ನವದೆಹಲಿ:- ಇಂದು ನವದೆಹಲಿಯಲ್ಲಿ ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯುಟಿ ಖಾದರ್ ಅವರು ಭೇಟಿ ಮಾಡಿದ್ದಾರೆ. ಭೇಟಿ ವೇಳೆ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನವನ್ನು 2025ರ ಸೆಪ್ಟೆಂಬರ್ 9 ಮತ್ತು 10ರಂದು ನಡೆಸಲು ಕರ್ನಾಟಕವನ್ನು ಆಯ್ಕೆ ಮಾಡಿದಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಈ ವೇಳೆ ಸಮ್ಮೇಳನದಲ್ಲಿ ಭಾರತದ ಎಲ್ಲಾ ರಾಜ್ಯಗಳ ಪೀಠಾಸೀನ ಅಧಿಕಾರಗಳು ಭಾಗವಹಿಸುವುದಲ್ಲದೇ ಪ್ರಪ್ರಥಮ ಬಾರಿಗೆ ಅಂತರಾಷ್ಟ್ರೀಯ ಮಟ್ಟದ ಕಾಮನ್ ವೆಲ್ತ್ ದೇಶಗಳ ಪೀಠಾಸೀನಾಧಿಕಾರಿಗಳನ್ನು ಆಹ್ವಾನಿಸುವ ಕುರಿತು ಮತ್ತು ಸಮ್ಮೇಳನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಸಹ ಸಮಾಲೋಚನೆ ನಡೆಸಿದರು.
ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು 2025ರ ಸೆಪ್ಟೆಂಬರ್ 8ರಂದು ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ಹಮ್ಮಿಕೊಳ್ಳುವ ಬಗ್ಗೆ ಹಾಗೂ ಕರ್ನಾಟಕ ವಿಧಾನಸಭೆಯಲ್ಲಿ ಇತ್ತೀಚೆಗೆ ಜಾರಿಗೆ ತಂದಿರುವ ಅನೇಕ ಪ್ರಗತಿ ಪರ ಬದಲಾವಣೆಗಳನ್ನು ಸಹ ಲೋಕಸಭಾಧ್ಯಕ್ಷರ ಗಮನಕ್ಕೆ ತಂದಿದ್ದಾರೆ. ಬೆಂಗಳೂರು, ಅಂತರಾಷ್ಟ್ರೀಯವಾಗಿ ಸಿಲಿಕಾನ್ ಸಿಟಿಯಾಗಿರುವುದರಿಂದ ಇಂತಹ ಸಮ್ಮೇಳನಗಳನ್ನು ನಡೆಸುತ್ತಿರುವುದು ಅತ್ಯಂತ ಸೂಕ್ತ ಎಂದು ಲೋಕಸಭಾಧ್ಯಕ್ಷ ಓಂ ಬಿರ್ಲಾ ಹೇಳಿದ್ದಾರೆ.