ವಿಜಯಸಾಕ್ಷಿ ಸುದ್ದಿ, ಗದಗ : ಅವಳಿ ನಗರದ ಸ್ಲಂ ಪ್ರದೇಶಗಳ ಜನರು ತಮಗೆ ಸಿಗಬೇಕಾದ ಮೂಲಭೂತ ಹಕ್ಕುಗಳಿಂದ ವಂಚಿತರಾಗಿ ಅನೇಕ ಸಮಸ್ಯಗಳಿಂದ ಬಳಲುತ್ತಿದ್ದಾರೆ. ಗದಗ ಜಿಲ್ಲಾ ಸ್ಲಂ ಸಮಿತಿಯಿಂದ ನಗರದ ಕೊಳಗೇರಿ ಜನರ ಸಮಸ್ಯೆಗಳ ಪರಿಹಾರಕ್ಕಾಗಿ ಕಳೆದ ಹಲವಾರು ವರ್ಷಗಳಿಂದ ಸತತ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಇದನ್ನು ಗಮನಿಸಿ ಗದಗ-ಬೆಟಗೇರಿ ಅವಳಿ ನಗರದ ಸ್ಲಂ ಜನರು ತಮ್ಮ ಪ್ರದೇಶಗಳ ಅಭಿವೃದ್ಧಿಗಾಗಿ ಸಂಘಟಿತ ಹೋರಾಟ ನಡೆಸಿದರೆ ಕೊಳಗೇರಿಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಜೀವಜಲ ಭಾರತ ಸಂಸ್ಥೆಯ ಮುಖಂಡ ಜೋಸೆಫ್ ಸಂಕೇಶ್ವರ ಹೇಳಿದರು.
ಅವರು ನವನಗರ ಸ್ಲಂ ಪ್ರದೇಶದಲ್ಲಿ ಜೀವಜಲ ಭಾರತ ಸಂಸ್ಥೆ, ಗದಗ ಜಿಲ್ಲಾ ಸ್ಲಂ ಸಮಿತಿಯ ಸಹಕಾರದಲ್ಲಿ ಕೊಳವೆ ಬಾವಿ ಕೊರೆಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಮನಿಸಿ ಬಡ ಜನರು ಹೆಚ್ಚು ವಾಸವಾಗಿರುವ ಪ್ರದೇಶಗಳಲ್ಲಿ ಕೊಳವೆ ಬಾವಿ ಕೊರೆಸುವ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದರು.
ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ಮಾತನಾಡಿ, ಸ್ಲಂ ಪ್ರದೇಶಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಯಿಸಿ ಸ್ಲಂ ಜನರ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿರುವ ಸಂಸ್ಥೆಯ ಎಲ್ಲಾ ಮುಖಂಡರಿಗೆ ಧನ್ಯವಾದಗಳನ್ನು ಸಲ್ಲಿಸಿದರು.
ಜೀವಜಲ ಭಾತರ ಸಂಸ್ಥೆಯ ಸಂಯೋಜಕ ಜಕರಾಯ, ಸ್ಲಂ ಸಮಿತಿ ಉಪಾಧ್ಯಕ್ಷ ರವಿಕುಮಾರ ಬೆಳಮಕರ, ಕಾರ್ಯದರ್ಶಿ ಅಶೋಕ ಕುಸಬಿ, ಮೆಹಬೂಬ ಬಳ್ಳಾರಿ, ಇಬ್ರಾಹಿಮ ಮುಲ್ಲಾ, ಮಕ್ತುಮಸಾ ಮುಲ್ಲಾನವರ, ದುರ್ಗಪ್ಪ ಮಣ್ಣವಡ್ಡರ, ಮಲೇಶಪ್ಪ ಕಲಾಲ, ಖಾಜಾಸಾಬ ಇಸ್ಮಾಯಿಲನವರ, ಮೆಹರುನಿಸಾ ಡಂಬಳ ಹಾಗೂ ಮುಖಂಡರು ಉಪಸ್ಥಿತರಿದ್ದರು.