ನೆಲಮಂಗಲ: ಐಪಿಎಲ್ ಬೆಟ್ಟಿಂಗ್ ವ್ಯಸನ ಮತ್ತೊಂದು ಜೀವ ಬಲಿ ಪಡೆದಿದೆ. ಬೆಟ್ಟಿಂಗ್ನಲ್ಲಿ ಭಾರೀ ನಷ್ಟ ಅನುಭವಿಸಿ ಮೈತುಂಬ ಸಾಲ ಮಾಡಿಕೊಂಡಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ತಮಿಳುನಾಡಿನ ಸಿಂಗಸದನಪಲ್ಲಿ ಮೂಲದ ಶಿವಕುಮಾರ್ (28) ಎಂದು ಗುರುತಿಸಲಾಗಿದೆ. ಕಳೆದ ಆರು ವರ್ಷಗಳಿಂದ ನೆಲಮಂಗಲದಲ್ಲಿ ವಾಸವಾಗಿದ್ದ ಶಿವಕುಮಾರ್ ಕಾರ್ ಗ್ಯಾರೇಜ್ನಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ.
ಐಪಿಎಲ್ ಬೆಟ್ಟಿಂಗ್ನಲ್ಲಿ ನಿರಂತರ ಹಣ ಕಳೆದುಕೊಂಡಿದ್ದ ಆತ, ಸಾಲದ ಒತ್ತಡದಿಂದ ಮಾನಸಿಕವಾಗಿ ಕುಗ್ಗಿದ್ದ ಎನ್ನಲಾಗಿದೆ. ಎರಡು ದಿನಗಳ ಹಿಂದೆ ತನ್ನ ಬಾಡಿಗೆ ಕೊಠಡಿಯಲ್ಲಿ ಸೆಲ್ಫಿ ವಿಡಿಯೋ ರೆಕಾರ್ಡ್ ಮಾಡಿಕೊಂಡು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿಡಿಯೋದಲ್ಲಿ, “ನನ್ನ ಸಾವಿಗೆ ನಾನೇ ಕಾರಣ. ಬೇರೆ ಯಾರಿಗೂ ಸಂಬಂಧ ಇಲ್ಲ. ಸಾಲದ ಹೊರೆ ತಾಳಲು ಆಗುತ್ತಿಲ್ಲ. ನನ್ನ ಸ್ನೇಹಿತ ನನಗೆ ಸಾಕಷ್ಟು ಸಹಾಯ ಮಾಡಿದ್ದಾನೆ. ನಾನು ಸ್ವತಃ ಈ ನಿರ್ಧಾರ ತೆಗೆದುಕೊಂಡಿದ್ದೇನೆ” ಎಂದು ಹೇಳಿದ್ದಾನೆ.
ಘಟನಾ ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಐಪಿಎಲ್ ಬೆಟ್ಟಿಂಗ್ ವ್ಯಸನದಿಂದ ಯುವಕರು ಜೀವನ ಕಳೆದುಕೊಳ್ಳುತ್ತಿರುವ ಘಟನೆಗಳು ಹೆಚ್ಚುತ್ತಿದ್ದು, ಇದು ಮತ್ತೆ ಆತಂಕಕ್ಕೆ ಕಾರಣವಾಗಿದೆ.



