ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಷ್ಟೇ ಅಲ್ಲದೆ ದೇಶದಾದ್ಯಂತ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ಪದವಿ ಪಡೆದವರು, ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಹ ಉದ್ಯೋಗವಿಲ್ಲದೆ ಪರದಾಡುತ್ತಿದ್ದಾರೆ. ಇದಕ್ಕೆ ಕೌಶಲ್ಯದ ಕೊರತೆ ಮುಖ್ಯ ಕಾರಣವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಸಂಜಯ ಶೆಟ್ಟಣ್ಣವರ ಹೇಳಿದರು.
ಅವರು ನಗರದ ಕನಕ ಭವನದಲ್ಲಿ ಶನಿವಾರ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಶ್ರೀ ಕಾಳಿದಾಸ ಶಿಕ್ಷಣ ಸಮಿತಿಯ ಸಂಯುಕ್ತಾಶ್ರಯದಲ್ಲಿ `ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ’ ಯೋಜನೆಯಡಿ ಅಲ್ಪಾವಧಿ ಕೋರ್ಸ್ಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೌಶಲ್ಯದ ಕೊರತೆಯಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ನಿರುದ್ಯೋಗಿಗಳಾಗಿದ್ದಾರೆ. ಇವರಲ್ಲಿ ಹಿಂದುಳಿದ ವರ್ಗದವರು, ದಲಿತರು, ಶೋಷಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರಿಗೆ ಕೌಶಲ್ಯ ತರಬೇತಿ ನೀಡುವ ಮೂಲಕ ಸ್ವಾವಲಂಬಿ ಬದುಕು ನಡೆಸಲು ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಕೌಶಲ್ಯ ತರಬೇತಿಯನ್ನು ಪಡೆದು ಸ್ವಉದ್ಯೋಗವನ್ನು ಆರಂಭಿಸಿ ಸ್ವಾವಲಂಬಿಗಳಾಗಬೇಕು ಎಂದರು.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಮಾತನಾಡಿ, ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದೆ. ಅವುಗಳನ್ನು ಸದುಪಯೋಗ ಪಡೆದುಕೊಂಡು ಯೋಜನೆಗಳನ್ನು ಸಾರ್ಥಕಪಡಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಉದ್ಯೋಗದಲ್ಲಿ ತೊಡಗಿಸಿಕೊಂಡರೆ ಸ್ವಾವಲಂಬಿಯಾಗಿ ಬದುಕಲು ಸಾಧ್ಯವಾಗುತ್ತದೆ. ದಿನನಿತ್ಯದ ಜೀವನದಲ್ಲಿ ಹಾಸುಹೊಕ್ಕಿರುವ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವದರ ಮೂಲಕ ಈ ತರಬೇತಿಯನ್ನು ಪಡೆದು ಸ್ವ ಉದ್ಯೋಗ ಆರಂಭಿಸಬೇಕು ಎಂದು ಹೇಳಿದರು.
ಗದಗ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಫಕೀರಪ್ಪ ಹೆಬಸೂರ ಅಧ್ಯಕ್ಷತೆವಹಿಸಿ ಮಾತನಾಡಿ, ಸಂಘ-ಸಂಸ್ಥೆಗಳು ಬೆಳೆಯಲು ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊಡುಗೆ ಗಣನೀಯವಾಗಿದೆ ಎಂದರು.
ಶ್ರೀ ಕಾಳಿದಾಸ ಶಿಕ್ಷಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಶಿಧರ ರೊಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ತರಬೇತಿ ಸಾಮಾಗ್ರಿ ಸಲಕರಣೆಗಳ ಕಿಟ್ಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ವೇದಿಕೆ ಮೇಲೆ ದೇವರಾಜ ಅರಸು ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕರಾದ ಟಿ. ಶ್ರೀನಿವಾಸಕುಮಾರ, ಮಡಿವಾಳ/ಸವಿತಾ/ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶ ಮಲ್ಲಿಕಾರ್ಜುನ ಮಠದ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಬಸವರಾಜ ಮಲ್ಲೂರ, ರಾಕೇಶ ಸಿದ್ದರಾಮಯ್ಯ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಆಡಳಿತಾಧಿಕಾರಿ ರಾಮಕೃಷ್ಣ ರೊಳ್ಳಿ, ಸಂಸ್ಥೆಯ ಪದಾಧಿಕಾರಿಗಳಾದ ಬಿ.ಬಿ. ಬಾವಿಕಟ್ಟಿ, ಎಸ್.ಎಸ್. ಕರಡಿ, ಕೆ.ಬಿ. ಕಂಬಳಿ, ಆರ್.ಎಂ. ನಿಂಬನಾಯ್ಕರ, ಎಸ್.ಡಿ. ಸಿಂಗಟಾಲಕೇರಿ, ಬಿ.ಎಚ್. ಹ್ಯಾಟಿ ಮುಂತಾದವರು ಉಪಸ್ಥಿತರಿದ್ದರು.
ಶ್ರೀ ಕಾಳಿದಾಸ ಶಿಕ್ಷಣ ಸಮಿತಿಯ ಕಾರ್ಯದರ್ಶಿ ವೈ.ಬಿ. ಬಾನಾಪುರ ಸ್ವಾಗತಿಸಿದರು. ಬಸವರಾಜ ಲದ್ದಿ ಕಾರ್ಯಕ್ರಮ ನಿರೂಪಿಸಿದರು. ರಾಕೇಶ ಸಿದ್ದರಾಮಯ್ಯ ಐಟಿಐ ಕಾಲೇಜಿನ ಪ್ರಾಚಾರ್ಯ ರಮೇಶ ವಡವಿ ವಂದಿಸಿದರು.
ದೇವರಾಜು ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕಾಂತರಾಜು ಮಾತನಾಡಿ, ಸ್ವಾತಂತ್ರ್ಯನಂತರದಲ್ಲಿ ಆಹಾರ ಮತ್ತು ವಸತಿಗೆ ಗಂಭೀರವಾದ ಸಮಸ್ಯೆಗಳಿದ್ದವು. ನಂತರ ಹಸಿರು ಕ್ರಾಂತಿಯಿಂದ ಹಂತ ಹಂತವಾಗಿ ಸಮಸ್ಯೆಗಳು ಕಡಿಮೆಯಾಗುತ್ತಾ ಬಂದಿದ್ದರೂ ಇಂದಿನ ದಿನಗಳಲ್ಲಿ ಉದ್ಯೋಗ ಸೃಷ್ಟಿ ತೀವ್ರ ಸ್ವರೂಪ ಪಡೆಯುತ್ತಿದ್ದು, ಈ ಬಗ್ಗೆ ಸರ್ಕಾರ ಗಂಭೀರ ಚಿಂತನೆಗಳನ್ನು ನಡೆಸಿದೆ. ನಿಗಮದಿಂದ ಹಲವಾರು ಯೋಜನೆಗಳ ಮೂಲಕ ನೂರಾರು ಕೋಟಿಗಳ ಅನುದಾನ ನೀಡುತ್ತಿದೆ. ಅಲ್ಲದೆ, ಸರ್ಕಾರವು 68 ವಿವಿಧ ಕ್ಷೇತ್ರದಲ್ಲಿ ಕೌಶಲ್ಯ ತರಬೇತಿ ನೀಡುವ ಚಿಂತನೆ ನಡೆಸಿದೆ ಎಂದು ಹೇಳಿದರು.