ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಕಾರ್ಮಿಕ ಸಂಘಟನೆಗಳೊಂದಿಗೆ ಸಮಾಲೋಚನಾ ಸಭೆಯು ಮಂಗಳವಾರ ಜರುಗಿತು.
ಕಟ್ಟಡ ಕಾರ್ಮಿಕರು ಸೇರಿದಂತೆ ಇತರೆ ಕಾರ್ಮಿಕರಿಗೆ ಯಾವುದಾದರೂ ರೀತಿಯ ಅಪಘಾತ ಸಂಭವಿಸಿದಲ್ಲಿ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಿರುವ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೆ ಅದನ್ನು ಮರುಪಾವತಿಸುವ ಅವಕಾಶವಿರುತ್ತದೆ. ಈ ಅವಕಾಶವನ್ನು ತಾಲೂಕಿನಲ್ಲಿರುವ ಖಾಸಗಿ ಆಸ್ಪತ್ರೆಗಳಿಗೂ ಸಹ ನೀಡಬೇಕೆಂದು ಓರ್ವ ಕಾರ್ಮಿಕರು ಸಭೆಯಲ್ಲಿ ತಿಳಿಸಿದರು.
ಇದಕ್ಕೆ ಪ್ರತಿಕ್ರಿಸಿದ ಕಾರ್ಮಿಕ ಸಚಿವ ಸಂತೋಷ ಲಾಡ್, ಖಾಸಗಿ ಆಸ್ಪತ್ರೆಯನ್ನು ಗುರುತಿಸಲು ಅದರದೇ ಆದ ನಿಯಮಗಳಿವೆ. ಆ ನಿಯಮಗಳಿಗೆ ಒಳಪಡುವ ಯಾವುದಾದರೂ ಖಾಸಗಿ ಆಸ್ಪತ್ರೆ ಟೆಂಡರ್ನ ನಿಯಮಗಳು ಹಾಗೂ ಷರತ್ತಿಗಳಿಗನುಸಾರ ಭಾಗವಹಿಸಿದರೆ ಮಾತ್ರ ಅವಕಾಶ ನೀಡಲಾಗುವುದೆಂದು ಉತ್ತರಿಸಿದರು.
ಕಾರ್ಮಿಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಬೇಕೆಂದು ಕಾರ್ಮಿಕರು ಸಚಿವರಿಗೆ ಕೇಳಿಕೊಂಡಾಗ, ಕಾರ್ಮಿಕ ಸಚಿವರು ಅಂತಾರಾಷ್ಟ್ರೀಯ ಮಟ್ಟದಲ್ಲಿನ ಕೌಶಲ್ಯ ತರಬೇತಿಗಳನ್ನು ಜಿಲ್ಲಾ ಮಟ್ಟದಲ್ಲಿ ಇನ್ನೂ ಕೆಲವೇ ದಿನಗಳಲ್ಲಿ ಪ್ರಾರಂಭಿಸಲು ಚರ್ಚಿಸಲಾಗುವುದು ಎಂದರು.
ಕೆಲವೊಂದು ಕಾರ್ಮಿಕರ ಅಹವಾಲುಗಳನ್ನು ಸ್ವೀಕರಿಸಿ ಮತ್ತು ಸ್ಥಳದಲ್ಲಿಯೇ ಇತ್ಯರ್ಥಗೊಳಿಸಿದರು. ಈ ಸಂದರ್ಭದಲ್ಲಿ ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ, ಶಾಸಕರಾದ ಜಿ.ಎಸ್. ಪಾಟೀಲ, ಡಾ. ಚಂದ್ರು ಲಮಾಣಿ, ಎಸ್.ವಿ. ಸಂಕನೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ ಸೇರಿದಂತೆ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ ಡಿ, ಕಾರ್ಮಿಕ ಆಯುಕ್ತರಾದ ಡಾ. ಎಚ್.ಎನ್. ಗೋಪಾಲಕೃಷ್ಣ, ಹೆಚ್ಚುವರಿ ಕಾರ್ಮಿಕ ಆಯುಕ್ತರಾದ ಡಾ. ಎಸ್.ಬಿ. ರವಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಸೇರಿದಂತೆ ಇತರ ಅಧಿಕಾರಿಗಳು, ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.
ರೈತರು ಸಹ ಕಾರ್ಮಿಕರಾಗಿದ್ದು, ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಹಾವಿನಿಂದ ಅಥವಾ ಇನ್ನಾವುದೇ ಕೀಟಗಳ ಕಡಿತದಿಂದ ಅಪಘಾತ ಸಂಭವಿಸಿದಾಗ ಅವರಿಗೂ ಸಹ ಕಟ್ಟಡ ಕಾರ್ಮಿಕರಿಗೆ ನೀಡುವ ಸೌಲಭ್ಯಗಳನ್ನು ನೀಡಬೇಕೆಂದು ರೈತರು ಸಚಿವರಿಗೆ ಕೇಳಿದರು. ಇದಕ್ಕೆ ಉತ್ತರಿಸಿದ ಸಚಿವರು, ರೈತರು ಅಸಂಘಟಿತ ವಲಯಕ್ಕೆ ಸೇರಿದವರಾಗಿದ್ದು, ಸೆಸ್ ಅನುದಾನವನ್ನು ಬಳಸಲು ಅವಕಾಶವಿಲ್ಲದ ಕಾರಣ ಸಂಘಟಿತ ವರ್ಗಕ್ಕೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಸಹ ಅಸಂಘಟಿತ ರೈತರಿಗೂ ಸಹ ಎಲ್ಲಾ ಸೌಲಭ್ಯಗಳು ಸಿಗುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದು ಪ್ರತಿಕ್ರಿಯಿಸಿದರು.