ನಿಮ್ಮ ಅಪಪ್ರಚಾರಕ್ಕೆ ಈ ಸಿದ್ದರಾಮಯ್ಯ ಹೆದರುವವನಲ್ಲ!

0
Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ: ನಾವು ಬಿಜೆಪಿ, ಆರ್‌ಎಸ್‌ಎಸ್‌ನ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.

Advertisement

ಎಐಸಿಸಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿಸಿ ಹಮ್ಮಿಕೊಂಡಿದ್ದ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಬಿಜೆಪಿಯ ದೇಶ ವಿರೋಧಿ ಆಡಳಿತ, ಜನ ವಿರೋಧಿ ಕ್ರಮಗಳನ್ನು ಖಂಡಿಸಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿಗಳ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ಕಿಡಿಗೇಡಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಿ.ಎಂ ಸಿದ್ದರಾಮಯ್ಯ, ಬಿಜೆಪಿ, ಆರ್‌ಎಸ್‌ಎಸ್‌ಗೆ ನೇರವಾಗಿ ಸವಾಲೆಸೆದು ಸೆಡ್ಡು ಹೊಡೆದರು.

ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಾ, ಭಾರತೀಯರ ಬದುಕನ್ನು ಬೆಲೆ ಏರಿಕೆಯಲ್ಲಿ ಬೇಯಿಸುತ್ತಾ, ಭಾರತೀಯ ಸಮಾಜವನ್ನು ಛಿದ್ರಗೊಳಿಸುತ್ತಾ, ಬಿರುಕು ಮೂಡಿಸುತ್ತಾ ಜನದ್ರೋಹಿಯಾಗಿ ವರ್ತಿಸುತ್ತಿರುವುದು ಬಿಟ್ಟರೆ ಬೇರೇನು ಮಾಡಿದ್ದೀರಿ ಜನರಿಗೆ ತೋರಿಸಿ ಎಂದು ಸವಾಲು ಹಾಕಿದರು.

ಮೊನ್ನೆ ಕಾಶ್ಮೀರದಲ್ಲಿ ಅಮಾಯಕ ಭಾರತೀಯರನ್ನು, ಕರ್ನಾಟಕದ ಮೂವರು ಅಮಾಯಕರನ್ನು ಅಮಾನುಷವಾಗಿ ಹತ್ಯೆ ಮಾಡಿ ಹೋದರಲ್ಲಾ, ಇದು ಕೇಂದ್ರ ಸರ್ಕಾರದ ಭದ್ರತಾ ಲೋಪ ಅಲ್ಲವೇ, ಭಾರತೀಯರಿಗೆ ರಕ್ಷಣೆ ಕೊಡುವಲ್ಲಿ ಕೇಂದ್ರ ವಿಫಲವಾಗಿರುವುದನ್ನು ನಾವು ಭಾರತೀಯರು ಪ್ರಶ್ನಿಸಬಾರದೇ, ಪ್ರಶ್ನಿಸಿದರೆ ಕಾರ್ಯಕ್ರಮಕ್ಕೆ ಅಡ್ಡಿಪಡಿಸುತ್ತೀರಾ ಎಂದು ಪ್ರಶ್ನಿಸಿದರು.

ಸ್ವಾತಂತ್ರ‍್ಯ ಹೋರಾಟದಿಂದ ಹಿಡಿದು ಆಧುನಿಕ ಭಾರತ ನಿರ್ಮಾಣದವರೆಗೂ ಬಿಜೆಪಿ, ಸಂಘ ಪರಿವಾರದ ಕೊಡುಗೆ ಏನಿದೆ, ಭಾರತೀಯ ಸಮಾಜವನ್ನು ಬಿರುಕು ಮೂಡಿಸಿದ್ದು ಬಿಟ್ಟರೆ ಇಷ್ಟು ವರ್ಷಗಳಲ್ಲಿ ಭಾರತಕ್ಕಾಗಿ ನಿಮ್ಮ ಕೊಡುಗೆ ಏನು ಎಂದು ದೇಶದ ಜನಕ್ಕೆ ವಿವರಿಸಿ ಎಂದು ಸವಾಲು ಹಾಕಿದರು.

