ಬೆಂಗಳೂರು: ಇಡೀ ದೇಶದಲ್ಲಿ ವಾತಾವರಣ ಬಿಜೆಪಿ ಪರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ವಿಶ್ಲೇಷಿಸಿದರು. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಜೀ ಅವರು ಪ್ರಧಾನಮಂತ್ರಿ ಆಗಬೇಕೆಂಬ ಆಸೆ ಜನತೆಯಲ್ಲಿ ಇದೆ ಎಂಬುದು ಈ ಪಂಚರಾಜ್ಯ ಚುನಾವಣಾ ಫಲಿತಾಂಶದಿಂದ ಗೊತ್ತಾಗಿದೆ ಎಂದು ತಿಳಿಸಿದರು.
ಪಂಚರಾಜ್ಯ ಚುನಾವಣೆ ಒಂದು ರೀತಿಯ ಸೆಮಿ ಫೈನಲ್ ಎಂದು ವಿಶ್ಲೇಷಿಸಲಾಗುತ್ತಿತ್ತು. ಸುನಾಮಿ ರೀತಿಯಲ್ಲಿ ಬಿಜೆಪಿ ಅಲೆ ಎದ್ದಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದರು. 5 ರಾಜ್ಯಗಳ ವಿಜಯ, ವಿಜಯ ಯಾತ್ರೆ ಇಲ್ಲಿಗೇ ನಿಲ್ಲುವುದಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿಜೀ ಅವರು ಪ್ರಧಾನಿ ಆಗುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ವಿಷಯದಲ್ಲಿ ಯಾವುದೇ ಅನುಮಾನ ಉಳಿದಿಲ್ಲ ಎಂದು ತಿಳಿಸಿದರು.