ಪ್ರಾಧಿಕಾರಿದ ಪರಿಕಲ್ಪನೆ ರಾಜ್ಯಕ್ಕೆ ಮಾದರಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ ಹಾಗೂ ಪ್ರಾಧಿಕಾರದ ಅಭಿವೃದ್ಧಿಯ ಪರಿಕಲ್ಪನೆಯ ಅನಾವರಣವು ಒಂದು ಅದ್ಭುತ ಕಾರ್ಯಕ್ರಮವಾಗಿದೆ. ಈ ಯೋಜನೆಯು ಅಭಿವೃದ್ಧಿಗೆ ಪೂರಕವಾದ ಯೋಜನೆಯಾಗಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ ನುಡಿದರು.

Advertisement

ನಗರದ ಪಂಡಿತ ಡಾ. ಭೀಮಸೇನ ಜೋಶಿ ರಂಗಮಂದಿರದಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೆಶನಾಲಯ, ಜಿಲ್ಲಾಡಳಿತ ಗದಗ, ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರದ ವತಿಯಿಂದ ಮಂಗಳವಾರ ಜರುಗಿದ ಗದಗ-ಬೆಟಗೇರಿ ವ್ಯಾಪಾರ,ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರದ ಉದ್ಘಾಟನೆ ಹಾಗೂ ಪ್ರಾಧಿಕಾರದ ಅಭಿವೃದ್ಧಿಯ ಪರಿಕಲ್ಪನೆಯ ಅನಾವರಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದೊಂದು ಐತಿಹಾಸಿಕ ಯೋಜನೆಯಾಗಿದೆ. ಈ ಯೋಜನೆ ಪೂರ್ಣಗೊಂಡ ನಂತರ ಇಡೀ ಗದಗ-ಬೆಟಗೇರಿ ನಗರದ ಚಿತ್ರಣವೇ ಬದಲಾಗಲಿದೆ. ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲರ ಈ ಪರಿಕಲ್ಪನೆಯು ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಈ ಯೋಜನೆಗೆ ಬೇಕಾಗುವ ಅಗತ್ಯ ಅನುದಾನ ಒದಗಿಸುವದರ ಜೊತೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವದು. ಎಚ್.ಕೆ. ಪಾಟೀಲರ ದೂರದೃಷ್ಟಿಯಿಂದಾಗಿ ಗದಗ ಇಂದು ಎಲ್ಲ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಹೊಂದುತ್ತಿದೆ ಎಂದು ಹೇಳಿದರು.

ಕಾನೂನು, ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಮಾತನಾಡಿ, ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರದ ಉದ್ಘಾಟನೆ ಹಾಗೂ ಪ್ರಾಧಿಕಾರದ ಅಭಿವೃದ್ಧಿಯ ಪರಿಕಲ್ಪನೆಯ ಅನಾವರಣಗೊಳ್ಳುವ 34 ಎಕರೆ 32 ಗುಂಟೆ ಭೂಮಿ ಹೋರಾಟದ ಭೂಮಿಯಾಗಿದೆ ಎಂದರಲ್ಲದೆ, ಇಂತಹ ಸಾರ್ವಜನಿಕರ ಭೂಮಿಯನ್ನು ಉಳಿಸಿದ ಪ್ರಾಮಾಣಿಕ ಅಧಿಕಾರಿ, ಸಾರ್ವಜನಿಕರನ್ನು ಅಭಿನಂದಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ್ ಬಬರ್ಚಿ, ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಬಿ.ಬಿ. ಅಸೂಟಿ, ಗದಗ ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ನಗರಸಭೆ ಸದಸ್ಯರುಗಳು, ಮಾಜಿ ಶಾಸಕ ಡಿ.ಆರ್. ಪಾಟೀಲ, ರಾಮಣ್ಣ ಲಮಾಣಿ, ಮಾಜಿ ಸಂಸದರಾದ ಐ.ಜಿ. ಸನದಿ, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಜಿ.ಪಂ ಸಿಇಓ ಭರತ ಎಸ್ ಮುಂತಾದವರು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸ್ವಾಗತಿಸಿದರು. ವೆಂಕಟೇಶ ಅಲ್ಕೋಡ ಹಾಗೂ ತಂಡದವರು ನಾಡಗೀತೆ ಪ್ರಸ್ತುತಪಡಿಸಿದರು. ಇದೇ ಸಂದರ್ಭದಲ್ಲಿ `ವರ್ಷ ಎರಡು ಹರ್ಷ ನೂರು’ ಕಿರುಹೊತ್ತಿಗೆಯನ್ನು ಬಿಡುಗಡೆಗೊಳಿಸಲಾಯಿತು.

“ಈ ಯೋಜನೆಯ 19,33,000 ಚ.ಸೆ.ಮಿ. ಕಟ್ಟಡ ಕಾಮಗಾರಿ ಪ್ರದೇಶವಾಗಿದೆ. ಇಲ್ಲಿ ಉತ್ತಮ ಗುಣಮಟ್ಟದ ಕಟ್ಟಡ ಕಾಮಗಾರಿಗೆ 500 ಕೋಟಿ. ರೂ ಅನುದಾನದನ ಅಗತ್ಯವಿದೆ. ಈ ಯೋಜನೆ ಶೀಘ್ರದಲ್ಲಿಯೇ ಪ್ರಾರಂಭಿಸಿ ಮೂರು ವರ್ಷದೊಳಗಾಗಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುವದು. ಈ ಯೋಜನೆಯ ಯಶಸ್ವಿಗಾಗಿ ಎಲ್ಲರ ಸಹಕಾರ ಅಗತ್ಯವಾಗಿದ್ದು, ಸ್ಥಳೀಯರು ಇದರ ಹೆಚ್ಚಿನ ಸದುಪಯೋಗ ಪಡೆದುಕೊಳ್ಳಬೇಕು”

– ಎಚ್.ಕೆ. ಪಾಟೀಲ.

ಜಿಲ್ಲಾ ಉಸ್ತುವಾರಿ ಸಚಿವರು.

ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ಗದಗ-ಬೆಟಗೇರಿ ನಗರದ ಮಧ್ಯಭಾಗದಲ್ಲಿ ಹೊಸ ವಿಚಾರಗಳು, ಹೊಸ ಕಟ್ಟಡಗಳು ನಿರ್ಮಾಣವಾಗಬೇಕು ಎನ್ನುವದು ಎಲ್ಲರ ಕನಸಾಗಿತ್ತು. ಆ ಕನಸು ನನಸಾಗುವ ಕಾಲ ಕೂಡಿ ಬಂದಿದ್ದು, ಗದಗ ಜನ ಇದರ ಸದುಪಯೋಗ ಪಡೆದುಕೊಳ್ಳಬೇಕು. ವ್ಯಾಪಾರಸ್ಥರು ಬೇರೆ ನಗರಗಳಲ್ಲಿ ಹೂಡಿಕೆ ಮಾಡುವದಕ್ಕೂ ಮುಂಚೆ ಜಿಲ್ಲೆಯಲ್ಲಿ ಹೂಡಿಕೆ ಮಾಡಬೇಕು ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here