ಬಾಗಲಕೋಟೆ: ಸರ್ಕಾರಿ ಶಾಲೆಯ ಪ್ರವೇಶ ದ್ವಾರದ ಭಾರೀ ಗೇಟ್ ಏಕಾಏಕಿ ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಬಲಕುಂದಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಗಾಯಗೊಂಡ ನಾಲ್ವರಲ್ಲಿ ಮೂರನೇ ತರಗತಿ ವಿದ್ಯಾರ್ಥಿನಿ ನಯನಾಕುಮಾರಿ ಗಂಭೀರವಾಗಿ ಗಾಯಗೊಂಡಿದ್ದು, ತಲೆಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ರಕ್ತಸ್ರಾವವಾಗಿದೆ. ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಆಕೆಯನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳು ವಿದ್ಯಾರ್ಥಿಗಳು ಹಾಗೂ ಗಾಯಗೊಂಡ ಆಯಾಗೆ ಇಳಕಲ್ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದೆ.
ಶಾಲೆಯ ಗೇಟ್ ತೆರೆಯುವ ವೇಳೆ ಅದರ ಕೊಂಡಿ ಕಳಚಿ, ಸುಮಾರು 5 ಕ್ವಿಂಟಲ್ ತೂಕದ ಕಬ್ಬಿಣದ ಗೇಟ್ ಏಕಾಏಕಿ ಕೆಳಗೆ ಬಿದ್ದಿದೆ. ಇದೇ ವೇಳೆ ಅಲ್ಲಿದ್ದ ಮಕ್ಕಳ ಮೇಲೆ ಗೇಟ್ ಬಿದ್ದ ಪರಿಣಾಮ ಅವಘಡ ಸಂಭವಿಸಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಇಳಕಲ್ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಜಾಸ್ಮಿನ್ ಕಿಲ್ಲೇದಾರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.
ಗಂಭೀರವಾಗಿ ಗಾಯಗೊಂಡ ನಯನಾಕುಮಾರಿಯ ಪೋಷಕರು ಮೂಲತಃ ಉತ್ತರ ಪ್ರದೇಶದವರಾಗಿದ್ದು, ಉದ್ಯೋಗ ನಿಮಿತ್ತ ಬಲಕುಂದಿಗೆ ವಲಸೆ ಬಂದು ನೆಲೆಸಿದ್ದಾರೆ. ವಿದ್ಯಾರ್ಥಿನಿಯ ತಂದೆ ಸ್ಥಳೀಯ ಟೈಲ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ತಮ್ಮ ಮಗಳು ಶೀಘ್ರ ಗುಣಮುಖಳಾಗಲಿ ಎಂದು ಕುಟುಂಬಸ್ಥರು ಆಶಿಸುತ್ತಿದ್ದಾರೆ.
ಘಟನೆಯ ಬಳಿಕ ಶಾಲೆಯ ಕಟ್ಟಡ ಮತ್ತು ಮೂಲಸೌಕರ್ಯಗಳ ಸುರಕ್ಷತೆ ಕುರಿತು ಪ್ರಶ್ನೆಗಳು ಎದ್ದಿದ್ದು, ಇಂತಹ ಅವಘಡಗಳು ಮರುಕಳಿಸದಂತೆ ಶಾಲೆಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.



