ರಾಮನಗರ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ರಾಜಕೀಯ ಬೆಳವಣಿಗೆಗಳ ನಡುವೆ ಶಾಸಕ ಇಕ್ಬಾಲ್ ಹುಸೇನ್ ನೀಡಿರುವ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ ದೊರೆಯುವ ಕುರಿತು ಮಾತನಾಡಿದ ಅವರು, ಬಹುಕಾಲದ ನಿರೀಕ್ಷೆ ಈಡೇರುವ ಹಂತಕ್ಕೆ ಬಂದಿದೆ ಎಂದು ಸೂಚನೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, “ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಬೆಂಬಲಿಗರ ಬಹುಕಾಲದ ಆಸೆ ಒಂದಿತ್ತು. ಆ ಆಸೆಯನ್ನು ಭಗವಂತ ಈಡೇರಿಸುವ ಕೆಲಸ ಮಾಡುತ್ತಿದ್ದಾನೆ. ನಾನು ಈ ಹಿಂದೆ ಬಹಿರಂಗವಾಗಿ ಹೇಳಿದ್ದೆ. ಇನ್ನು ಕೆಲವರು ಮೌನವಾಗಿ ಪ್ರಾರ್ಥನೆ ಮಾಡಿದ್ದರು. ಆ ಪ್ರಾರ್ಥನೆ ನೆರವೇರುವ ಸಮಯ ಈಗ ಸಮೀಪಿಸಿದೆ” ಎಂದು ಹೇಳಿದ್ದಾರೆ.
“ನಮ್ಮ ನಾಯಕರಿಗೆ ಅವಕಾಶ ಸಿಗುತ್ತಿರುವುದರಿಂದ ಭಗವಂತನಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ಇಂದು ಬಕ್ರೀದ್ ಹಬ್ಬದ ದಿನವಾಗಿರುವುದರಿಂದ ರಾಜಕೀಯ ಚರ್ಚೆಗಳನ್ನು ಹೆಚ್ಚಿಸಲು ಇಷ್ಟಪಡುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.
ಪರಮೇಶ್ವರ್ ಅವರ ಮುಖ್ಯಮಂತ್ರಿ ಹುದ್ದೆ ಬೇಡಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಅವರು ನಮ್ಮ ಹಿರಿಯ ನಾಯಕರು. ಅವಕಾಶ ಕೇಳುವುದು ಅವರ ಹಕ್ಕು. ಅವರು ಪಕ್ಷಕ್ಕಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ. ಆದರೆ ನಮ್ಮ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಅವಕಾಶ ಸಿಗಬೇಕು ಎಂಬುದು ನಮ್ಮ ಜಿಲ್ಲೆಯ ಜನರ ಹಾಗೂ ಬೆಂಬಲಿಗರ ಅಭಿಲಾಷೆ” ಎಂದು ಹೇಳಿದ್ದಾರೆ.
ಈ ಹೇಳಿಕೆಗಳ ಮೂಲಕ ಕಾಂಗ್ರೆಸ್ನ ಮುಂದಿನ ನಾಯಕತ್ವದ ಕುರಿತು ಮತ್ತೆ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ.