ನಾವು ಹಾಲಿನ ದರ 4 ರೂ ಹೆಚ್ಚಿಸಿ, 4 ರೂಪಾಯಿಯನ್ನು ಪೂರ್ತಿಯಾಗಿ ರೈತರಿಗೆ, ಗೋಪಾಲಕರಿಗೆ, ಗೋ ಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೇವಿ. ಇದರಲ್ಲಿ ಒಂದು ರೂಪಾಯಿ ಕೂಡ ಸರ್ಕಾರಕ್ಕೆ ಬರದು. ನಾವು 4 ರೂ ಹೆಚ್ಚಿಸಿದರೂ ಹಾಲಿನ ದರ ಇಡೀ ದೇಶದಲ್ಲಿ ಕಡಿಮೆ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ಬಸ್ ದರ, ನೀರಿನ ದರ, ವಿದ್ಯುತ್ ದರ ಅಕ್ಕ ಪಕ್ಕದ ರಾಜ್ಯಗಳಿಗಿಂತ ಅತ್ಯಂತ ಕಡಿಮೆ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ನಿಮ್ಮ ಸುಳ್ಳು, ಅಪಪ್ರಚಾರ, ಬೆದರಿಕೆಗೆ ಈ ಸಿದ್ದರಾಮಯ್ಯ ಹೆದರುವವನಲ್ಲ. ನಿಮ್ಮನ್ನು ಮೆಟ್ಟಿ ನಿಲ್ತೀವಿ. ಕಾಂಗ್ರೆಸ್ ಪಕ್ಷಕ್ಕೆ ಆ ಶಕ್ತಿ ಇನ್ನೂ ಇದೆ ಎಂದರು.

ಸವಾಲೆಸೆದ ಸಿಎಂ

* ಕೇಂದ್ರ ಸರ್ಕಾರ ಭಾರತೀಯರನ್ನು ಸುಳ್ಳಿನ ಪ್ರವಾಹದಲ್ಲಿ ಮುಳುಗಿಸಿ ಬೆಲೆ ಏರಿಕೆಯ ಬರೆ ಹಾಕುತ್ತಿದೆ:

* ಅಕ್ಕಿ, ಎಣ್ಣೆ, ಚಿನ್ನ-ಬೆಳ್ಳಿ, ಗೊಬ್ಬರ, ಕಾಳು, ಬೇಳೆ, ಡೀಸೆಲ್, ಪೆಟ್ರೋಲ್, ಸಿಲಿಂಡರ್ ಎಲ್ಲದರ ಬೆಲೆ ಏರಿಸಿದ್ದೀರಿ. ಯಾವುದನ್ನು ಬಿಟ್ಟಿದ್ದೀರಿ ಹೇಳಿ.

* ನಿಮ್ಮನ್ನು ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ:

* ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಬಿಜೆಪಿ-ಆರ್‌ಎಸ್‌ಎಸ್ ಕಿಡಿಗೇಡಿಗಳಿಗೆ ಧಿಕ್ಕಾರ ಕೂಗಿದವರಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ.

“ಕಚ್ಚಾ ತೈಲ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್, ಡೀಸೆಲ್ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುತ್ತಲೇ ಇರುವುದು ಭಾರತೀಯರಿಗೆ ಬಿಜೆಪಿ ಬಗೆಯುತ್ತಿರುವ ಮಹಾ ದ್ರೋಹವಾಗಿದೆ. ಬಿಜೆಪಿ ನಿರಂತರವಾಗಿ ಭಾರತೀಯರನ್ನು ಸುಳ್ಳುಗಳ ಸರಮಾಲೆಯಲ್ಲಿ ಮುಳುಗಿಸಿ, ಸಮಾಜದಲ್ಲಿ ಬಿರುಕು ಮೂಡಿಸಿ ಕಾಲ ಕಳೆಯುತ್ತಿದೆ. ನಿಮಗೆ ತಕ್ಕ ಉತ್ತರ ಕೊಡುವ ಶಕ್ತಿ ನಮಗಿದೆ”

ಸಿಎಂ ಸಿದ್ದರಾಮಯ್ಯ.


Spread the love

LEAVE A REPLY

Please enter your comment!
Please enter your name here