ಬೆಂಗಳೂರು: ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಓಪನ್ ಆಗಲಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳುವ ಮೂಲಕ ಕ್ಯಾನ್ಸರ್ ರೋಗಿಗಳಿಗೆ ಆರೋಗ್ಯ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಕಡೆಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಅಗತ್ಯವಾದ ಸೌಲಭ್ಯಗಳು ಲಭ್ಯವಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ರೋಗಿಗಳಿಗೆ ದೊಡ್ಡ ಮೊತ್ತದ ಹಣ ವೆಚ್ಚವಾಗುತ್ತದೆ, ಇದು ಸಾಮಾನ್ಯ ಜನರಿಗೆ ಸ್ವಲ್ಪ ಮಟ್ಟಿಗೆ ಕಷ್ಟವಾಗುತ್ತದೆ.
ಸುಮಾರು 60% ರಷ್ಟು ರೋಗಿಗಳು ಕ್ಯಾನ್ಸರ್ ಚಿಕಿತ್ಸೆಗಾಗಿ 100 ಕಿಲೋಮೀಟರ್ಗಿಂತಲೂ ಹೆಚ್ಚು ದೂರ ಪ್ರಯಾಣಿಸಬೇಕಾಗಿದೆ, ಇದರಿಂದ ಆರ್ಥಿಕ ಹೊರೆಯ ಜೊತೆಗೆ ದೈಹಿಕ ಮತ್ತು ಮಾನಸಿಕ ತೊಂದರೆಯೂ ಉಂಟಾಗುತ್ತದೆ. ಈ ಎಲ್ಲಾ ಕಾರಣಗಳಿಗಾಗಿ ಇದೀಗ ಆರೋಗ್ಯ ಇಲಾಖೆ ಕ್ಯಾನ್ಸರ್ ರೋಗಿಗಳಿಗೆ ಹೊಸ ಕ್ರಮವನ್ನು ಜಾರಿಗೆ ತರಲು ನಿರ್ಧರಿಸಿದೆ.
ಕ್ಯಾನ್ಸರ್ ರೋಗಿಗಳ ಈ ಸಮಸ್ಯೆಗೆ ಪರಿಹಾರವಾಗಿ, ಆರೋಗ್ಯ ಇಲಾಖೆಯು ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಕೀಮೋಥೆರಪಿ ಡೇ ಕೇರ್ ಕೇಂದ್ರಗಳನ್ನು ಆರಂಭಿಸುವ ನಿರ್ಧಾರ ಕೈಗೊಂಡಿದೆ. ಈ ಕೇಂದ್ರಗಳಲ್ಲಿ ಕೀಮೋಥೆರಪಿ ಚಿಕಿತ್ಸೆಯ ಜೊತೆಗೆ ಆಪ್ತ ಸಮಾಲೋಚನೆ, ಮೆಡಿಕಲ್ ಆಂಕಾಲಜಿಸ್ಟ್ಗಳ ಸೇವೆ, ವೈದ್ಯರು, ಫಾರ್ಮಾಸಿ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಯ ಸೌಲಭ್ಯವಿರುತ್ತದೆ. ಈ ಉಪಕ್ರಮವು ಕಳೆದ ಬಜೆಟ್ನಲ್ಲಿ ಘೋಷಿತವಾಗಿದ್ದು, ಮುಂದಿನ ದಿನಗಳಲ್ಲಿ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.