ಚಾಮರಾಜನಗರ/ಚಿಕ್ಕಮಗಳೂರು: ಮುಂಗಾರು ಪೂರ್ವ ಮಳೆಯ ಆರ್ಭಟಕ್ಕೆ ರಾಜ್ಯದ ಹಲವೆಡೆ ಜನರು ಸಂಕಷ್ಟ ಎದುರಿಸುತ್ತಿದ್ದು, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆ ವ್ಯಾಪಕ ಹಾನಿ ಉಂಟುಮಾಡಿದೆ.
ಹನೂರು ತಾಲೂಕಿನ ಗುಳ್ಯದಬಯಲು ಗ್ರಾಮದಲ್ಲಿ ಮಳೆಯ ನೀರು ಮನೆಗಳಿಗೆ ನುಗ್ಗಿದ ಪರಿಣಾಮ ನಿವಾಸಿಗಳು ರಾತ್ರಿಯಿಡೀ ಜಾಗರಣೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಯಲ್ಲಿದ್ದ ಆಹಾರ ಧಾನ್ಯಗಳು ಮತ್ತು ಅಗತ್ಯ ವಸ್ತುಗಳು ನೀರಿನಲ್ಲಿ ಹಾನಿಗೊಳಗಾಗಿವೆ.
ಇತ್ತ ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಗೆ ಹಲವು ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಕೋಟೆ ಬಡಾವಣೆಯಲ್ಲಿ ಮನೆಗಳ ಮೇಲ್ಛಾವಣಿ ಹಾನಿಗೊಳಗಾಗಿದ್ದು, ಹಲವು ಪ್ರದೇಶಗಳಲ್ಲಿ ಅಪಾರ ಆಸ್ತಿ ನಷ್ಟ ಉಂಟಾಗಿದೆ.
ಜಿಲ್ಲಾ ನ್ಯಾಯಾಲಯದ ಎದುರು ಸಾಲುಸಾಲು ವಿದ್ಯುತ್ ಕಂಬಗಳು ಧರೆಗುರುಳಿದ ಪರಿಣಾಮ ನಗರದ ಅನೇಕ ಭಾಗಗಳು ಕತ್ತಲಲ್ಲಿ ಮುಳುಗಿವೆ. ಐಬಿ ಮುಂಭಾಗದ ಕಾಂಪೌಂಡ್ ಗೋಡೆಯೂ ಕುಸಿದಿದ್ದು, ನಗರದಲ್ಲಿ ವಿದ್ಯುತ್ ಪೂರೈಕೆ ಪುನಃಸ್ಥಾಪಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ಎಚ್ಚರಿಕೆಯಿಂದಿರಲು ಸಾರ್ವಜನಿಕರಿಗೆ ಸೂಚನೆ ನೀಡಿದೆ.



