ಬೆಂಗಳೂರು: ನಮ್ಮ ದೇಶದ ಆರ್ಥಿಕ ಪ್ರಗತಿ ಅತ್ಯಂತ ಅದ್ಭುತವಾಗಿರುವುದಕ್ಕೆ ವಿಕಸಿತ ಭಾರತದ ನಿರ್ಮಾಣಕ್ಕೆ ಪಣ ತೊಟ್ಟಿರುವ ನರೇಂದ್ರ ಮೋದಿಯವರ ಆಡಳಿತ ಸೂತ್ರಗಳೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಅಭಿಪ್ರಾಯಪಟ್ಟರು.
ಗಣರಾಜ್ಯೋತ್ಸವದ ಪ್ರಯುಕ್ತ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಧ್ವಜಾರೋಹಣ ನೆರವೇರಿಸಿದ ಅವರು ಮಾತನಾಡಿ, ಭಾರತವು ಪ್ರತಿ ಕ್ಷೇತ್ರದಲ್ಲೂ ಸ್ವಾಭಿಮಾನಿ ರಾಷ್ಟ್ರವಾಗುತ್ತಿದೆ. ಹಾಲು ಉತ್ಪಾದನೆಯಲ್ಲಿ ಅದು ಜಗತ್ತಿನ ನಂಬರ್ ಒನ್ ರಾಷ್ಟ್ರವಾಗಿದೆ. ಮಾವಿನ ಹಣ್ಣು ಮತ್ತಿತರ ತೋಟಗಾರಿಕಾ ಬೆಳೆಗಳನ್ನು ಹಾಗೂ ಆಹಾರೋತ್ಪನ್ನಗಳನ್ನು ನಾವು ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಸರಬರಾಜು ಮಾಡುತ್ತಿದ್ದೇವೆ. ಚಂದ್ರಯಾನದಲ್ಲೂ ಭಾರತ ಮುಂಚೂಣಿಯಲ್ಲಿದೆ ಎಂದು ವಿವರಿಸಿದರು.
ಸುಮಾರು 50 ವರ್ಷಕ್ಕೂ ಹೆಚ್ಚು ಕಾಲ ದೇಶದ ಆಡಳಿತ ನಡೆಸಿದವರು ಸಂವಿಧಾನಕ್ಕೆ ಅಪಚಾರ ಮಾಡುವುದನ್ನು ನಾವು ನೋಡುತ್ತಿದ್ದೇವೆ. ಸಂವಿಧಾನಬದ್ಧವಾದ ವೇದಿಕೆಯನ್ನು ಮಾನ್ಯ ರಾಜ್ಯಪಾಲರ ಮೂಲಕ ದುರ್ಬಳಕೆ ಮಾಡಲು ಬೇಕಾದ ಪ್ರಯತ್ನಗಳನ್ನು ಮಾಡಿದ್ದಾರೆ. ಇದನ್ನು ಇಂದಿನ ವಿದ್ಯಮಾನಗಳನ್ನು ಗಮನಿಸಿದರೆ ಗೊತ್ತಾಗುತ್ತದೆ ಎಂದು ವಿಶ್ಲೇಷಿಸಿದರು.
ಗೌರವಾನ್ವಿತ ರಾಜ್ಯಪಾಲರ ಭಾಷಣದ ಮೂಲಕ ದ್ವೇಷ ಹರಡುವ ಪ್ರಯತ್ನ ಮಾಡಿದ್ದಾರೆ. ಇದೊಂದು ಕೆಟ್ಟ ಸಂಪ್ರದಾಯವಾಗಿದ್ದು, ಇದನ್ನು ಇಡೀ ರಾಜ್ಯದ ಜನತೆ ಖಂಡಿಸಬೇಕಾದ ದಿನವಿದು ಎಂದು ನುಡಿದರು. ಮೋದಿಜೀ ಅವರು ಪ್ರತಿ ಪ್ರಾದೇಶಿಕ ಭಾಷೆಗೆ ನೀಡುತ್ತಿದ್ದು, ಆಯಾ ರಾಜ್ಯದ ಸಂಸ್ಕøತಿ, ಸಂಸ್ಕಾರಗಳಿಗೆ ಉತ್ತೇಜನ ಕೊಡುತ್ತಿದ್ದಾರೆ ಎಂದು ವಿವರಿಸಿದರು.



