ವೃಕ್ಷಮಾತೆ ‘ಸಾಲು ಮರದ ತಿಮ್ಮಕ್ಕ’ ನಿಧನ: ಸಚಿವ ಈಶ್ವರ್ ಖಂಡ್ರೆ ಸಂತಾಪ.!

0
Spread the love

ಬೆಂಗಳೂರು: ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನಕ್ಕೆ ಗಣ್ಯರು ಸೇರಿದಂತೆ ಹಲವಾರು ಮಂದಿ ಕಂಬನಿ ಮಿಡಿದಿದ್ದಾರೆ. ಇದೀಗ  ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ   ಸಂತಾಪ ಸೂಚಿಸಿದ್ದಾರೆ.

Advertisement

ಸಾಲುಮರದ ತಿಮ್ಮಕ್ಕ ಕರ್ನಾಟಕದ ಹೆಮ್ಮೆಯ ಪರಿಸರ ಪ್ರಚಾರಕರಾಗಿದ್ದರು. ಮಕ್ಕಳಿಲ್ಲದ ಈ ಮಹಾತಾಯಿ ಮರಗಳನ್ನೇ ಮಕ್ಕಳಂತೆ ಬೆಳೆಸುವ ಮೂಲಕ ಹಸಿರಿನ ಮಹತ್ವವನ್ನು ಜಗತ್ತಿಗೆ ಸಾರಿದ್ದರು.

ಅನಕ್ಷರಸ್ಥರಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿ, ಗೌರವ ಡಾಕ್ಟರೇಟ್‌ಗೆ ಪಾತ್ರರಾಗಿದ್ದರು. ಜೊತೆಗೆ ಅವರಿಗೆ ಪದ್ಮಶ್ರೀ ಸೇರಿದಂತೆ ಅತ್ಯುನ್ನತ ಪ್ರಶಸ್ತಿಗಳು ಲಭಿಸಿದ್ದವು ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ತಿಮ್ಮಕ್ಕನವರು ಎಷ್ಟು ಮುಗ್ಧರಾಗಿದ್ದರೆಂದರೆ ತಮಗೆ ಪ್ರಶಸ್ತಿ ನೀಡಿದ ರಾಷ್ಟ್ರಪತಿಗಳ ತಲೆಯ ಮೇಲೆ ಕೈಯಿಟ್ಟು ಆಶೀರ್ವಾದ ಮಾಡಿದ್ದರು. ಅಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕೂಡ ಅಷ್ಟೇ ಮುಗ್ಧತೆಯಿಂದ ಅವರ ಆಶೀರ್ವಾದವನ್ನು ಸ್ವೀಕರಿಸಿದ್ದರು ಎಂದು ಸ್ಮರಿಸಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನವರಾಗಿದ್ದ ತಿಮ್ಮಕ್ಕನವರು, ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದ ಬಿಕ್ಕಲ ಚಿಕ್ಕಯ್ಯ ಅವರನ್ನು ವರಿಸಿದ ಬಳಿಕ ಹುಲಿಕಲ್‌ಗೆ ಬಂದು ನೆಲೆಸಿದರು. ಬಹುಕಾಲ ಮಕ್ಕಳಾಗದ ದಂಪತಿ ತಮ್ಮ ನೋವು ಮರೆಯಲು ಕುದೂರಿನಿಂದ ಹುಲಿಕಲ್ ತನಕವಿರುವ ರಾಜ್ಯ ಹೆದ್ದಾರಿ 94ರಲ್ಲಿ ಸಸಿ ನೆಡಲು ಪ್ರಾರಂಭಿಸಿದರು.
ಇವರು ನೆಟ್ಟ 385 ಆಲದ ಮರಗಳು ಇಂದಿಗೂ ನೂರಾರು ಪಕ್ಷಿಗಳಿಗೆ ಆಶ್ರಯ ನೀಡಿದೆ. ಬಿಸಲಲ್ಲಿ ಬಳಲಿ ಬಂದವರಿಗೆ ನೆರಳಾಗಿವೆ. ಇವರಿಂದ ಪ್ರೇರಣೆ ಪಡೆದು ನೂರಾರು ಯುವಕರು ವೃಕ್ಷ ಸಂವರ್ಧನೆ ಮಾಡಿದ್ದಾರೆ. ನಮ್ಮ ಇಲಾಖೆ ಸಾಲುಮರದ ತಿಮ್ಮಕ್ಕ ಅವರ ಹೆಸರಲ್ಲಿ ವೃಕ್ಷೋದ್ಯಾನಗಳನ್ನು ನಿರ್ಮಿಸಿದೆ ಎಂದು ತಿಳಿಸಿದ್ದಾರೆ.

 

 


Spread the love

LEAVE A REPLY

Please enter your comment!
Please enter your name here