ವಿಜಯಸಾಕ್ಷಿಸುದ್ದಿ, ಗದಗ: ಸಹಕಾರ ಇಲಾಖೆ, ಗದಗ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಗದಗ ಜಿಲ್ಲಾ ಸಹಕಾರ ಯೂನಿಯನ್, ಜಗದ್ಗುರು ತೋಂಟದಾರ್ಯ ಮಹಾವಿದ್ಯಾಲಯ ಗದಗ ಇವರ ಸಹಯೋಗದೊಂದಿಗೆ ಆಯ್ದ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ಹಾಗೂ ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಪ್ರಶಸ್ತಿ ಪತ್ರ ವಿತರಣಾ ಸಮಾರಂಭದಲ್ಲಿ ಪ.ಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿದ್ದಲಿಂಗ ಬಂಡು ಮಸನಾಯಕ ಮಾತನಾಡುತ್ತಾ, ಸಹಕಾರ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಯುವಕರ ಪಾತ್ರ ಬಹಳ ಮುಖ್ಯವಾಗಿದೆ. ಶಾಲಾ-ಕಾಲೇಜು ಪಠ್ಯದಲ್ಲಿ ಸಹಕಾರ ವಿಷಯ ಸೇರ್ಪಡೆ ಹಾಗೂ ಸಹಕಾರ ವಿಶ್ವವಿದ್ಯಾಲಯಗಳ ಸ್ಥಾಪನೆಯಿಂದ ಸಹಕಾರಿ ವ್ಯವಸ್ಥೆ ಸದೃಢಗೊಳ್ಳಲು ಅನುಕೂಲವಾಗುತ್ತದೆ ಎಂದರು.
ಗದಗ ಜಿಲ್ಲಾ ಸಹಕಾರ ಯೂನಿಯನ್ನಿನ ನಿರ್ದೇಶಕ ಎಸ್.ಎಸ್. ಪಟ್ಟಣಶೆಟ್ಟಿ ಮಾತನಾಡುತ್ತಾ, ಕೇಂದ್ರ ಸರ್ಕಾರವು ಸಹಕಾರ ಸಚಿವಾಲಯ ಪ್ರಾರಂಭಿಸುವುದರೊಂದಿಗೆ ವಿಶಿಷ್ಟ ಯೋಜನೆಗಳನ್ನು ಹಾಕಿಕೊಂಡು ಅದಕ್ಕನುಗುಣವಾಗಿ ಹಣ ಬಿಡುಗಡೆ ಮಾಡಿ ಈ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗದಗ ಜಿಲ್ಲಾ ಸಹಕಾರ ಯೂನಿಯನ್ನ ವಾಯ್.ಎಫ್. ಪಾಟೀಲ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಹಕಾರ ಸಂಘಗಳ ಉಪನಿಬಂಧಕರಾದ ಎಸ್.ಎಸ್. ಕಬಾಡೆ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಪುಷ್ಪಾ ಕೆ.ಕಡಿವಾಳರ, ಪ್ರಶಾಂತ ಮುಧೋಳ ಪಾಲ್ಗೊಂಡಿದ್ದರು. ತೀರ್ಪುಗಾರರಾಗಿ ವಿಶ್ರಾಂತ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಎಂ.ಸಿ. ಉಪ್ಪಿನ, ಕ.ಹಾ.ಮ ತರಬೇತಿ ಕೇಂದ್ರದ ನಿವೃತ್ತ ಜಂಟಿ ನಿರ್ದೇಶಕರಾದ ಎಂ.ಬಿ. ಮಡಿವಾಳರ, ಕೆ.ಆಯ್.ಸಿ.ಎಂ ಪ್ರಾಂಶುಪಾಲರಾದ ಡಿ.ಆರ್. ವೆಂಕಟರಾಮ, ದಿ ಮರ್ಚಂಟ ಅರ್ಬನ್ ಕೋ-ಆಪ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಬಸವರಾಜ ನಾಯಕವಾಡಿ ಭಾಗವಹಿಸಿದ್ದರು.
ಕಾವೇರಿ ಹೂಗಾರ ಮತ್ತು ಶಿವಗಂಗಾ ಚವಡಿ ಪ್ರಾರ್ಥಿಸಿದರು. ಚಂದ್ರಶೇಖರ ಎಸ್.ಕರಿಯಪ್ಪನವರ ಸ್ವಾಗತಿಸಿ ನಿರೂಪಿಸಿದರು. ರಶೀದಾಬಾನು ಸಿ.ಯಲಿಗಾರ ವಂದಿಸಿದರು.
ಜ. ತೋಂಟದಾರ್ಯ ಮಹಾವಿದ್ಯಾಲಯದ ಪ್ರಾಂಶುಪಾಲ ಪಿ.ಜಿ. ಪಾಟೀಲ ಮಾತನಾಡುತ್ತಾ, ಕಣಗಿನಹಾಳದಲ್ಲಿ ಹುಟ್ಟಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇಡೀ ಏಷ್ಯಾ ಖಂಡದಲ್ಲಿ ಪ್ರಥಮ ಸಹಕಾರ ಸಂಘ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಇತ್ತೀಚೆಗೆ ಸಹಕಾರ ಕ್ಷೇತ್ರದಲ್ಲಿ ಅಷ್ಟೇ ಅಲ್ಲದೇ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಿದ್ದು, ದೇಶದ ಅಭಿವೃದ್ಧಿಗೆ ಉತ್ತೇಜನಕಾರಿಯಾಗಿದೆ ಎಂದರು.