ಬೆಂಗಳೂರು: ಟನಲ್ ರಸ್ತೆ ವಿಚಾರವಾಗಿ ವಿಪಕ್ಷ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿಯೇ ಸಮಿತಿ ರಚನೆ ಮಾಡಲು ನಾನು ತಯಾರಿದ್ದೇನೆ. ಅವರು ಸೂಚಿಸಿದ ಕಡೆಯೇ ಲಾಲ್ ಬಾಗ್ ಬಳಿ ಪ್ರವೇಶ- ನಿರ್ಗಮನ ತಾಣ ರೂಪಿಸಲಾಗುವುದು.” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು.
“ಅಶೋಕ್ ಅವರು ಧರಣಿ ಕೂರುವ ಅವಶ್ಯಕತೆಯಿಲ್ಲ. ಏಕೆಂದರೆ ಅವರು ಬೆಂಗಳೂರಿನವರು. ಇಲ್ಲಿಂದ ಏಳೆಂಟು ಬಾರಿ ಗೆದ್ದಿದ್ದಾರೆ. ಅವರಿಗೂ ಜವಾಬ್ದಾರಿಯಿದೆ. ಅವರ ನೇತೃತ್ವದಲ್ಲಿ ರಚಿಸಿದ ಸಮಿತಿಯೇ ಸರ್ಕಾರಕ್ಕೆ ಸಲಹೆ, ನಿರ್ದೇಶನ ನೀಡಲಿ. ಟನಲ್ ಯೋಜನೆಯನ್ನು ಅವರೂ ಗಮನಿಸಲಿ. ಅಶ್ವಥ ನಾರಾಯಣ್ ಸೇರಿ ಬೇರೆ ಯಾರ ಹೆಸರನ್ನು ಸೂಚಿಸಿದರು ಅವರನ್ನು ಈ ಸಮಿತಿಗೆ ಸೇರ್ಪಡೆ ಮಾಡಲಾಗುವುದು. ನಾವೆಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡಬೇಕು, ಮಾಡೋಣ” ಎಂದರು.
“ನಾನು ಶುಕ್ರವಾರ ರಾತ್ರಿ ಲಾಲ್ ಬಾಗ್ ಬಳಿ ತೆರಳಿ ಎಲ್ಲೆಲ್ಲಿ ಟನಲ್ ರಸ್ತೆಗೆ ಪ್ರವೇಶ ಕಲ್ಪಿಸಬಹುದು ಎಂದು ಪರಿಶೀಲನೆ ಮಾಡಿದ್ದೇನೆ. ಪರ್ಯಾಯ ಮಾರ್ಗಗಳ ಬಗ್ಗೆ ಆಲೋಚನೆ ನಡೆಸುತ್ತಿದ್ದೇನೆ. ಯಾವುದೇ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ” ಎಂದರು.
ಮಿಕ್ಕ ಯಾರ ಮಾತಿಗೂ ಕಿಮ್ಮತ್ತಿಲ್ಲ
ನವೆಂಬರ್ ಕ್ರಾಂತಿಯ ಬಗ್ಗೆ ಕೇಳಿದಾಗ, “ನಾನು ಹಾಗೂ ಮುಖ್ಯಮಂತ್ರಿಯವರು ಏನು ಮಾತನಾಡಿದ್ದೇವೆಯೋ ಅದು ಮಾತ್ರ ಮಾತು. ಮಿಕ್ಕ ಯಾರ ಮಾತಿಗೂ ಕಿಮ್ಮತ್ತು ಇಲ್ಲ” ಎಂದರು. ನೀವು ಒಮ್ಮತದಲ್ಲಿ ಇದ್ದೀರಾ ಎಂದು ಕೇಳಿದಾಗ, ” ಒಮ್ಮತದಲ್ಲಿ ಇರುವ ಕಾರಣಕ್ಕೇ 136 ಕ್ಷೇತ್ರ ಗೆದ್ದು 140 ಕ್ಕೆ ನಮ್ಮ ಬಲ ಹೆಚ್ಚಿರುವುದು” ಎಂದರು.ಮುಂದೆ ರಾಜ್ಯೋತ್ಸವದ ಧ್ವಜಾರೋಹಣವನ್ನು ನೀವು ಮಾಡುವ ಸನ್ನಿವೇಶ ಬರಲಿದೆಯೇ ಎಂದು ಕೇಳಿದಾಗ, “ಈಗ ಸ್ಟೇಡಿಯಂ ನಲ್ಲಿ ಮಾಡಿದ್ದು ಏನನ್ನು?” ಎಂದು ಮರು ಪ್ರಶ್ನಿಸಿದರು.



