HomeKarnataka Newsಮೋಸ ಮಾಡಿ ವಿಮಾ ಪರಿಹಾರ ಪಡೆಯಲು ಅವಕಾಶವಿಲ್ಲ; ₹5.70 ಲಕ್ಷ ಪರಿಹಾರ ಆದೇಶ ರದ್ದುಪಡಿಸಿದ ಕರ್ನಾಟಕ...

ಮೋಸ ಮಾಡಿ ವಿಮಾ ಪರಿಹಾರ ಪಡೆಯಲು ಅವಕಾಶವಿಲ್ಲ; ₹5.70 ಲಕ್ಷ ಪರಿಹಾರ ಆದೇಶ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್

For Dai;y Updates Join Our whatsapp Group

ಬೆಂಗಳೂರು: ವಿಮಾ ಕಂಪನಿಗಳು ಸಾರ್ವಜನಿಕ ಹಣವನ್ನು ನಿರ್ವಹಿಸುತ್ತವೆ. ಹೀಗಾಗಿ ಮೋಸದ ಆಧಾರದ ಮೇಲೆ ಸಾರ್ವಜನಿಕ ಹಣವನ್ನು ಲೂಟಿ ಮಾಡಲು ಅವಕಾಶ ನೀಡಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ತಪ್ಪಾಗಿ ಟೆಂಪೋ ಟ್ರ್ಯಾಕ್ಸ್ ವಾಹನವನ್ನು ಸಿಲುಕಿಸಿ ಪರಿಹಾರ ಪಡೆದಿರುವುದು ಸಾಬೀತಾದ ಹಿನ್ನೆಲೆಯಲ್ಲಿ, ನ್ಯಾಯಾಧಿಕರಣ ನೀಡಿದ್ದ ₹5.70 ಲಕ್ಷ ಪರಿಹಾರದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ರಸ್ತೆ ಅಪಘಾತ ಪ್ರಕರಣದಲ್ಲಿ ಪರಿಹಾರ ನೀಡಿದ್ದ ನ್ಯಾಯಾಧಿಕರಣದ ಆದೇಶ ಪ್ರಶ್ನಿಸಿ ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಸಲ್ಲಿಸಿದ್ದ ಅರ್ಜಿ ಹಾಗೂ ಹೆಚ್ಚಿನ ಪರಿಹಾರ ಕೋರಿ ಮೃತರ ಸಂಬಂಧಿಕರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಬಿ. ಗೀತಾ ಅವರಿದ್ದ ಧಾರವಾಡ ಪೀಠ ಈ ಆದೇಶ ನೀಡಿದೆ.

ಪ್ರಕರಣದಲ್ಲಿ ಅಪಘಾತಕ್ಕೆ ಟೆಂಪೋ ಟ್ರ್ಯಾಕ್ಸ್ ವಾಹನ ಡಿಕ್ಕಿ ಹೊಡೆದಿದೆ ಎಂಬುದಕ್ಕೆ ಆರಂಭಿಕ ದೂರಿನಲ್ಲಿ ಯಾವುದೇ ಉಲ್ಲೇಖವಿರಲಿಲ್ಲ. ಬದಲಾಗಿ, ಮೃತರೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಹಿಂಬದಿ ಸವಾರನ ಹೇಳಿಕೆಯ ಪ್ರಕಾರ, ಮೃತ ಚಾಲಕನೇ ಅತಿವೇಗವಾಗಿ ವಾಹನ ಚಲಾಯಿಸಿ ಕಂಬಕ್ಕೆ ಡಿಕ್ಕಿ ಹೊಡೆದಿದ್ದ ಎಂದು ತಿಳಿದುಬಂದಿತ್ತು.

