ಬಾಗಲಕೋಟೆ:- ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟೆ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.
ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರು ಕಲ್ಲಿನ ಕ್ವಾರಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ಮನೋಜ್ (17) ಹಾಗೂ ಪ್ರಮೋದ್ ಬಡಿಗೇರ (17) ಎಂದು ಗುರುತಿಸಲಾಗಿದ್ದು, ಇಬ್ಬರೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದರು. ಸಂಕ್ರಾಂತಿ ಹಬ್ಬದ ಹಿನ್ನೆಲೆ ಕಾಲೇಜಿಗೆ ರಜೆ ಇದ್ದ ಕಾರಣ, ಸ್ನಾನಕ್ಕಾಗಿ ಕ್ವಾರಿಯ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ನೀರಿನಲ್ಲಿ ಮುಳುಗುತ್ತಿದ್ದ ಇನ್ನೊಬ್ಬ ಬಾಲಕನನ್ನು ಸ್ಥಳೀಯ ವ್ಯಕ್ತಿಯೊಬ್ಬರು ಸಮಯಕ್ಕೆ ಸರಿಯಾಗಿ ರಕ್ಷಿಸಿದ್ದಾರೆ. ಆದರೆ ಮನೋಜ್ ಹಾಗೂ ಪ್ರಮೋದ್ ಅವರನ್ನು ನೀರಿನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾದರೂ, ವೈದ್ಯರು ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ.
ಈ ಘಟನೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದ್ದು, ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



