ಕಲಬುರ್ಗಿ:- ಭೀಕರ ಕಾರು ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಜರುಗಿದೆ.
ಮಹಾಂತೇಶ್ ಬೀಳಗಿ, ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಇನ್ನು ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇನ್ನೂ ಚಾಲಕ ರಾಜು ಸ್ಥಿತಿ ಗಂಭೀರ ಆಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
1974ರ ಮಾರ್ಚ್ 27ರಂದು ಜನಿಸಿದ್ದ ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್ನ IAS ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು. ಅಲ್ಲದೇ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು. ಇದೀಗ ಅವರ ನಿಧನಕ್ಕೆ ಪೊಲೀಸ್ ಇಲಾಖೆ ಸೇರಿ ವಿವಿಧ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.



