ಬೆಂಗಳೂರು: ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆಸರೆಯಾಗಬೇಕಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಸಮಸ್ಯೆ ತಲೆದೋರಿದ್ದು, ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ರೋಗಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.
ಆಸ್ಪತ್ರೆಗೆ ಬರುವ ನೂರಾರು ರೋಗಿಗಳಿಗೆ ವೈದ್ಯರು ಚಿಕಿತ್ಸೆ ನೀಡಿ ಔಷಧಿ ಚೀಟಿ ಬರೆದುಕೊಡುತ್ತಿದ್ದರೂ, ಆಸ್ಪತ್ರೆಯ ಫಾರ್ಮಸಿಯಲ್ಲಿ ಅಗತ್ಯ ಔಷಧಿಗಳು ಲಭ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಸಿಬ್ಬಂದಿ ‘ಸ್ಟಾಕ್ ಇಲ್ಲ, ಹೊರಗಡೆ ಖರೀದಿಸಿ’ ಎಂದು ಹೇಳುತ್ತಿರುವುದರಿಂದ ರೋಗಿಗಳು ಹಾಗೂ ಅವರ ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಶೇಷವಾಗಿ ಮಕ್ಕಳಿಗೆ ಅಗತ್ಯವಿರುವ ವಿಟಮಿನ್-ಡಿ ಸಿರಪ್ ಸೇರಿದಂತೆ ಹಲವು ಅಗತ್ಯ ಔಷಧಿಗಳ ಕೊರತೆ ಕಂಡುಬಂದಿದೆ. ಕೆಲ ಪ್ರಾಣರಕ್ಷಕ ಔಷಧಿಗಳೂ ಲಭ್ಯವಿಲ್ಲ ಎನ್ನುವ ದೂರುಗಳು ಕೇಳಿಬಂದಿವೆ.
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆಯಾಗದಂತೆ ಸಾಕಷ್ಟು ಸಂಗ್ರಹವಿದೆ ಎಂದು ಆರೋಗ್ಯ ಇಲಾಖೆ ಹೇಳಿಕೆ ನೀಡುತ್ತಿದ್ದರೂ, ಕೆಸಿ ಜನರಲ್ ಆಸ್ಪತ್ರೆಯಲ್ಲಿನ ಪರಿಸ್ಥಿತಿ ಅದಕ್ಕೆ ವಿರುದ್ಧವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ಬಡ ರೋಗಿಗಳು ಹೊರಗಿನ ಮೆಡಿಕಲ್ ಅಂಗಡಿಗಳಲ್ಲಿ ದುಬಾರಿ ಬೆಲೆ ನೀಡಿ ಔಷಧಿ ಖರೀದಿಸಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ತಕ್ಷಣ ಸಮಸ್ಯೆ ಪರಿಹರಿಸಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.



