ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಚುನಾವಣಾ ಆಯುಕ್ತರಾದ ಸಂಗ್ರೇಶಿ ಅವರು ಶುಕ್ರವಾರ ಗದಗ ಜಿಲ್ಲೆಯ ಹುಲಕೋಟಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ನೂತನ ಕಟ್ಟಡವನ್ನು ವೀಕ್ಷಿಸಿದರು.
ಹುಲಕೋಟಿಯಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ಪಂಚಾಯಿತಿ ಕಟ್ಟಡವು ದೇಶದಲ್ಲಿಯೇ ಮಾದರಿಯಾಗಿದೆ. ಸ್ಥಳೀಯ ಆಡಳಿತ ಕೈಗೊಳ್ಳಲು ಈ ರೀತಿಯ ಮಾದರಿ ಕಟ್ಟಡ ನಿರ್ಮಾಣ ಅತ್ಯಗತ್ಯವಾಗಿದೆ. ಈ ಮಾದರಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಿಸಲು ಶ್ರಮಿಸಿದ ಪ್ರತಿಯೊಬ್ಬರೂ ಅಭಿನಂದನೆಗೆ ಅರ್ಹರು ಎಂದು ಪ್ರಶಂಸೆ ವ್ಯಕ್ತ ಪಡಿಸಿದರು.
ಗ್ರಾಮ ಪಂಚಾಯಿತಿಯಲ್ಲಿರುವ ಪ್ರತ್ಯೇಕ ಸಭಾ ಭವನ, ಅಧ್ಯಕ್ಷ-ಆಡಳಿತ ವರ್ಗದವರ ಕಾರ್ಯಾಲಯಗಳು ಸುಂದರವಾಗಿದ್ದು, ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಕುಳಿತರೆ ಪ್ರವಾಸಿ ಸ್ಥಳದಲ್ಲಿ ಕುಳಿತಂತಹ ಭಾವನೆ ಬರುತ್ತದೆ ಎಂದು ಸಂತೋಷ ವ್ಯಕ್ತಪಡಿಸಿದರು.
ಗ್ರಾಮ ಆಡಳಿತ ಸುಭದ್ರವಾಗಿ ನಡೆದರೆ ದೇಶ ಅಭಿವೃದ್ಧಿ ಹೊಂದುತ್ತದೆ. ಹಾಗಾಗಿ ಪ್ರತಿ ಗ್ರಾಮ ಪಂಚಾಯಿತಿಯೂ ಹುಲಕೋಟಿಯಂತಹ ಕಟ್ಟಡ ಹೊಂದಿದರೆ ಗ್ರಾಮ ಆಕರ್ಷಕವಾಗಿರುತ್ತದೆ ಎಂದು ನುಡಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಗದಗ ತಾಲೂಕಾ ತಹಸೀಲ್ದಾರ ಶ್ರೀನಿವಾಸ ಕುಲಕರ್ಣಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.