ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತಿ ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಕಾರ್ಯ ಅತ್ಯಂತ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಜಲ್ ಜೀವನ್ ಮಿಷನ್ ಮತ್ತು ನಲ್-ಜಲ್ ಮಿತ್ರ ಯೋಜನೆಯಡಿ ಆಯ್ಕೆಯಾದ ಗ್ರಾಮ ಪಂಚಾಯಿತಿಯ ಅಭ್ಯರ್ಥಿಗಳು ತರಬೇತಿಯನ್ನು ಪಡೆದು, ಮುಂಬರುವ ದಿನಗಳಲ್ಲಿ ಪಂಚಾಯಿತಿಗಳಲ್ಲಿ ಟ್ಯಾಂಕ್ ಮೂಲಕ ಹಾಗೂ ನಲ್ಲಿ ಟ್ಯಾಬ್ ಮೂಲಕ ನೀರು ಸರಬರಾಜು ಮಾಡುವ ಕಾರ್ಯ ಕೈಗೊಳ್ಳಲು ಮಹಿಳಾ ಸದಸ್ಯರ ಪಾತ್ರ ಮಹತ್ವದ್ದಾಗಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ತಿಳಿಸಿದರು.
ಇಲ್ಲಿನ ಕೆ.ಎಚ್. ಪಾಟೀಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಇಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈಮಲ್ಯ ಇಲಾಖೆ ಗದಗ ಇವರುಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ನಡೆದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಸರ್ಕಾರಿ ಸಂಸ್ಥೆಯ ಪ್ರಾಚಾರ್ಯರಾದ ಡಾ. ಮಲ್ಲೂರ ಬಸವರಾಜ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಎಂ.ವಿ. ಚಳಗೇರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಾಘವೇಂದ್ರ ದೊಡ್ಡಮನಿ, ಗದಗ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೊರವನವರ, ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮಾ ಪಾಳೆಗಾರ, ಸಂಸ್ಥೆಯ ತರಬೇತಿ ಅಧಿಕಾರಿಗಳಾದ ಎಲ್.ವೈ. ತಳವಾರ, ಸಂಸ್ಥೆಯ ಸಿಬ್ಬಂದಿಗಳಾದ ಭಾರತಿ ಸುಂಕದ, ವಾಣಿಶ್ರೀ ಕುಲಕರ್ಣಿ, ಸುನಿತಾ ಸಾಕೇನವರ, ಸೂಡಿಯ ಸರ್ಕಾರಿ ಐ.ಟಿ.ಐ ಕಾಲೇಜಿನ ತರಬೇತಿದಾರರಾದ ಗಂಗಾಧರ ತಳವಾರ, ರಾಜೇಂದ್ರ ಕಂಗೂರಿ ಸೇರಿದಂತೆ ಜಿಲ್ಲಾ ಪಂಚಾಯಿತಿಯ ಸಿಬ್ಬಂದಿ, ಗದಗ, ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕಿನ ಗ್ರಾಮ ಪಂಚಾಯಿತಿಗಳ ಮಹಿಳಾ ಅಭ್ಯರ್ಥಿಗಳು ಹಾಜರಿದ್ದರು.
ಕಿರಿಯ ತರಬೇತಿ ಅಧಿಕಾರಿಗಳಾದ ಎಂ.ವೈ. ಕುರಿ ಸ್ವಾಗತಿಸಿದರು. ಸಂಸ್ಥೆಯ ಕಛೇರಿ ಅಧೀಕ್ಷಕ ಮಹಮ್ಮದಲಿ ನದಾಫ್ ಕಾರ್ಯಕ್ರಮ ನಿರೂಪಿಸಿದರು. ಕಿರಿಯ ತರಬೇತಿ ಅಧಿಕಾರಿಗಳಾದ ಬಡೇಸಾಬ ತೋಟದ ವಂದಿಸಿದರು.
ಜಲ್ ಜೀವನ್ ಮಿಷನ್ ಮತ್ತು ನಲ್ ಜಲ್ ಮಿತ್ರ ಯೋಜನೆಯಡಿ ಗ್ರಾಮ ಪಂಚಾಯಿತಿ ಮೂಲಕ ಆಯ್ಕೆಯಾಗಿರುವ ಮಹಿಳಾ ಅಭ್ಯರ್ಥಿಗಳಿಗೆ, ಅವರ ಕುಟುಂಬಕ್ಕೆ ಆದಾಯ ಸೃಜನೆ ಮಾಡುವ ನಿಟ್ಟಿನಲ್ಲಿ ಅವಕಾಶ ಕಲ್ಪಿಸಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಈ ತರಬೇತಿಯ ಅವಧಿಯಲ್ಲಿ ಸಾಪ್ಟ್ ಸ್ಕಿಲ್ ಮತ್ತು ಎಂಪ್ಲಾಯಬಿಲಿಟಿ ಕೌಶಲ್ಯ ಸೇರಿದಂತೆ ಒಟ್ಟು 290 ಗಂಟೆಗಳು ಥಿಯರಿ ಮತ್ತು ಪ್ರಾಯೋಗಿಕ ತರಬೇತಿಯನ್ನು ನೀಡಲಾಗುತ್ತದೆ. ಆನ್ ಜಾಬ್ ತರಬೇತಿಯು 23 ದಿನಗಳು ಇರುತ್ತದೆ ಎಂದು ಭರತ್ ಎಸ್ ತಿಳಿಸಿದರು.