ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಗ್ರಾಮೀಣ ಗ್ರಂಥಾಲಯಗಳು ಸಾರ್ವಜನಿಕರ ಜ್ಞಾನದಾಹವನ್ನು ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಓದುಗರಿಗೆ ಸಹಾಯಕವಾಗುವಂತೆ ಪುಸ್ತಕಗಳೊಂದಿಗೆ, ಡಿಜಿಟಲೀಕರಣಗೊಂಡ ಸಂಪನ್ಮೂಲಗಳನ್ನು ಹಾಗೂ ಉದ್ಯೋಗ ಕುರಿತ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಹೇಳಿದರು.
ಅವರು ಬುಧವಾರ ಮಾಚೇನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಭಾವನೂರ ಗ್ರಾಮದಲ್ಲಿ ನೂತನ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷೆ ಯಶೋದಾ ಗೋವಿಂದಗೌಡ ಪಾಟೀಲ ಮಾತನಾಡಿ, ವಿದ್ಯಾವಂತ ಯುವಕರು ಗ್ರಂಥಾಲಯಗಳಲ್ಲಿ ದಿನಪತ್ರಿಕೆ, ಕಾದಂಬರಿ, ಪುಸ್ತಕ, ಸ್ವರ್ಧಾತ್ಮಕ ಪುಸ್ತಕಗಳನ್ನು ಓದುವ ಮೂಲಕ ತಮ್ಮ ಜ್ಞಾನವನ್ನು ಬೆಳೆಸಿಕೊಳ್ಳುತ್ತಿದ್ದರು. ಈಗ ಕಾಲ ಬದಲಾದಂತೆ ಆನ್ಲೈನ್ ಮೂಲಕ ವ್ಯಾಸಂಗ ಪುಸ್ತಕಗಳನ್ನು ನೋಡಿ ಕಲಿತುಕೊಳ್ಳುವಂತಾಗಿದೆ. ವಿದ್ಯಾರ್ಥಿಗಳೊಂದಿಗೆ ಇತರರು ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಲಬೇಕು ಎಂದರು.
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುರೇಶ ಕಲ್ಲೋಡರ ಮಾತನಾಡಿ, ಸರ್ಕಾರ ನೀಡಿರುವ ಡಿಜಿಟಲ್ ಗ್ರಂಥಾಲಯವನ್ನು ಪ್ರತಿಯೊಬ್ಬರೂ ಉಪಯೋಗಿಸಿಕೊಳ್ಳುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿಗಳು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.