ವಿಜಯಸಾಕ್ಷಿ ಸುದ್ದಿ, ಗದಗ
ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಲ್ಲಾಪುರ ಉಪವಿಭಾಗದ ಎಂ.ಆರ್.ಬಿ.ಸಿ. ಜೆ.ಇ. ಮಹೇಶ ರಮಾವತ ಅವರು ಚುನಾವಣಾ ಕರ್ತವ್ಯ ನಿರ್ವಹಣೆಯಲ್ಲಿ ನಿಷ್ಕಾಳಜಿ ತೋರಿ, ಕರ್ತವ್ಯಲೋಪ ಮಾಡಿರುವ ಹಿನ್ನಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಸರಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್. ಆದೇಶ ಹೊರಡಿಸಿದ್ದಾರೆ.
ಮಹೇಶ ರಮಾವತ ಅವರನ್ನು 67-ರೋಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗಜೇಂದ್ರಗಡ ತಾಲೂಕಿನ ಗಜೇಂದ್ರಗಡ-ರೋಣ ರಸ್ತೆ, ಪುರ್ತಗೇರಿ ಕ್ರಾಸ್ ಚೆಕ್ ಪೋಸ್ಟನಲ್ಲಿ ತನಿಖಾ ಕಾರ್ಯವನ್ನು ನಿರ್ವಹಿಸಲು ಆದೇಶಿಸಲಾಗಿತ್ತು.
ಸದರಿಯವರು ನಿಗದಿತ ಆದೇಶದಂತೆ ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾಗಿ ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ತೋರಿಸಿದರ ಹಿನ್ನೆಲೆಯಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 134ರ ಉಲ್ಲಂಘನೆ ಮಾಡಿದ ಮಹೇಶ ರಮಾವತ ಅವರನ್ನು ಸರಕಾರಿ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ.
ಅಮಾನತ್ತು ಅವಧಿಯಲ್ಲಿ ತಮ್ಮ ಕಚೇರಿ ಮುಖ್ಯಸ್ಥರ ಅನುಮತಿ ಇಲ್ಲದೆ ಕೇಂದ್ರಸ್ಥಾನ ಬಿಡಬಾರದೆಂದು ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಚುನಾವಣಾಧಿಕಾರಿ ವೈಶಾಲಿ ಎಂ.ಎಲ್ ಆದೇಶದಲ್ಲಿ ತಿಳಿಸಿದ್ದಾರೆ.