ಕೊಪ್ಪಳ: ಸಚಿವ ಸ್ಥಾನಕ್ಕಾಗಿ ಶಾಸಕರು ದೆಹಲಿಗೆ ತೆರಳಿರುವ ವಿಚಾರ ತಿಳಿದಿದ್ದು, ಅವರಿಗೆ ಶುಭವಾಗಲಿ. ಸಚಿವ ಸ್ಥಾನ ಕೇಳುವುದು ತಪ್ಪಲ್ಲ, ಅದು ಶಾಸಕರ ಹಕ್ಕು ಎಂದು ಶಾಸಕ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ಎರಡು ವರ್ಷಗಳವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ ಎಂದು ಹೇಳಿದರು.
ಸಂಪುಟ ಪುನರ್ರಚನೆ ಯಾವಾಗ ನಡೆಯಬೇಕು ಎಂಬುದು ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿಯವರ ನಿರ್ಧಾರಕ್ಕೆ ಒಳಪಟ್ಟದ್ದು ಎಂದು ತಿಳಿಸಿದ ಅವರು, ಮುಂದಿನ ಸಂಪುಟ ವಿಸ್ತರಣೆಯಲ್ಲಿ ಸಚಿವರಾಗುವವರಿಗೆ ಶುಭಾಶಯಗಳು,” ಎಂದರು.
“ನನ್ನನ್ನು ಸಚಿವನಾಗಲು ಹೇಳಿದರೆ ಆಗುತ್ತೇನೆ, ಬೇಡ ಎಂದರೆ ಬಿಡುತ್ತೇನೆ. 2028ರಲ್ಲಿ ಮತ್ತೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಹೆಚ್ಚಿನ ಪ್ರಯೋಜನವಾಗಿದೆ. ಆದ್ದರಿಂದ ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಮಸೂದೆ ತರಲು ಮುಂದಾಗಿರುವುದನ್ನು ಸ್ವಾಗತಿಸಿದ ಅವರು, ಮಹಿಳೆಗಳಿಗೆ ಸೂಕ್ತ ಸ್ಥಾನಗಳು ಸಿಗಬೇಕು. ಆದರೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳುವುದು ಸರಿಯಲ್ಲ,” ಎಂದು ಹೇಳಿದರು.
ಈ ವಿಚಾರದಲ್ಲಿ ಪ್ರಧಾನಿ ಎಲ್ಲ ರಾಜಕೀಯ ಪಕ್ಷಗಳ ನಾಯಕರನ್ನು ಕರೆದು ಚರ್ಚೆ ನಡೆಸಬೇಕು. ಉತ್ತರ ಭಾರತಕ್ಕೆ ಹೆಚ್ಚು ಸ್ಥಾನ ನೀಡಿ, ದಕ್ಷಿಣಕ್ಕೆ ಕಡಿಮೆ ಸ್ಥಾನ ನೀಡುವಂತಾಗಬಾರದು ಎಂದು ಎಚ್ಚರಿಸಿದರು.



