ಹಗರಿಬೊಮ್ಮನಹಳ್ಳಿ: ಪಟ್ಟಣದ ಶ್ರೀ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜು 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 98.28ರಷ್ಟು ಫಲಿತಾಂಶ ದಾಖಲಿಸಿ ವಿಜಯನಗರ ಜಿಲ್ಲೆಯಲ್ಲಿ ಭರ್ಜರಿ ಸಾಧನೆ ಮಾಡಿದೆ.
ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಭಾರ್ಗವಿ ಬೇವಿನಮರ 600 ಅಂಕಗಳಿಗೆ 592 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ರೂಪಶ್ರೀ ಎಸ್ 591 ಅಂಕಗಳೊಂದಿಗೆ ದ್ವಿತೀಯ ಸ್ಥಾನ, ಹರ್ಷಲಾ ಪ್ರೀತಿ 588 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ. ಇನ್ನೂ 7 ವಿದ್ಯಾರ್ಥಿಗಳು 580ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಕಾಲೇಜಿನ ಒಟ್ಟು 582 ವಿದ್ಯಾರ್ಥಿಗಳಲ್ಲಿ 283 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 266 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಒಟ್ಟಾರೆ ಅತ್ಯುತ್ತಮ ಫಲಿತಾಂಶ ಸಾಧಿಸಲಾಗಿದೆ.
ರಾಜ್ಯ ಮಟ್ಟದಲ್ಲಿ ಸರಾಸರಿ ಫಲಿತಾಂಶ ಸುಮಾರು 86% ಇದ್ದ ಸಂದರ್ಭದಲ್ಲಿ ವಿದ್ಯಾನಿಕೇತನ ಕಾಲೇಜಿನ ಈ ಸಾಧನೆ ವಿಶೇಷ ಗಮನ ಸೆಳೆದಿದೆ. ಹೆಚ್ಚಿನ ವಿದ್ಯಾರ್ಥಿಗಳು ಉನ್ನತ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದು, ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
ವಿದ್ಯಾನಿಕೇತನ ಕಾಲೇಜಿನ ಈ ಸಾಧನೆ ಶಿಕ್ಷಣ ಕ್ಷೇತ್ರದಲ್ಲಿ ಹೆಮ್ಮೆಯ ವಿಷಯವಾಗಿದ್ದು, ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ. ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು, ಪೋಷಕರು ಹಾಗೂ ಸಾರ್ವಜನಿಕರು ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದ್ದಾರೆ.
ಈ ಸಾಧನೆ ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಸಮರ್ಪಿತ ಬೋಧನೆ ಹಾಗೂ ಪೋಷಕರ ಸಹಕಾರದ ಫಲವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡಲು ನಾವು ಬದ್ಧರಾಗಿದ್ದೇವೆ ಎಂದು ಚೇರ್ಮನ್ ಶರತ್ ಚಂದ್ರ ಹೇಳಿದ್ದಾರೆ.
ಕಾಲೇಜಿನ ಪ್ರಿನ್ಸಿಪಾಲರಾದ ಶೇಖರ್, ಉಪನ್ಯಾಸಕರು ಹಾಗೂ ಆಡಳಿತ ಮಂಡಳಿ ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿ, ಭವಿಷ್ಯದಲ್ಲೂ ಇದೇ ರೀತಿಯ ಶ್ರೇಷ್ಠ ಫಲಿತಾಂಶ ಮುಂದುವರಿಯಲಿ ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.



