಗಬಹುದು ಎಂಬ ಆತಂಕ ವ್ಯಕ್ತಪಡಿಸಿತ್ತು. ಇದಾದ ಬಳಿಕ ರಾಜ್ಯದ ಡಿಸಿಎಂ ಡಿ.ಕೆ. ಶಿವಕುಮಾರ್ ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಬರ್ಡನ್ ಆಗಿವೆ ಎಂದು ಹೇಳಿದ್ದು, ಸಿಎಂ ಸಿದ್ದರಾಮಯ್ಯ ವರ್ಷಕ್ಕೆ 52 ಸಾವಿರ ಕೋಟಿ ರೂ.ಕ್ಕಿಂತ ಹೆಚ್ಚು ಹಣ ಅಗತ್ಯವಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಚಿವ ದಿನೇಶ್ ಗುಂಡೂರಾವ್ ಕೂಡ ಸರ್ಕಾರಕ್ಕೆ ಎಲ್ಲವೂ ಹೊರೆಯಾಗಿದೆ ಎಂಬ ಮಾತು ಆಡಿದ್ದು, ಗ್ಯಾರಂಟಿಗಳ ಆರ್ಥಿಕ ಪರಿಣಾಮವನ್ನು ಸರ್ಕಾರವೇ ಒಪ್ಪಿಕೊಂಡಂತಾಗಿದೆ.
ಆದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ, ಅವುಗಳನ್ನು ಮುಂದುವರಿಸಲಾಗುವುದು ಎಂದು ಸಿಎಂ, ಡಿಸಿಎಂ ಹಾಗೂ ಸಚಿವರು ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್, ಚುನಾವಣಾ ಪ್ರಣಾಳಿಕೆಯಲ್ಲಿ ಎಲ್ಲರೂ ಸೇರಿಯೇ ಗ್ಯಾರಂಟಿ ಘೋಷಣೆ ಮಾಡಿದ್ದೇವೆ, ಈಗ ಅವು ಹೊರೆಯಾಗಿವೆ ಎಂದು ಭಾಸವಾಗಿರಬಹುದು ಎಂದಿದ್ದಾರೆ. ಇದೇ ವೇಳೆ ಗ್ಯಾರಂಟಿ ಯೋಜನೆಗಳು ಹೊರೆಯಲ್ಲ ಎಂದು ಸಚಿವ ಎಂಬಿ ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ.
ಇತ್ತ ಆಡಳಿತ ಪಕ್ಷದ ಈ ಹೇಳಿಕೆಗಳ ವಿರುದ್ಧ ಭಾಜಪ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಶಾಸಕ ಅಶ್ವಥ್ ನಾರಾಯಣ್, ಗ್ಯಾರಂಟಿಗಳ ಮೇಲೆಯೇ ಸರ್ಕಾರಕ್ಕೆ ನಂಬಿಕೆ ಇಲ್ಲದಂತಾಗಿದೆ, ಗೊಂದಲ ಮೂಡಿಸದೆ ಸ್ಪಷ್ಟತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಗೃಹಲಕ್ಷ್ಮಿ ಯೋಜನೆಯಲ್ಲಿ 5,000 ಕೋಟಿ ರೂ. ನಾಪತ್ತೆಯಾಗಿದೆ ಎಂದು ಆರೋಪಿಸಿದ್ದು, ಖಾಲಿ ಹುದ್ದೆಗಳಿದ್ದರೂ ಯುವ ನಿಧಿ ಯೋಜನೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಬಿಜೆಪಿ ನಾಯಕ ಸಿಟಿ ರವಿ, ಜನ ಉದ್ಯೋಗ ಕೇಳುತ್ತಿದ್ದಾರೆ, ಭಿಕ್ಷೆ ಅಲ್ಲ ಎಂದು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ನಡುವೆ ಕೇಂದ್ರ ಸಚಿವ ಕುಮಾರಸ್ವಾಮಿ, ಗ್ಯಾರಂಟಿಗಳ ಭರವಸೆಯೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ನಾಡಿನ ಅಭಿವೃದ್ಧಿಗೆ ಪೂರಕವಾದ ಸ್ಪಷ್ಟ ಕಾರ್ಯಕ್ರಮಗಳು ಕಾಣುತ್ತಿಲ್ಲ. ಜನರಿಂದ ಸಂಗ್ರಹಿಸಿದ ತೆರಿಗೆ ಹಣದ ಸಮರ್ಪಕ ಬಳಕೆ ಆಗುತ್ತಿಲ್ಲ ಎಂಬುದೇ ಇಂದಿನ ಸ್ಥಿತಿಗೆ ಕಾರಣ ಎಂದು ಟೀಕಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳು ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಭವಿಷ್ಯ ಮತ್ತು ಸರ್ಕಾರದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಹೊಸ ಚರ್ಚೆಗೆ ಕಾರಣವಾಗಿವೆ.



