ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಗಂಗಾಪೂರಪೇಟೆಯ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ಅದ್ಧೂರಿ ಹಾಗೂ ಭಕ್ತಿಭಾವದಿಂದ ನೆರವೇರಿತು.
ಸಂಜೆ 6.12 ಗಂಟೆಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿ-ವಿಧಾನಗಳು ನೆರವೇರಿದ ಬಳಿಕ ಮಹಾರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಗಂಗಾಪೂರಪೇಟೆಯಿಂದ ಹೊರಟ ಮಹಾರಥವು ಹೊಂಬಳನಾಕಾ ಪಾದಗಟ್ಟೆಯವರೆಗೆ ಸಂಚರಿಸಿತು. ರಥ ಸಾಗುವ ಮಾರ್ಗದುದ್ದಕ್ಕೂ ನೆರೆದಿದ್ದ ಭಕ್ತರು ಜೈ ದುರ್ಗಾದೇವಿ ಎಂಬ ಜಯಘೋಷ ಮೊಳಗಿಸುತ್ತಾ ಉತ್ತತ್ತಿ ಮತ್ತು ಬಾಳೆಹಣ್ಣುಗಳನ್ನು ಎಸೆದು ತಮ್ಮ ಭಕ್ತಿಯನ್ನು ಸಮರ್ಪಿಸಿದರು.
ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುವ ಈ ಜಾತ್ರಾ ಮಹೋತ್ಸವದ ಅಂಗವಾಗಿ ಜೂನ್ 28ರಿಂದಲೇ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಪೂಜಾ ಕಾರ್ಯಕ್ರಮಗಳು ನಡೆಯುತ್ತಿವೆ. ಮಹಾರಥೋತ್ಸವದ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನದಿಂದಲೇ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿತ್ತು. ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದು ಹರಕೆ ತೀರಿಸಿದರು.
ಇಂದಿನ ಕಾರ್ಯಕ್ರಮಗಳು
ಜಾತ್ರಾ ಮಹೋತ್ಸವದ ಅಂಗವಾಗಿ ಜುಲೈ 9ರಂದು ಲಘು ರಥೋತ್ಸವ, ಜುಲೈ 10ರಂದು ಸಾಮೂಹಿಕ ವಿವಾಹ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮಗಳು ನಡೆಯಲಿವೆ. ಇದರೊಂದಿಗೆ ಹೋಮ-ಹವನ, ಧಾರ್ಮಿಕ ಉಪನ್ಯಾಸಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮುಂದುವರಿಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಜಾತ್ರಾ ಮಹೋತ್ಸವ ಸಮಿತಿಯ ಅಧ್ಯಕ್ಷ ಸಿದ್ದಪ್ಪ ಪಲ್ಲೇದ ತಿಳಿಸಿದ್ದಾರೆ.



