HomeGadag Newsರಾಜ್ಯ ಸರಕಾರಕ್ಕೆ ಹಣಕಾಸಿನ ಕೊರತೆಯಿಲ್ಲ: ಶಾಸಕ ಜಿ.ಎಸ್. ಪಾಟೀಲ

ರಾಜ್ಯ ಸರಕಾರಕ್ಕೆ ಹಣಕಾಸಿನ ಕೊರತೆಯಿಲ್ಲ: ಶಾಸಕ ಜಿ.ಎಸ್. ಪಾಟೀಲ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ರೋಣ: ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಗೆ ಪೈಲಟ್ ಯೋಜನೆಯಡಿಯಲ್ಲಿ ಮುಗುಳಿ ಗ್ರಾಮ ಸೇರಿದಂತೆ ತಾಲೂಕಿನಲ್ಲಿ ಐದು ಗ್ರಾಮಗಳನ್ನು ಆಯ್ಕೆ ಮಾಡಿಕೊಂಡಿದ್ದು, ಈ ಯೋಜನೆಗೆ ಶಾಸಕರ ಅನುದಾನವನ್ನು ಒದಗಿಸಲಾಗುವುದು ಎಂದು ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಅವರು ಗುರುವಾರ ತಾಲೂಕಿನ ಮುಗುಳಿ ಗ್ರಾಮದಲ್ಲಿ 10 ಲಕ್ಷ ರೂ. ವೆಚ್ಚದ ದುರ್ಗಾದೇವಿ ಸಮುದಾಯ ಭವನ, ಕಾಳಿಕಾದೇವಿ ಸಮುದಾಯ ಭವನದ ಭೂಮಿಪೂಜೆ, ಬೀರೇಶ್ವರ ಸಮುದಾಯ ಭವನದ ಉದ್ಘಾಟನೆ ಹಾಗೂ ದ್ಯಾಮುಣಸಿ ಗ್ರಾಮದಲ್ಲಿ ಸಿ.ಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆಯನ್ನು ನೆರವೇರಿಸಿ ಮಾತನಾಡಿದರು.

ಗ್ರಾಮಸ್ಥರ ಇಚ್ಛೆಯಂತೆ 1 ಕೋಟಿ 60 ಲಕ್ಷ ರೂ.ಗಳ ವೆಚ್ಚದಲ್ಲಿ ಪ್ರೌಢಶಾಲೆಯನ್ನು ನಿರ್ಮಿಸಿ ಈಗಾಗಲೇ ಉದ್ಘಾಟಿಸಲಾಗಿದೆ. 50 ಲಕ್ಷ ರೂ.ಗಳ ವೆಚ್ಚದಲ್ಲಿ ಸಿ.ಸಿ ರಸ್ತೆ ನಿರ್ಮಿಸಲಾಗಿದೆ. ಪ್ರೌಢಶಾಲೆಗೆ ಕುಡಿಯುವ ನೀರು ಪೂರೈಕೆಗೆ 5 ಲಕ್ಷ ರೂ.ಗಳನ್ನು ಒದಗಿಸಲಾಗಿದ್ದು, ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳಿಗೆ ಶೀಘ್ರವೇ ಭೂಮಿಪೂಜೆ ನೆರವೇರಿಸಲಾಗುವುದು. ಮುಂದಿನ ಹಂತದಲ್ಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಸುಧಾರಿಸಲಾಗುವುದು ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಖ್ಯವಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಗದಗ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ. ಕಾರಣ ಇಂದು ಗ್ಯಾರಂಟಿ ಯೋಜನೆಗಳ ಲಾಭದಿಂದ ಬಡ ಕುಟುಂಬಗಳು ಆರ್ಥಿಕ ಸಬಲತೆಯನ್ನು ಕಾಣುತ್ತಿವೆ. ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುತ್ತಿದೆ. ಬಡವರಿಗೆ ಅನುಕೂಲವಾಗುವ ಮಹತ್ವದ ಯೋಜನೆಗಳನ್ನು ಬಿಜೆಪಿಯವರು ವಿರೋಧಿಸುತ್ತಿರುವುದು ನ್ಯಾಯವೇ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರಕಾರ 53 ಸಾವಿರ ಕೋಟಿ ರೂ.ಗಳನ್ನು ಫಲಾನುಭವಿಗಳಿಗೆ ನೀಡುತ್ತಿದೆ. ಇದರಿಂದ ರಾಜ್ಯದಲ್ಲಿ 1 ಕೋಟಿ 20 ಲಕ್ಷ ಕುಟುಂಬಗಳು ಆರ್ಥಿಕ ಪ್ರಗತಿಯನ್ನು ಸಾಧಿಸಿವೆ. ಇನ್ನು ಸಾಮಾಜಿಕ ಭದ್ರತಾ ಯೋಜನೆಗಳಾದ ವಿಧವಾ ವೇತನ, ವಿಕಲಚೇತನ ವೇತನ, ವೃದ್ಧಾಪ್ಯ ವೇತನ ಸೇರಿ ಅನೇಕ ಯೋಜನೆಗಳಿಗೆ ಸರಕಾರ 1 ಲಕ್ಷ 17 ಸಾವಿರ ಕೋಟಿ ರೂ.ಗಳನ್ನು ಒದಗಿಸುತ್ತಿದೆ. ಸರಕಾರಕ್ಕೆ ಹಣಕಾಸಿನ ಕೊರತೆಯಿಲ್ಲ ಎನ್ನುವುದಕ್ಕೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಸಾಕ್ಷಿಯಾಗಿವೆ ಎಂದರು.

