ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಅವರು ಗುರುವಾರ ನಗರದ ಹೊಸ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ, ಅಲ್ಲಿನ ಮೂಲಸೌಕರ್ಯ ಹಾಗೂ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು.
ಈ ವೇಳೆ ಬಸ್ ನಿಲ್ದಾಣದಲ್ಲಿರುವ ಕುಡಿಯುವ ನೀರಿನ ಘಟಕವನ್ನು ಪರಿಶೀಲಿಸಿದ ಅವರು, ಸಾರ್ವಜನಿಕರಿಗೆ ಪೂರೈಕೆಯಾಗುತ್ತಿರುವ ನೀರನ್ನು ತಕ್ಷಣ ಪರೀಕ್ಷೆಗೆ ಒಳಪಡಿಸಿ, ಅದು ಕುಡಿಯಲು ಯೋಗ್ಯವೇ ಎಂಬ ಕುರಿತು ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳಿಕ ಪ್ರಯಾಣಿಕರೊಂದಿಗೆ ನೇರವಾಗಿ ಸಂವಾದ ನಡೆಸಿದ ಉಪಲೋಕಾಯುಕ್ತರು, ಬಸ್ ನಿಲ್ದಾಣದಲ್ಲಿನ ಸ್ವಚ್ಛತೆ, ಕುಡಿಯುವ ನೀರು, ಆಸನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಕುರಿತು ಮಾಹಿತಿ ಪಡೆದು, ಅವುಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಬಸ್ಗಳು ನಿಗದಿತ ವೇಳಾಪಟ್ಟಿಯಂತೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಸೇವೆಯಲ್ಲಿ ಯಾವುದೇ ರೀತಿಯ ವಿಳಂಬ ಅಥವಾ ನಿರ್ಲಕ್ಷ್ಯ ಕಂಡುಬರಬಾರದು ಎಂದು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
“ಸಾರ್ವಜನಿಕರಿಗೆ ಸುರಕ್ಷಿತ ಕುಡಿಯುವ ನೀರು, ಸ್ವಚ್ಛ ವಾತಾವರಣ ಹಾಗೂ ಸಮಯಕ್ಕೆ ಸೇವೆ ಒದಗಿಸುವುದು ಸಂಬಂಧಪಟ್ಟ ಇಲಾಖೆಯ ಮೊದಲ ಜವಾಬ್ದಾರಿ.”
– ನ್ಯಾ. ಕೆ.ಎನ್. ಪಣೀಂದ್ರ, ಕರ್ನಾಟಕ ಉಪಲೋಕಾಯುಕ್ತ



