ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿಯಲ್ಲಿ ಯಾವುದೇ ಬಿಕ್ಕಟ್ಟು ಉಂಟಾಗುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
2028ರ ಚುನಾವಣೆಯನ್ನು ಉಲ್ಲೇಖಿಸಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಎನ್ಡಿಎ ಮೈತ್ರಿಕೂಟದ ಭಾಗವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಉತ್ತಮ ಸಂಬಂಧವಿದೆ ಎಂದು ಹೇಳಿದರು.
ಈ ಹೋರಾಟದ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳು ಎದುರಾದರೂ ಪರಸ್ಪರ ಚರ್ಚೆ ಮೂಲಕ ಅವುಗಳನ್ನು ಬಗೆಹರಿಸಿಕೊಂಡು ಮುಂದುವರೆಯುವ ವಿಶ್ವಾಸವಿದೆ ಎಂದು ದೇವೇಗೌಡ ತಿಳಿಸಿದರು.
ಮೋದಿ ಮತ್ತು ಅಮಿತ್ ಶಾ ಅವರೊಂದಿಗೆ ಇರುವ ಆತ್ಮೀಯ ಸಂಬಂಧದಿಂದಾಗಿ ಮೈತ್ರಿ ಕುರಿತು ಯಾವುದೇ ಆತಂಕವಿಲ್ಲ ಎಂದು ಹೇಳಿದರು.
ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಸ್ತುತ ಕೇರಳ, ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತವಿದೆ ಎಂದು ಹೇಳಲಾಗುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಕಾದುನೋಡಬೇಕು. ಸೂಕ್ತ ಸಮಯ ಬಂದಾಗ ಈ ಬಗ್ಗೆ ಮಾತನಾಡುತ್ತೇನೆ ಎಂದರು.
ಈ ವೇಳೆ ಪಕ್ಷದ ಕಾರ್ಯಕರ್ತರಿಗೆ ಸಂದೇಶ ನೀಡಿದ ದೇವೇಗೌಡ, ಜೆಡಿಎಸ್ ಕಾರ್ಯಕರ್ತರು ಶಿಸ್ತಿನ ಸಿಪಾಯಿಗಳಂತೆ ನಿಷ್ಠೆಯಿಂದ ಪಕ್ಷದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಹಿಸಿರುವ ಜವಾಬ್ದಾರಿಗಳನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಕರ್ತರು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದ ಅವರು, ಶಾಸಕರು ಮತ್ತು ಕಾರ್ಯಕರ್ತರು ಪಕ್ಷದ ಸಂಘಟನೆ ಬಲಪಡಿಸುವತ್ತ ಹೆಚ್ಚು ಗಮನಹರಿಸಬೇಕು ಎಂದು ಮನವಿ ಮಾಡಿದರು.



