ಕಾಗವಾಡ:- ಪ್ರತ್ಯೇಕ ಉತ್ತರ ಕರ್ನಾಟಕದ ಕೂಗು ಮತ್ತೆ ಪ್ರತಿಧ್ವನಿಸಿದ್ದು, ಈ ಬಗ್ಗೆ ಕಾಗವಾಡ ಶಾಸಕ ರಾಜು ಕಾಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಬೇಡಿಕೆ ಇಟ್ಟಿದ್ದಾರೆ.
ಆಡಳಿತಾತ್ಮಕ ಅನುಕೂಲಕ್ಕಾಗಿ ಮತ್ತು ಸಮಗ್ರ ಅಭಿವೃದ್ಧಿಗಾಗಿ 15 ಜಿಲ್ಲೆಗಳನ್ನು ಒಳಗೊಂಡ ಹೊಸ ರಾಜ್ಯ ರಚನೆಗೆ ನನ್ನ ಅಗ್ರಹವಿದೆ ಎಂದಿದ್ದಾರೆ. ಈ ಸಂಬಂಧ ನವೆಂಬರ್ 4ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರವನ್ನೂ ಬರೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಪತ್ರದಲ್ಲಿ ಏನಿದೆ?:
ಆಡಳಿತಾತ್ಮಕ ಅನುಕೂಲಕ್ಕಾಗಿ ಮತ್ತು ಸಮಗ್ರ ಅಭಿವೃದ್ಧಿಗಾಗಿ ಉತ್ತರ ಕರ್ನಾಟಕದ 15 ಜಿಲ್ಲೆಗಳಾದ ಬೀದರ, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಉತ್ತರಕನ್ನಡ, ಹಾವೇರಿ, ವಿಜಯನಗರ, ಬಳ್ಳಾರಿ, ದಾವಣಗೆರೆ ಇವುಗಳನ್ನು ಒಳಗೊಂಡ ಹೊಸ ರಾಜ್ಯ ರಚನೆಗೆ ನನ್ನ ಅಗ್ರಹವಿದೆ. ಕರ್ನಾಟಕ ಏಕೀಕರಣ ಆದಾಗಿನಿಂದ ಇಲ್ಲಿಯವರೆಗೂ ಎಲ್ಲ ಕ್ಷೇತ್ರಗಳಲ್ಲಿಯೂ ಈ ಭಾಗಕ್ಕೆ ನಿರಂತರವಾಗಿ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ಆಗುತ್ತಲೆ ಬಂದಿದೆ. ಪ್ರತ್ಯೇಕ ರಾಜ್ಯ ರಚನೆಯಿಂದ ಮತ್ತೊಂದು ಕನ್ನಡ ನಾಡು ನಿರ್ಮಾಣವಾಗುವುದು ನಮಗೆ ಹೆಮ್ಮೆಯ ವಿಷಯ.
ಉತ್ತರ ಕರ್ನಾಟಕವು ಸರ್ವ ಸಂಪನ್ಮೂಲಗಳನ್ನು ಹೊಂದಿರುವ ಸಮೃದ್ಧ ನಾಡಾಗಿದೆ. ಕನ್ನಡ ಭಾಷೆಯ ಉಳಿವಿಗೆ ಮತ್ತು ಕರ್ನಾಟಕ ಏಕೀಕರಣಕ್ಕೆ ವಿಶೇಷ ಕೊಡುಗೆಯನ್ನು ಕೊಟ್ಟ ನಾಡು ನಮ್ಮದು. ಉತ್ತರ ಕರ್ನಾಟಕ ಹೋರಾಟ ಸಮಿತಿ(ರಿ)ಯ ಜನಪ್ರತಿನಿಧಿ ಸಹಿ ಸಂಗ್ರಹಣಾ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಈಗಾಗಲೇ, ಒಂದು ಕೋಟಿಗೂ ಅಧಿಕ ಜನರಿಂದ ಸಹಿಯೊಂದಿಗೆ ಲಿಖಿತ ಅಭಿಪ್ರಾಯವನ್ನು ಪಡೆದುಕೊಂಡಿದ್ದಾರೆ. ಮತ್ತು ಗೌರವಾನ್ವಿತ ಮಾನ್ಯ ರಾಜ್ಯಪಾಲರಿಗೆ ಮತ್ತು ಗೌರವಾನ್ವಿತ ಮಾನ್ಯ ರಾಷ್ಟ್ರಪತಿಯವರಿಗೆ ಭೇಟಿಯಾಗಿ ಮನವಿಪತ್ರ ಸಲ್ಲಿಸಿದ್ದಾರೆ. ಅದೇ ರೀತಿ ಮಾನ್ಯ ಪ್ರಧಾನಿಗಳಿಗೆ ಪತ್ರವನ್ನು ಬರೆದಿರುತ್ತಾರೆ. ಈ ಭಾಗದ ಎಲ್ಲ ವರ್ಗದ ಜನರು ಅವರ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತ್ಯೇಕ ರಾಜ್ಯವನ್ನು ಕೇಳುತ್ತಿದ್ದಾರೆ. ದಯವಿಟ್ಟು ತಾವು ನಮ್ಮ ಮನವಿಯನ್ನು ಪರಿಗಣಿಸಿ, ಕೇಂದ್ರ ಸರ್ಕಾರಕ್ಕೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ನಿರ್ಮಾಣಕ್ಕಾಗಿ ಸೂಕ್ತ ಶಿಫಾರಸು ಮಾಡಬೇಕೆಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.


