ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ನಡೆದಿದ್ದ ವಸಂತ್ ನಾಯ್ಕ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ಏಳು ಆರೋಪಿಗಳಿಗೆ ಶಿರಸಿಯ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ಮಹತ್ವದ ಹಿನ್ನಡೆ ನೀಡಿದೆ. ಮಧ್ಯಂತರ ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದ್ದು, ಆರೋಪಿಗಳು ಸದ್ಯ ಜೈಲಿನಲ್ಲೇ ಮುಂದುವರಿಯಬೇಕಾಗಿದೆ.
ಕಳೆದ ಫೆಬ್ರವರಿಯಲ್ಲಿ ನಡೆದಿದ್ದ ಈ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲಾಕರ್ ಭಟ್, ಸುಚಿತ್ರಾ ಸೇರಿದಂತೆ ಒಟ್ಟು ಒಂಬತ್ತು ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಒಬ್ಬ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ. ಬಂಧಿತರಲ್ಲಿ ಒಬ್ಬರಿಗೆ ಈಗಾಗಲೇ ಜಾಮೀನು ದೊರೆತಿದ್ದು, ಉಳಿದ ಏಳು ಆರೋಪಿಗಳು ಮಧ್ಯಂತರ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು.
ಕಮಲಾಕರ್ ಭಟ್, ಸುಚಿತ್ರಾ, ಲೋಕನಾಥ್, ಮೊಹಮ್ಮದ್ ಮೆಹಫೂಜ್, ಮೊಹಮ್ಮದ್ ಫೈಸಲ್, ಇರ್ಫಾನ್ ಹಾಗೂ ಆಕಾಶ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಶಿರಸಿಯ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯವು ಎಲ್ಲ ಅರ್ಜಿಗಳನ್ನು ತಿರಸ್ಕರಿಸಿದೆ.
ಇದರೊಂದಿಗೆ ಕಳೆದ ಆರು ತಿಂಗಳಿಂದ ಕಾರವಾರ ಜೈಲಿನಲ್ಲಿರುವ ಆರೋಪಿಗಳಿಗೆ ಸದ್ಯ ಯಾವುದೇ ಕಾನೂನು ಪರಿಹಾರ ದೊರಕದಂತಾಗಿದೆ.
ಈ ನಡುವೆ ಕಮಲಾಕರ್ ಭಟ್ ವಿರುದ್ಧ ಮತ್ತೊಂದು ಗಂಭೀರ ಪ್ರಕರಣವೂ ದಾಖಲಾಗಿದೆ. ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಡಿ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಆ ಸಂಬಂಧವೂ ನ್ಯಾಯಾಂಗ ಪ್ರಕ್ರಿಯೆ ಮುಂದುವರಿದಿದೆ. ಹೀಗಾಗಿ ಕಮಲಾಕರ್ ಭಟ್ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.