ಆದರೆ, ಅಪಘಾತ ಸಂಭವಿಸಿದ ಸುಮಾರು ಒಂದು ತಿಂಗಳ ಬಳಿಕ ಟೆಂಪೋ ಟ್ರ್ಯಾಕ್ಸ್ ವಾಹನವನ್ನು ಪ್ರಕರಣದಲ್ಲಿ ಸೇರ್ಪಡೆ ಮಾಡಲಾಗಿತ್ತು. ಅಲ್ಲದೆ, ಪ್ರಕರಣದ ಪ್ರತ್ಯಕ್ಷ ಸಾಕ್ಷಿಯೊಬ್ಬರು ಕ್ರಿಮಿನಲ್ ನ್ಯಾಯಾಲಯದಲ್ಲಿ ತಮಗೆ ಅಪಘಾತದ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಪರಿಹಾರ ನ್ಯಾಯಾಧಿಕರಣದ ಮುಂದೆ ಟೆಂಪೋ ಟ್ರ್ಯಾಕ್ಸ್ ವಾಹನ ಡಿಕ್ಕಿ ಹೊಡೆದಿದೆ ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಗಳಲ್ಲಿನ ವ್ಯತ್ಯಾಸವು ಪಾಟಿ ಸವಾಲಿನ ವೇಳೆ ಸಾಬೀತಾಗಿರುವುದನ್ನು ಹೈಕೋರ್ಟ್ ಗಮನಿಸಿದೆ. ಪರಿಹಾರ ಪಡೆಯುವ ಉದ್ದೇಶದಿಂದ ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ನ್ಯಾಯಾಧಿಕರಣ ನೀಡಿದ್ದ ಪರಿಹಾರದ ಆದೇಶವನ್ನು ರದ್ದುಗೊಳಿಸಲಾಗಿದೆ. ಇದೇ ವೇಳೆ, ಹೆಚ್ಚಿನ ಪರಿಹಾರ ಕೋರಿ ಮೃತರ ಸಂಬಂಧಿಕರು ಸಲ್ಲಿಸಿದ್ದ ಅರ್ಜಿಯನ್ನೂ ಹೈಕೋರ್ಟ್ ವಜಾಗೊಳಿಸಿದೆ.

ಪ್ರಕರಣದ ಹಿನ್ನೆಲೆ

2003ರ ಮೇ 11ರಂದು ಕೊರಟಗೆರೆ-ಬೆಂಗಳೂರು ರಸ್ತೆಯ ಶನಿದೇವರ ದೇವಸ್ಥಾನದ ಬಳಿ ಅಜರ್ ಎಂಬವರು ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಅಜರ್ ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದರು.

ಮೃತರ ಪೋಷಕರು, ಹಾವೇರಿ ಮೂಲದ ಹನುಮಂತಗೌಡ ಪಾಟೀಲ್ ಅವರಿಗೆ ಸೇರಿದ ಟೆಂಪೋ ಟ್ರ್ಯಾಕ್ಸ್ ವಾಹನ ಡಿಕ್ಕಿ ಹೊಡೆದಿದ್ದರಿಂದಲೇ ಅಜರ್ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ವಿರುದ್ಧ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದರು.

ಆರಂಭದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧಿಕರಣ, ಅಪಘಾತಕ್ಕೆ ಟೆಂಪೋ ಟ್ರ್ಯಾಕ್ಸ್ ವಾಹನವೇ ಕಾರಣ ಎಂಬುದಕ್ಕೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತ್ತು.

ಈ ಆದೇಶ ಪ್ರಶ್ನಿಸಿ ಮೃತರ ಸಂಬಂಧಿಕರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಕೂಡ ನ್ಯಾಯಾಧಿಕರಣದ ಆದೇಶವನ್ನು ಎತ್ತಿಹಿಡಿದು ಅರ್ಜಿ ವಜಾಗೊಳಿಸಿತ್ತು. ಬಳಿಕ ಈ ವಿಚಾರ ಸುಪ್ರೀಂ ಕೋರ್ಟ್‌ವರೆಗೆ ಹೋಗಿದ್ದು, ಪ್ರಕರಣವನ್ನು ಮರುಪರಿಶೀಲನೆಗಾಗಿ ನ್ಯಾಯಾಧಿಕರಣಕ್ಕೆ ಹಿಂದಿರುಗಿಸಲಾಗಿತ್ತು.

ನಂತರ ಪ್ರಕರಣದ ಮರು ವಿಚಾರಣೆ ನಡೆಸಿದ ಹುಬ್ಬಳ್ಳಿ ಮೋಟಾರು ಅಪಘಾತ ಪರಿಹಾರ ನ್ಯಾಯಾಧಿಕರಣವು ₹5.70 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಇದೇ ವೇಳೆ ಹೆಚ್ಚಿನ ಪರಿಹಾರ ಕೋರಿ ಮೃತರ ಸಂಬಂಧಿಕರೂ ಅರ್ಜಿ ಸಲ್ಲಿಸಿದ್ದರು.

ಎರಡೂ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್, ಪರಿಹಾರ ಪಡೆಯಲು ವಾಹನವನ್ನು ತಪ್ಪಾಗಿ ಪ್ರಕರಣದಲ್ಲಿ ಸಿಲುಕಿಸಿರುವುದು ಹಾಗೂ ಸುಳ್ಳು ಸಾಕ್ಷ್ಯ ನೀಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ₹5.70 ಲಕ್ಷ ಪರಿಹಾರದ ಆದೇಶವನ್ನು ರದ್ದುಗೊಳಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img