ಬೆಂಗಳೂರು:- ಕರ್ನಾಟಕದ ಕರಾವಳಿ ಭಾಗದಲ್ಲಿ ನಾಳೆ ವರುಣ ಅಬ್ಬರಿಸಲಿದ್ದು, 3 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
27 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ಕಳೆದ ಎರಡು ಮೂರು ದಿನಗಳಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣ ಅಬ್ಬರಿಸುತ್ತಿದ್ದು, ಇದು ಇನ್ನೂ ಕೆಲ ದಿನ ಮುಂದುವರಿಯುವ ನಿರೀಕ್ಷೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ನಾಳೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ನಾಳೆ ಗುಡುಗು ಸಹಿತ ಭಾರಿ ಮಳೆಯ ನಿರೀಕ್ಷೆ ಇದೆ. ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಇರಲಿದ್ದು, ಪ್ರವಾಹ ಮತ್ತು ಗುಡ್ಡ ಪ್ರದೇಶದಲ್ಲಿ ಭೂಕುಸಿತವಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರಮ ಮಂಡ್ಯ, ಮೈಸೂರು, ಕೋಲಾರ, ತುಮಕೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಬಾಗಲಕೋಟೆಮ ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ ಮತ್ತು ಬಳ್ಳಾರಿಯಲ್ಲಿ ಭಾರಿ ಪ್ರಮಾಣದ ಮಳೆಯನ್ನು ನಿರೀಕ್ಷಿಸಲಾಗಿದೆ. ಹಾವೇರಿಯ ಕೆಲವೆಡೆ ಪ್ರವಾಹ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲೂ ನಾಳೆ ಮಳೆಯಾಗುವ ಸಾಧ್ಯತೆ ಇದ್ದು, ಸಂಜೆ ವೇಳೆಗೆ ವರುಣ ಆರ್ಭಟಿಸಬಹುದು ಎಂದು ಅಂದಾಜಿಸಲಾಗಿದೆ. ಸಂಜೆ 5ರಿಂದ ರಾತ್ರಿ 8ಗಂಟೆ ನಡುವೆ ಮಳೆಯನ್ನು ನಿರೀಕ್ಷಿಸಲಾಗಿದೆ. ಬೆಳಗ್ಗೆ ಮತ್ತು ಮಧ್ಯಾಹ್ನ ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 14-24 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.