ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಉತ್ತಮ ಪರಿಸರ ನಿರ್ಮಾಣದಿಂದ ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ. ಆದ್ದರಿಂದ ಗ್ರಾಮಸ್ಥರು ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿ, ಪ್ರತಿಯೊಬ್ಬರೂ ಹಸಿರು ಪರಿಸರವನ್ನು ನಿರ್ಮಿಸುವಲ್ಲಿ ಮುಂದಾಗಬೇಕೆಂದು ಜಿಲ್ಲಾ ನೌಕರರ ಸಂಘದ ಮಾಜಿ ಅಧ್ಯಕ್ಷ ರವಿ ಗುಂಜಿಕರ್ ಸಲಹೆ ನೀಡಿದರು.
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಛ ಭಾರತ ಮಿಷನ್(ಗ್ರಾಮೀಣ) ಯೋಜನೆಯ ಸಹಯೋಗದಿಂದ ಇಲ್ಲಿಯ ಗ್ರಾಮ ಪಂಚಾಯಿತಿಯು ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಂಚಾಯಿತಿ ಆವರಣದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಸ್. ಪೂಜಾರ ಮಾತನಾಡಿ, ಗ್ರಾಮದ ನೈರ್ಮಲ್ಯವನ್ನು ಕಾಪಾಡಿ ಸ್ವಚ್ಛ, ಸುಂದರ ಗ್ರಾಮವನ್ನಾಗಿ ಪರಿವರ್ತನೆ ಮಾಡಬೇಕಾಗಿದೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಗ್ರಾಮ ಪಂಚಾಯಿತಿಯ ನಿಕಟವರ್ತಿಯಾಗಿ ಕೆಲಸ ಮಾಡಲು ಹಾಗೂ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಎಲ್ಲರ ಸಹಕಾರ ಅವಶ್ಯವಾಗಿದೆ ಎಂದರು.
ಜಿಲ್ಲಾ ಪಂಚಾಯಿತಿಯ ಸ್ವಚ್ಛ ಭಾರತ ಮಿಷನ್ ಯೋಜನೆಯ ಜಿಲ್ಲಾ ಸಂಯೋಜಕ ಕೃಷ್ಣ ದೊಡ್ಡಮನಿ ಅವರು ಯೋಜನೆಯ ರೂಪುರೂಪರೇಷೆಗಳನ್ನು ತಿಳಿಸುತ್ತ, ಪ್ಲಾಸ್ಟಿಕ್ ತ್ಯಾಜ್ಯವನ್ನು ಸಮರ್ಪಕವಾಗಿ, ವೈಜ್ಞಾನಿಕವಾಗಿ ಗ್ರಾಮದಲ್ಲಿ ಮುಕ್ತ ಮಾಡಲು ಎಲ್ಲರ ಸಹಕಾರ ನೀಡಬೇಕೆಂದರು. ಸ್ವಚ್ಛ ಭಾರತ ಮಿಷನ್ ಗ್ರಾಮೀಣ ಯೋಜನೆ ಅಡಿಯಲ್ಲಿ ಪ್ರಸ್ತಕ ಸಾಲಿನಲ್ಲಿ ಸರಕಾರವು ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ವಿಶೇಷ ಅಂದೋಲನವನ್ನು ಹಮ್ಮಿಕೊಂಡಿದೆ ಎಂದರು.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಚಾಲಕಿ ಬಿ.ಕೆ. ಸರೋಜಕ್ಕ ಅವರು ಮಾತನಾಡಿ, ಪರಮಾತ್ಮನ ಜ್ಞಾನವನ್ನು ಅಳವಡಿಸಿಕೊಳ್ಳುವುದ ಮೂಲಕ ಪರಿಸರದ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿರುತ್ತದೆ. ಎಲ್ಲಿ ಪರಿಸರ ಧನಾತ್ಮಕವಾಗಿರುತ್ತದೆಯೋ, ಅಲ್ಲಿ ಪರಮಾತ್ಮ ನೆಲೆಸಿರುತ್ತಾನೆ ಎಂದರು.
ಪಿ.ಡಿ.ಒ ಅಮೀರ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾ. ಪಂ ಸರ್ವ ಸದಸ್ಯರು, ಜಿಲ್ಲಾ ಎಸ್.ಸಿ-ಎಸ್ಟಿ ದೌರ್ಜನ್ಯ ನಿಯಂತ್ರಣ ಸಮಿತಿಯ ಸದಸ್ಯ ಬಸವರಾಜ ಮುಳ್ಳಾಳ, ಭಾರತೀಯ ಕಿಸಾನ ಸಂಘದ ತಾಲೂಕು ಘಟಕದ ಅಧ್ಯಕ್ಷ ವೆಂಕಟೇಶ ದೊಂಗಡೆ, ಗ್ರಾಮ ಪಂಚಾಯಿತಿ ಮಟ್ಟದ ಮಹಿಳಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಕಸ್ತೂರೆವ್ವ ಗುಂಜಳ, ಚಂದ್ರಕಲಾ ಮಾಡಲಗೇರಿ, ಶೈಲಾ ಅಂಬಕ್ಕಿ, ಆಶಾ, ಅಂಗನವಾಡಿ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು. ಗ್ರಾ.ಪಂ ಕಾರ್ಯದರ್ಶಿ ಪ್ರದೀಪ ಆಲೂರ ಸ್ವಾಗತಿಸಿದರು. ಎಂ.ಎ. ಗಾಜಿ ವಂದಿಸಿದರು.
ಪ್ಲಾಸ್ಟಿಕ್ ತ್ಯಾಜ್ಯ, ಹಸಿ ಕಸ-ಒಣ ಕಸವನ್ನು ಮನೆ ಮನೆಯಿಂದ ಸಂಗ್ರಹಿಸುವ ಕಾರ್ಯವನ್ನು ಇನ್ನು ಮುಂದೆ ಗ್ರಾಮ ಪಂಚಾಯಿತಿ ಮಟ್ಟದ ಮಹಿಳಾ ಸಂಜೀವಿನಿ ಒಕ್ಕೂಟಕ್ಕೆ ವಹಿಸಲಾಗಿದೆ. ಗ್ರಾಮ ಪಂಚಾಯಿತಿ ವಾಹನದ ಮೂಲಕ ತರಬೇತಿ ಹೊಂದಿದ ಮಹಿಳಾ ಚಾಲಕರಿಂದ ಚಲಿಸಿಕೊಂಡು ತ್ಯಾಜ್ಯ ವಸ್ತು ಘಟಕಕ್ಕೆ ಸಾಗಿಸಿ ಗ್ರಾಮದ ನೈರ್ಮಲ್ಯವನ್ನು ಕಾಪಾಡಲು ಮುಂದಾಗಬೇಕು ಎಂದು ಪಿ.ಡಿ.ಒ ಅಮೀರ ನಾಯಕ ಹೇಳಿದರು.