ಕೋಲಾರ: ಹಣಕಾಸಿನ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರ ತಾಲೂಕಿನ ಛತ್ರಕೋಡಿಹಳ್ಳಿ ಸಮೀಪ ನಡೆದಿದೆ.
ಬೆಗ್ಲಿಬೆಣಜೇನಹಳ್ಳಿ ಗ್ರಾಮದ ಸುರೇಶ್ ಅವರ ಪತ್ನಿ ಪ್ರಮೀಳಾ (36), ಪುತ್ರಿ ಸ್ವಪ್ನ (22) ಹಾಗೂ ಪುತ್ರ ಚರಣ್ (18) ಮೃತರಾಗಿದ್ದಾರೆ. ಒಂದೇ ಕುಟುಂಬದ ಮೂವರು ಒಂದೇ ವೇಳೆ ಸಾವನ್ನಪ್ಪಿರುವ ಘಟನೆ ಗ್ರಾಮದಲ್ಲಿ ತೀವ್ರ ದುಃಖದ ವಾತಾವರಣ ನಿರ್ಮಿಸಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮನೆಯಲ್ಲಿನ ಹಣಕಾಸಿನ ಸಮಸ್ಯೆ ಹಾಗೂ ಸಾಲದ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ಕುಟುಂಬದಲ್ಲಿ ಮನಸ್ತಾಪ ಉಂಟಾಗಿತ್ತು. ಸಾಲದ ಒತ್ತಡ ಮತ್ತು ಕೌಟುಂಬಿಕ ಕಲಹದಿಂದ ಮನನೊಂದ ಪ್ರಮೀಳಾ ಅವರು ತಮ್ಮ ಇಬ್ಬರು ಮಕ್ಕಳೊಂದಿಗೆ ಮನೆಯಿಂದ ಹೊರಬಂದು ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದು, ಎಲ್ಲಾ ಆಯಾಮಗಳಿಂದ ಪ್ರಕರಣವನ್ನು ಪರಿಶೀಲಿಸುತ್ತಿದ್ದಾರೆ.

