ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆಯು ಮುಂದೂಡಿಕೆಯಾಗಿದೆ. ಇದರ ಬದಲಾಗಿ ನಾಳೆ ವಿಧಾನಸೌಧದಲ್ಲಿ ನಡೆಯಲಿದೆ. ಹೌದು ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಕ್ಯಾಬಿನೆಟ್ ಸಭೆಯನ್ನು ವಿಧಾನಸೌಧದ ಸಭಾಂಗಣದಲ್ಲೇ ನಡೆಸಲು ತೀರ್ಮಾನಿಸಲಾಗಿದೆ.
ಸಿಎಂ ಸೂಚನೆಯ ಮೇರೆಗೆ ಕೊನೆಕ್ಷಣದಲ್ಲಿ ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನ ರದ್ದು ಮಾಡಲಾಗಿದೆ ಎಂದು ತಿಳಿದುಬಂದಿದೆ. ವಿಶೇಷ ಸಚಿವ ಸಂಪುಟ ಸಭೆಗಾಗಿ ಕಳೆದ ಒಂದು ವಾರದಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲೆಯ ಅಧಿಕಾರಿಗಳು ಶ್ರಮವಹಿಸಿ ಸಾಕಷ್ಟು ಕೆಲಸ ಕಾರ್ಯಗಳನ್ನು ಕೈಗೊಂಡಿದ್ದರು.
ನಂದಿ ಬೆಟ್ಟವನ್ನು ಮಧುವಣಗಿತ್ತಿಯಂತೆ ಶೃಂಗಾರ ಮಾಡಲಾಗಿತ್ತು. ಅಂತಿಮ ಹಂತದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಸಭೆ ದಿಢೀರ್ ರದ್ದಾದ ಹಿನ್ನೆಲೆ ಅಧಿಕಾರಿಗಳಲ್ಲಿ ನಿರಾಸೆ ಮೂಡಿಸಿದೆ.