ಬೆಂಗಳೂರು: ರಾಜ್ಯಪಾಲರ ಭಾಷಣದ ಮೂಲಕ ಕಾಂಗ್ರೆಸ್ ಸರ್ಕಾರ ಕೇವಲ ಸುಳ್ಳುಗಳನ್ನೇ ಹೇಳಿಸಿದೆ. ಸಿಎಂ ಸಿದ್ದರಾಮಯ್ಯನವರು ಹುಲಿಯಾ ಬದಲು ಇಲಿಯಾ ಆಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು.
ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದಲ್ಲಿ ಮಾತನಾಡಿದ ಅವರು, ವಿಬಿ ಜಿ ರಾಮ್ ಜಿ ಕಾಯ್ದೆಗೆ ರಾಷ್ಟ್ರಪತಿ ಸಹಿ ಹಾಕಿ ಜಾರಿಯಾಗಿದೆ. ಮಹಾತ್ಮ ಗಾಂಧೀಜಿ ಹೆಸರನ್ನು ತೆಗೆದುಹಾಕಿದ್ದೇಕೆ ಎಂದು ಕಾಂಗ್ರೆಸ್ ನಾಯಕರು ಪ್ರಶ್ನಿಸುತ್ತಿದ್ದಾರೆ. ರಾಮನ ಹೆಸರನ್ನು ಕಂಡರೆ ಕಾಂಗ್ರೆಸ್ಗೆ ಆಗಲ್ಲ. ಇದೇ ಕಾರಣಕ್ಕೆ ರಾಮನಗರ ಜಿಲ್ಲೆಯ ಹೆಸರನ್ನು ಬದಲಿಸಲಾಗಿದೆ.
ರಾಮಲಿಂಗಾರೆಡ್ಡಿ ರಾಮನಗರ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು. ಈಗ ಅಲ್ಲಿ ಜಿಲ್ಲೆಯೇ ಇಲ್ಲ. ಮಹಾತ್ಮ ಗಾಂಧೀಜಿಯವರು ರಘುಪತಿ ರಾಘವ ರಾಜಾರಾಮ್ ಎಂದು ಹೇಳಿದ್ದರು. ಕಾಂಗ್ರೆಸ್ ಸರ್ಕಾರ ಕೇಂದ್ರದ ವಿರುದ್ಧ 18 ನಿರ್ಣಯಗಳನ್ನು ತೆಗೆದುಕೊಂಡಿದೆ. ಹೀಗೆ ಎಲ್ಲಕ್ಕೂ ಕಾಲು ಕೆರೆದುಕೊಂಡು ಜಗಳಕ್ಕೆ ಹೋಗುತ್ತಿದ್ದಾರೆ ಎಂದರು.
ಮಾಜಿ ಪ್ರಧಾನಿಗಳಾದ ಜವಹರಲಾಲ್ ನೆಹರು 17 ಬಾರಿ, ಇಂದಿರಾಗಾಂಧಿ 29 ಬಾರಿ, ರಾಜೀವ್ಗಾಂಧಿ 10 ಬಾರಿ ಸೇರಿದಂತೆ ಕಾಂಗ್ರೆಸ್ ಪಕ್ಷ 72 ಬಾರಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿದೆ. ಮಾಜಿ ಅಟಲ್ ಬಿಹಾರಿ ವಾಜಪೇಯಿ 14 ಬಾರಿ ಹಾಗೂ ಪ್ರಧಾನಿ ನರೇಂದ್ರ ಮೋದಿ 8 ಬಾರಿ ತಿದ್ದುಪಡಿ ಮಾಡಿದ್ದಾರೆ.
ಅತಿ ಹೆಚ್ಚು ಬಾರಿ ತಿದ್ದುಪಡಿ ಮಾಡಿದ ಕಾಂಗ್ರೆಸ್ ಬಿಜೆಪಿ ಮೇಲೆ ಆರೋಪ ಮಾಡುತ್ತಿದೆ. “ಸಂವಿಧಾನವು ನಿರಂತರವಾಗಿರಬೇಕೆಂದರೆ ನಾವು ಅದನ್ನು ಬದಲಾಯಿಸುತ್ತಿರಬೇಕೆಂದು” ಜವಹರಲಾಲ್ ನೆಹರು ಹೇಳಿದ್ದರು. ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನದ ಬಗ್ಗೆ ಬೇಜಾರಾಗಿ ಅದನ್ನು ಸುಟ್ಟುಹಾಕುತ್ತೇನೆಂದು ಹೇಳಿದ್ದರು ಎಂದರು.



