ರಾಜ್ಯದ ಹೈನುಗಾರಿಕೆ ಅಭಿವೃದ್ಧಿ ಪಥದಲ್ಲಿದೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸಹಕಾರ ಇಲಾಖೆ, ಗದಗ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಗದಗ ಜಿಲ್ಲಾ ಸಹಕಾರ ಯೂನಿಯನ್, ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆ ಗದಗ ಹಾಗೂ ಕೆ.ಎಂ.ಎಫ್ ಧಾರವಾಡ ಇವರುಗಳ ಸಂಯುಕ್ತ ಆಶ್ರಯದಲ್ಲಿ ಗದಗ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಹಾಗೂ ಮುಖ್ಯ ಕಾರ್ಯನಿರ್ವಾಹಕರುಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮವು ಮಂಗಳವಾರ ಪಶುವೈದ್ಯಕೀಯ ಪಾಲಿಕ್ಲಿನಿಕ್‌ನ ಸಭಾಭವನದಲ್ಲಿ ಜರುಗಿತು.

Advertisement

ಕರ್ನಾಟಕ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಂಡಳದ ನಿರ್ದೇಶಕ ಎಚ್.ಜಿ. ಹಿರೇಗೌಡ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭಾರತವು ಹೈನುಗಾರಿಕೆ ಕ್ಷೇತ್ರದಲ್ಲಿ ಗಮನಾರ್ಹವಾದ ಸಾಧನೆ ಮಾಡಿದ್ದು, ಹಾಲು ಉತ್ಪಾದನೆಯಲ್ಲಿ ವಿಶ್ವದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಹಾಲು ಉತ್ಪಾದನೆಯಲ್ಲಿ ರಾಜ್ಯದ ಹೈನುಗಾರಿಕೆ ಉತ್ತಮವಾಗಿ ಸಾಗುತ್ತಿದೆ. ಹೈನುಗಾರಿಕಾ ವಲಯ ಗ್ರಾಮೀಣ ಪ್ರದೇಶಗಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದೆ ಎಂದರು.

ಧಾರವಾಡ ಹಾಲು ಒಕ್ಕೂಟದ ವ್ಯವಸ್ಥಾಪಕರ ನಿರ್ದೇಶಕ ಡಿ.ಟಿ. ಕಳಸದ ಮಾತನಾಡುತ್ತಾ, ಗೋವಿನಿಂದ ಗ್ರಾಹಕರವರೆಗೆ ವಿಶ್ವ ಹೈನೋದ್ಯಮವು ತನ್ನ ಸುದೀರ್ಘ ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತಿದೆ. ಜಾಗತಿಕ ಡೈರಿ ಕ್ಷೇತ್ರವು ಪಶುಪಾಲನೆಯಿಂದ ಗ್ರಾಹಕರವರೆಗಿನ ತನ್ನ ಕಾರ್ಯಚಟುವಟಿಕೆಯಲ್ಲಿನ ಶಕ್ತಿ, ಸಾಮರ್ಥ್ಯವನ್ನು ಅನಾವರಣಗೊಳಿಸುವ ಉದ್ದೇಶ ಹೊಂದಿದೆ. ಗ್ರಾಮೀಣ ಪ್ರದೇಶದಲ್ಲಿನ ಪಶುಪಾಲನೆಯಿಂದ ಆರಂಭವಾಗುವ ಹೈನೋದ್ಯಮದ ಕಾರ್ಯವ್ಯಾಪ್ತಿಯು ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಅಗತ್ಯವಿರುವ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವವರೆಗೆ ವಿಸ್ತಾರಗೊಂಡಿದೆ ಎಂದರು.

ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪನಿರ್ದೇಶಕ ಅರವಿಂದ ಎನ್.ನಾಗಜ್ಜನವರ ಮಾತನಾಡುತ್ತಾ, ಸಹಕಾರ ಸಂಘಗಳಲ್ಲಿ ಆರ್ಥಿಕ ತಃಖ್ತೆಗಳನ್ನು ಸಿದ್ಧಪಡಿಸುವುದು ಮತ್ತು ನಿಗದಿತ ಅವಧಿಯೊಳಗೆ ಲೆಕ್ಕಪರಿಶೋಧನೆ ಮಾಡಿಸಿ ವಾರ್ಷಿಕ ಮಹಾಸಭೆಗೆ ಮಂಡಿಸಿ ಅನುಮೋದನೆ ಪಡೆಯುವುದು ಅವಶ್ಯಕ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೂನಿಯನ್ ಅಧ್ಯಕ್ಷರಾದ ಸಿ.ಎಂ. ಪಾಟೀಲ ವಹಿಸಿ ಮಾತನಾಡುತ್ತಾ, ಸಮಾಜದಲ್ಲಿ ಆರ್ಥಿಕವಾಗಿ ಅಬಲರಾದವರು, ಅವಕಾಶ ವಂಚಿತ ಜನರಿದ್ದು, ಇಂತಹ ಜನರ ಆರ್ಥಿಕ, ಸಾಮಾಜಿಕ ಸ್ಥಿತಿಗತಿಯನ್ನು ಉತ್ತಮಗೊಳಿಸಲು ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಮಾತ್ರ ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಸಹಕಾರ ಸಂಘಗಳ ಉಪನಿಬಂಧಕಿ ಎಸ್.ಎಸ್. ಕಬಾಡೆ, ಸಹಕಾರ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಪುಷ್ಪಾ ಕೆ.ಕಡಿವಾಳ, ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಎಚ್.ವಾಯ್. ಹೊನ್ನಿನಾಯ್ಕರ, ಪಾಲಿಕ್ಲಿನಿಕ್‌ನ ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ. ಹೀರಾಲಾಲ ಜಿನಗಿ, ಡಾ. ಆರ್.ವಾಯ್. ಗುರಿಕಾರ, ಧಾರವಾಡ ಹಾಲು ಒಕ್ಕೂಟದ ಜಿಲ್ಲಾ ಮುಖ್ಯಸ್ಥ ಪ್ರಸನ್ನ ಪಟ್ಟೇದ, ಹಾಲು ಒಕ್ಕೂಟದ ಗದಗ ಜಿಲ್ಲೆಯ ಎಲ್ಲಾ ವಿಸ್ತರಣಾಧಿಕಾರಿಗಳು ಉಪಸ್ಥಿತರಿದ್ದರು.

ತರಬೇತಿ ಕಾರ್ಯಾಗಾರದಲ್ಲಿ ಡಾ. ವೀರೇಶ ತರಲಿ, ಡಾ. ಜಗದೀಶ್ ಎಸ್.ಮಟ್ಟಿ, ಡಾ. ಎಂ.ಬಿ. ಮಡಿವಾಳರ ವಿವಿಧ ವಿಷಯಗಳ ಕುರಿತು ಉಪನ್ಯಾಸ ನೀಡಿದರು. ನಾಗಾವಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಕೇದಾರಸ್ವಾಮಿ ಶಿರಹಟ್ಟಿಮಠ ಪ್ರಾರ್ಥಿಸಿದರು. ಜಿಲ್ಲಾ ಸಹಕಾರ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಎಸ್.ಕರಿಯಪ್ಪನವರ ಸ್ವಾಗತಿಸಿ ನಿರೂಪಿಸಿದರು. ವಿಸ್ತರಣಾಧಿಕಾರಿ ದಿಲೀಪ್ ಆಯ್.ನದಾಫ್ ವಂದಿಸಿದರು.

ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಎಚ್.ಬಿ. ಹುಲಗಣ್ಣವರ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ತಳಿ ಅಭಿವೃದ್ಧಿ, ಹಸಿರು ಮೇವು ಮತ್ತು ಸಮತೋಲಿನ ಪಶು ಆಹಾರ ಉತ್ಪಾದನೆ, ಪಶು ವೈದ್ಯಕೀಯ ಸೇವೆ, ಹಾಲು ಶೇಖರಣೆ ಹೀಗೆ ಎಲ್ಲಾ ಹಂತಗಳಲ್ಲಿ ಆಧುನಿಕ ತಂತ್ರಜ್ಞಾನದ ಉಪಯೋಗವನ್ನು ವಿಸ್ತರಿಸಿಕೊಳ್ಳಲಾಗಿದೆ. ಇತ್ತೀಚಿನ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದತ್ತಲೂ ಗಮನ ಹರಿಸಿರುವ ಹೈನೋದ್ಯಮ ಕ್ಷೇತ್ರವು ತನ್ನ ಕಾರ್ಯಕ್ಷಮತೆಯನ್ನು ವೃದ್ಧಿಸಿಕೊಂಡು ಉತ್ಪಾದನಾ ಮತ್ತು ಅನಗತ್ಯ ವೆಚ್ಚಗಳನ್ನು ನಿಯಂತ್ರಿಸಿ ಯಶಸ್ಸು ಕಂಡಿದೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here