HomeBellaryಸರ್ಕಾರವೇ ಜನರ ಮನೆಬಾಗಿಲಿಗೆ ಬರಲಿದೆ; ಹೊಸ ಪ್ರಜಾಸೇವಾ ಯೋಜನೆ ದೇಶಕ್ಕೆ ಮಾದರಿ: ಡಿಕೆಶಿ

ಸರ್ಕಾರವೇ ಜನರ ಮನೆಬಾಗಿಲಿಗೆ ಬರಲಿದೆ; ಹೊಸ ಪ್ರಜಾಸೇವಾ ಯೋಜನೆ ದೇಶಕ್ಕೆ ಮಾದರಿ: ಡಿಕೆಶಿ

ಬಳ್ಳಾರಿ: ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಇನ್ನು ಮುಂದೆ ಜನರು ಸರ್ಕಾರಿ ಕಚೇರಿಗಳತ್ತ ಅಲೆಯಬೇಕಿಲ್ಲ. ಸರ್ಕಾರವೇ ಜನರ ಮನೆಬಾಗಿಲಿಗೆ ತೆರಳಿ ಸೇವೆ ನೀಡಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು. ವಿಜಯನಗರದಲ್ಲಿ ನೂತನ ಪ್ರಜಾಸೇವಾ ಇಲಾಖೆ ಹಾಗೂ ಆಡಳಿತ ವಿಕೇಂದ್ರೀಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದಲ್ಲಿ ಜನರು 136 ಸ್ಥಾನಗಳಲ್ಲಿ ಕಾಂಗ್ರೆಸ್‌ನ್ನು ಗೆಲ್ಲಿಸಿ ಅಧಿಕಾರಕ್ಕೆ ತಂದಿದ್ದಾರೆ. ದೊರೆಗಳ ಆಡಳಿತ ಮುಗಿದಿದ್ದು, ಈಗ ಪ್ರಜೆಗಳ ಆಡಳಿತವಿದೆ. ಹೀಗಾಗಿ ‘ನಾಡಿನ ದೊರೆ’ ಎಂದು ಕರೆಯದೆ ‘ಪ್ರಜಾಸೇವಕ’ ಎಂದು ಕರೆಯುವಂತೆ ಅವರು ಮನವಿ ಮಾಡಿದರು.

ಅಧಿಕಾರಿಗಳು ಕಚೇರಿಯಲ್ಲೇ ಕುಳಿತು ಆಡಳಿತ ನಡೆಸುವ ಬದಲು ಪ್ರತಿ ಶನಿವಾರ ಹಳ್ಳಿ ಹಾಗೂ ಪಂಚಾಯಿತಿ ಮಟ್ಟಕ್ಕೆ ತೆರಳಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಬೇಕು ಎಂದು ಸೂಚಿಸಿದರು. ವಿಧಾನಸೌಧ, ಡಿಸಿ ಕಚೇರಿ ಅಥವಾ ಜನಪ್ರತಿನಿಧಿಗಳ ಕಚೇರಿಗಳಿಗೆ ಜನರು ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳ ಆರಂಭದ ವೇಳೆ ಟೀಕೆಗಳು ವ್ಯಕ್ತವಾಗಿದ್ದರೂ, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅವುಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ದೇಶಕ್ಕೆ ಮಾದರಿಯಾಗಿದೆ. ಇದೇ ರೀತಿ ‘ಪ್ರಜಾಸೇವಾ ಯೋಜನೆ’ಯೂ ದೇಶಕ್ಕೆ ಮಾದರಿಯಾಗಲಿದೆ ಎಂದು ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದರು.

‘ಬಾಗಿಲಿಗೆ ಬಂದಿದೆ ನಿಮ್ಮ ಸರ್ಕಾರ, ಸೇವೆಗಿರಲಿ ನಿಮ್ಮ ಸಹಕಾರ’ ಎಂಬ ಘೋಷವಾಕ್ಯದೊಂದಿಗೆ ಅಧಿಕಾರಿಗಳು ಜನರ ಬಳಿಗೆ ತೆರಳಲಿದ್ದಾರೆ. ಅರ್ಜಿ ಸ್ವೀಕರಿಸುವುದರಲ್ಲೇ ಪ್ರಕ್ರಿಯೆ ಮುಗಿಯದೆ, ಪರಿಹಾರ ದೊರೆಯುವವರೆಗೂ ಸರ್ಕಾರ ಬೆಂಬಲವಾಗಿ ನಿಲ್ಲಲಿದೆ. ಬಡವರ ಕಾನೂನು ಹೋರಾಟಕ್ಕೆ ಅಗತ್ಯವಿದ್ದರೆ ಸರ್ಕಾರವೇ ವಕೀಲರನ್ನು ಒದಗಿಸಲಿದೆ ಎಂದು ಹೇಳಿದರು.

ಕಂದಾಯ ಇಲಾಖೆಯ ಹಕ್ಕುಪತ್ರ ಹಾಗೂ ‘ಭೂಮಿ ಗ್ಯಾರಂಟಿ’ ಕಾರ್ಯಕ್ರಮವನ್ನು ಮುಂದುವರಿಸಲಾಗುವುದು ಎಂದ ಅವರು, ಸರ್ಕಾರಿ ಶಾಲೆಗಳ ಮಕ್ಕಳಿಗೆ ಆಂತರಿಕವಾಗಿ ಶೇ.7ರಷ್ಟು ಮೀಸಲಾತಿ ನೀಡುವ ನಿರ್ಧಾರವನ್ನು ಶೀಘ್ರ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ಶಿಕ್ಷಕರ ದಿನದ ಅಂಗವಾಗಿ ಶಿಕ್ಷಕರಿಗೆ ಶುಭ ಕೋರಿದ ಡಿಕೆಶಿ, ರಾಜ್ಯದ 4 ಲಕ್ಷಕ್ಕೂ ಅಧಿಕ ಶಿಕ್ಷಕರಿಗೆ ವಿಶೇಷ ಬಿರುದು ಹಾಗೂ ಗೌರವ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.

ಬರ ಪರಿಸ್ಥಿತಿ ಕುರಿತು ಮಾತನಾಡಿದ ಅವರು, ಈಗಾಗಲೇ ಹಲವು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಮತ್ತೊಂದು ಹಂತದಲ್ಲಿ 50 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವುದಾಗಿ ತಿಳಿಸಿದರು. ಹೆಲಿಕಾಪ್ಟರ್ ಬಳಕೆ ಕುರಿತು ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಜನರ ಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದರು.

ಪಂಚಾಯಿತಿ ಮಟ್ಟದಲ್ಲಿ ಹೊಸ ನಾಯಕತ್ವ ಬೆಳೆಸುವ ಉದ್ದೇಶದಿಂದ ‘ಭಾರತ್ ಜೋಡೋ ಯುವಕ ಸಂಘ’ಗಳನ್ನು ರಚಿಸಲಾಗುವುದು ಎಂದು ಇದೇ ವೇಳೆ ತಿಳಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img