ದ್ಯಾಮುಣಸಿ ಗ್ರಾಮಕ್ಕೂ ಸಹ ಈ ಹಿಂದೆ ಸಾಕಷ್ಟು ಅನುದಾನವನ್ನು ಒದಗಿಸಲಾಗಿದೆ. ಈಗ ಮತ್ತೆ 25 ಲಕ್ಷ ರೂ.ಗಳ ಅನುದಾನದಲ್ಲಿ ಸಿಸಿ ರಸ್ತೆಯನ್ನು ನಿರ್ಮಿಸಲಾಗುತ್ತಿದೆ. ಗ್ರಾಮಸ್ಥರ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸುತ್ತಾ ಬಂದಿದ್ದು, ಉಳಿದ ಬೇಡಿಕೆಗಳಿಗೆ ಮುಂದಿನ ಹಂತದಲ್ಲಿ ಅನುದಾನವನ್ನು ಒದಗಿಸುವ ಜೊತೆಗೆ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.

ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ವೀರಣ್ಣ ಶೆಟ್ಟರ, ಎಪಿಎಂಸಿ ಮಾಜಿ ಅಧ್ಯಕ್ಷ ಪರಶುರಾಮ ಅಳಗವಾಡಿ, ತಾ.ಪಂ ಮಾಜಿ ಸದಸ್ಯ ಶಿದ್ಲಿಂಗಪ್ಪ ಯಾಳಗಿ, ಎಪಿಎಂಸಿ ಮಾಜಿ ಸದಸ್ಯ ನಾಗರಾಜ, ಗ್ರಾ.ಪಂ ಮಾಜಿ ಅಧ್ಯಕ್ಷ ವೀರಣ್ಣ ಯಾಳಗಿ, ಮುಖಂಡರಾದ ಅಭಿಷೇಕ ನವಲಗುಂದ, ವಿಜಯ ತೊಟರ, ದೇಸಾಯಿ, ಸೋಮು ನಾಗರಾಜ, ಫಕ್ಕೀರಪ್ಪ ಮುಗುಳಿ, ಮಲ್ಲಪ್ಪ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಗುಳಿ ಗ್ರಾಮದ ಗಂಗಮ್ಮ ಬೆಟಗೇರಿ ಎಂಬ ವೃದ್ಧೆ ಒಂಟಿಯಾಗಿ ವಾಸ ಮಾಡುತ್ತಿರುವ ವಿಷಯ ಮಾಧ್ಯಮದವರ ಗಮನಕ್ಕೆ ಬರುತ್ತಿದ್ದಂತೆ ಈ ವಿಷಯವನ್ನು ತಾ.ಪಂ ಇಒ ಚಂದ್ರಶೇಖರ ಕಂದಕೂರ ಅವರೊಂದಿಗೆ ಹಂಚಿಕೊಂಡರು. ಆಗ ಚಂದ್ರಶೇಖರ ಕಂದಕೂರ ಅವರು ಪಿಡಿಒ ಜೊತೆಗೆ ವೃದ್ಧೆಯ ಮನೆಗೆ ತೆರಳಿ ಆರೋಗ್ಯವನ್ನು ವಿಚಾರಿಸಿದರು. ನಂತರ ವೃದ್ಧೆಗೆ ಹಣಕಾಸಿನ ನೆರವು ನೀಡಿ ವೃದ್ಧೆಯ ಸಂಬಂಧಿಗಳಿದ್ದರೆ ವಿಚಾರಿಸಿ ಮಾಹಿತಿ ನೀಡಿ. ಇಲ್ಲದಿದ್ದರೆ ಹಿರಿಯ ಅಧಿಕಾರಿಗಳ ಹಾಗೂ ಶಾಸಕರ ಸಲಹೆ ಪಡೆದು ವೃದ್ಧೆಗೆ ಆಸರೆ ಒದಗಿಸೋಣ ಎಂದು ಇಲಾಖೆಯ ಸಿಬ್ಬಂದಿಗಳಿಗೆ ಸೂಚಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!