ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಶಿಕ್ಷಣ ವ್ಯವಸ್ಥೆಯಲ್ಲಿ ಪ್ರವಾಸಗಳು ಒಂದು ಭಾಗವಾಗಿದ್ದು, ಪ್ರವಾಸಗಳಿಂದ ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಪೂರಕವಾಗುತ್ತವೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಅಭಿಪ್ರಾಯಪಟ್ಟರು.
ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಸೋಮವಾರ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ನಂ.4ರಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮ `ಕರ್ನಾಟಕ ದರ್ಶನ’ಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇಶ ಸುತ್ತು, ಕೋಶ ಓದು ಎಂಬ ಮಾತಿನಂತೆ ಪ್ರವಾಸವು ವಿದ್ಯಾರ್ಥಿ ಜೀವನದಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ. ಪ್ರವಾಸ ಮಾಡುವುದರಿಂದ ವಿದ್ಯಾರ್ಥಿಗಳ ಸೃಜನಶೀಲ ಸಾಮರ್ಥ್ಯ ವೃದ್ಧಿಸುತ್ತದೆ. ವಿದ್ಯಾರ್ಥಿಗಳಲ್ಲಿ ನಮ್ಮ ನಾಡು, ನಮ್ಮ ನೆಲದ ಬಗ್ಗೆ ಅಭಿಮಾನ ಮೂಡುತ್ತದೆ. ಇಂತಹ ಯೋಜನೆಗಳು ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದ್ದು, ಕಾಳಜಿಯಿಂದ ಪ್ರವಾಸವನ್ನು ಯಶಸ್ವಿಯಾಗಿ ಪೊರೈಸುವಂತೆ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಲಕ್ಮೇಶ್ವರ ಪುರಸಭೆಯ ಅಧ್ಯಕ್ಷೆ ಯಲ್ಲವ್ವ ದುರ್ಗಣ್ಣವರ ಯಶಸ್ವಿಯಾಗಿ ಪ್ರವಾಸ ಜರುಗಲಿ ಎಂದು ಶುಭಕೋರಿದರು. ನೇತೃತ್ವ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ಪ್ರವಾಸದ ನಿಯಮಗಳು ಹಾಗೂ ಎಚ್ಚರಿಕೆಗಳ ಬಗ್ಗೆ ವಿವರಿಸಿದರು. ಪುರಸಭೆಯ ಉಪಾಧ್ಯಕ್ಷ ಫಿರ್ದೋಷ್ ಆಡೂರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಸ್. ಹರ್ಲಾಪುರ, ಎಸ್.ಡಿ. ಲಮಾಣಿ ಶುಭ ಹಾರೈಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಪುರಸಭೆಯ ಸದಸ್ಯ ಬಸವರಾಜ ಓದುನವರ, ಎಸ್.ಡಿ.ಎಂ.ಸಿ ಅಧ್ಯಕ್ಷೆ ಅಮೀನಾ ಮಹತ್, ಮುಖ್ಯೋಪಾಧ್ಯಾಯರಾದ ಹೆಚ್.ಬಿ. ಸಣ್ಣಮನಿ, ಬಿ.ಸಿ. ಪಟ್ಟೇದ, ದೈಹಿಕ ಶಿಕ್ಷಣ ಪರೀಕ್ಷಣಾಧಿಕಾರಿ ಎಂ.ಎಂ. ಹವಳದ, ನೋಡಲ್ ಇ.ಸಿ.ಓ ಹರೀಶ ಎಸ್, ಸಿಆರ್ಪಿ ಸತೀಶ್ ಭೋಮಲೆ, ಎಸ್.ಡಿ.ಎಂ.ಸಿ ಸದಸ್ಯರು, ವಿವಿಧ ಶಾಲೆಗಳ ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರೌಢವಿಭಾಗದ ಬಿ.ಆರ್.ಪಿ ಈಶ್ವರ ಮೆಡ್ಲೇರಿ ನಿರ್ವಹಿಸಿದರು. ಸಿ.ಆರ್.ಪಿ ಉಮೇಶ ನೇಕಾರ ವಂದಿಸಿದರು.