ಕೊಪ್ಪಳ: ಮಳೆ ಕೊರತೆಯಿಂದ ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ತೀವ್ರವಾಗಿ ಕುಸಿದಿದ್ದು, ಮುಂಗಾರು ಬೆಳೆಗಳಿಗೆ ಎಡ ಮತ್ತು ಬಲದಂಡೆ ನಾಲೆಗಳ ಮೂಲಕ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ನೀರಾವರಿ ನಿಗಮ ತಿಳಿಸಿದೆ.
ಸರ್ಕಾರದ ನಿರ್ದೇಶನದಂತೆ ಸದ್ಯ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ರೈತರು ಸಹಕರಿಸುವಂತೆ ನೀರಾವರಿ ನಿಗಮ ಮನವಿ ಮಾಡಿದೆ.
ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಿ ತುಂಗಭದ್ರಾ ಜಲಾಶಯ ಭರ್ತಿಯಾದರೆ, ಕೃಷಿ ನೀರು ಬಿಡುಗಡೆ ಮಾಡುವ ಕುರಿತು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೀರಾವರಿ ನೀರು ಸಿಗದ ಹಿನ್ನೆಲೆಯಲ್ಲಿ ಮುಂಗಾರು ಬಿತ್ತನೆ ಮಾಡಿರುವ ಹಾಗೂ ಬಿತ್ತನೆಗೆ ಸಿದ್ಧತೆ ನಡೆಸುತ್ತಿರುವ ರೈತರು ಆತಂಕಕ್ಕೆ ಒಳಗಾಗಿದ್ದು, ಮುಂದಿನ ಕೃಷಿ ಚಟುವಟಿಕೆಗಳ ಬಗ್ಗೆ ದಿಕ್ಕು ತೋಚದ ಪರಿಸ್ಥಿತಿ ನಿರ್ಮಾಣವಾಗಿದೆ.



